ಬೆಂಗಳೂರು,ಜೂ.7:
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಮ್ಮ ಜವಾಬ್ದಾರಿ ಎಂದು ಹೇಳಿ ನೀವು ಹೇಳಿದವರಿಗೆ ಟಿಕೆಟ್ ನೀಡಲಾಗಿತ್ತಾದರೂ ನಮ್ಮ ಅಭ್ಯರ್ಥಿಗಳು ಯಾಕೆ ಸೋಲು ಕಂಡರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ತಮ್ಮ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನ ನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ್ದ ಅವರು ರಾಜ್ಯದ ನೂತನ ಸಂಸದರು ಪರಾಜಿತ ಅಭ್ಯರ್ಥಿಗಳು ಮತ್ತು ಪ್ರಮುಖ ಸಚಿವರೊಂದಿಗೆ ಸಭೆ ನಡೆಸಿದರು.
ರಾಜ್ಯದಲ್ಲಿ ಒಂಬತ್ತು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ನಮ್ಮ ವರದಿಗಳ ಪ್ರಕಾರ ಕನಿಷ್ಠ 20 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಆದರೆ ಈ ಗುರಿಯನ್ನು ಯಾಕೆ ಮುಟ್ಟಲಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಂತ್ರಿಗಳ ಜೊತೆ ಪ್ರತ್ಯೇಕವಾಗಿ ಮಾತನಾಡಿದ ಅವರು, ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲೆ ಇತ್ತು. ಆದರೂ ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ನಿಮ್ಮ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ತಿಳಿಸಿ ಎಂದ ಅವರು ಮುಂದಿನ ದಿನಗಳಲ್ಲಿ ಹೀಗೆ ಆಗದಂತೆ ನೋಡಿಕೊಳ್ಳಿ ಎಂದರು. ಇದೇ ವೇಳೆ, ರಾಜ್ಯದಲ್ಲಿ ಪಂಚ ಗ್ಯಾರಂಟಿ ನೀಡಿದರೂ ಸೋಲಿಗೆ ಕಾರಣವೇನು. ಎಲ್ಲಿ ತಪ್ಪಾಗಿದೆ ಎಂಬ ಕುರಿತು ಸೋಲಿನ ಬಗ್ಗೆ ವಿಧಾನ ಸಭಾವಾರು ವರದಿ ನೀಡುವಂತೆ ಸೂಚಿಸಿದರು ಎಂದು ಗೊತ್ತಾಗಿದೆ.
ಇದಾದ ಬಳಿಕ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳನ್ನು ವೈಯಕ್ತಿಕವಾಗಿ ಪರಿಚಯಿಸಿಕೊಂಡು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಪರಾಜಿತ ಅಭ್ಯರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ನಮ್ಮ ನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಬಂದಿದೆ. ಆದರೂ, ನಮ್ಮ ವೋಟ್ ಶೇರ್ ಹೆಚ್ಚಿದೆ. ಜೊತೆಗೆ ಮೋದಿ ಅವರ ಗೆಲುವಿನ ಓಟಕ್ಕೆ ತಡೆ ಹಾಕಿದ್ದೇವೆ. ಸಂವಿಧಾನದ ರಕ್ಷಣೆ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ. ಹಾಗಾಗಿ ಸೋಲಿನಿಂದ ಧೃತಿಗೆಡಬೇಡಿ. ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಹುರಿದುಂಬಿಸಿದರು.
Previous Articleಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.
Next Article ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.