ಬೆಂಗಳೂರು,ಜ.10:
ರಾಜ್ಯ ಸರಕಾರದ ವಿರುದ್ಧ ತಾವು ಮಾಡಿರುವ ಶೇ.60 ಕಮೀಷನ್ ಆರೋಪ ಪುನರುಚ್ಚರಿಸಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಎಂದು ಆಪಾದಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಬೆಂಗಳೂರು ಎಂ.ಸಿ. ಪೋಸ್ಟ್ ಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ? ಎಷ್ಟು ರೇಟ್ ಫಿಕ್ಸ್ ಮಾಡಿಕೊಂಡಿದ್ದೀರಾ? ಆ ಹಣ ಯಾರು ಯಾರಿಗೆ ಹೋಗುತ್ತದೆ? ಏನೇನು ದಂಧೆ ನಡೆಸುತ್ತಿದ್ದೀರಿ ಎನ್ನುವುದು ನಮಗೆ ಗೊತ್ತಿಲ್ಲವಾ? ಕೃಷ್ಣ ಬೈರೇಗೌಡ ಅವರೇ ಎಂದು ಪ್ರಶ್ನಿಸಿದರು.
ಮಗ ಸೋತಿರುವುದಕ್ಕೆ ಹತಾಶರಾಗಿ ಕುಮಾರಸ್ವಾಮಿ 60% ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ನಾನು ಮಗ ಸೋತಿರುವುದಕ್ಕೆ ಹತಾಶನಾಗಿದ್ದೇನೋ ಇಲ್ಲವೋ. ಎಂಬುದ್ಧು ಇರಲಿ. ಅದನ್ನು ಬಿಟ್ಟು ಮೊದಲು 60% ಕಮೀಷನ್ ಬಗ್ಗೆ ಉತ್ತರ ಹೇಳಲಿ ಎಂದು ಸವಾಲು ಹಾಕಿದರು.
ಕಂದಾಯ ಇಲಾಖೆ ಸತ್ಯ ಮಾರ್ಗದಲ್ಲಿ ನಡೆಯುತ್ತಿದೆಯಾ? 60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ ಅವರು ಯಾಕೆ ಆರೋಪ ಮಾಡುತ್ತಿದ್ದರು. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಬೇಕು ಎಂದರು
ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ ಜನರ ಮುಂದೆ. ಕೆಂಪಣ್ಣ ಹೇಳಿದರು ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೆಂಪಣ್ಣ ಅವರಿಂದ ಸಿದ್ದರಾಮಯ್ಯ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಈಗ ಕಂಟ್ರಾಕ್ಟರ್ ಗಳೇ 60% ವಸೂಲಿ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅದಕ್ಕಿಂತ ಸಾಕ್ಷಿ ಬೇಕಾ ಇವರಿಗೆ? ಎಂದು ವಾಗ್ದಾಳಿ ನಡೆಸಿದರು.
ನಾನು ಕೂಡ ಎರಡು ಸಿಎಂ ಆಗಿ ಅಧಿಕಾರ ನಡೆಸಿದ್ದೇನೆ. ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ವಿಧಾನಸಭೆಯಲ್ಲಿಯೇ ಈ ಮಾತು ಹೇಳಿದ್ದೇನೆ. ಚುನಾವಣೆ ನಡೆಸಬೇಕಾದರೆ ಇನ್ನೊಬ್ಬರ ಹತ್ತಿರ ಕೈ ಚಾಚಲೇಬೇಕು. ಆದರೆ ನಾನು ಅಧಿಕಾರ ನಡೆಸುವಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಎಂದು ಆಪಾದಿಸಿದರು
ಪ್ರತಿಯೊಂದಕ್ಕೂ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಈ ಸರಕಾರದಲ್ಲಿ ರೇಟ್ ಕಾರ್ಡ್ ಮೊದಲೇ ಫಿಕ್ಸ್ ಆಗಿ ಹೋಗಿದೆ. ನಾನು ಪ್ರಾರಂಭದಲ್ಲೇ ಈ ಸರ್ಕಾರದ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ ಪ್ರತೀ ಕ್ಷಣವೂ ಈ ಸರಕಾರದಲ್ಲಿ ಮಾರಾಟ ನಡೆಯುತ್ತಿದೆ ಎಂದು ದೂರಿದರು.
Previous Articleಸಿದ್ದರಾಮಯ್ಯ ನಂತರ ಸಿಎಂ ಯಾರು ಗೊತ್ತಾ
Next Article SSLC, ಮತ್ತು PUC ಪರೀಕ್ಷೆ ವೇಳಾಪಟ್ಟಿ