ಬೆಂಗಳೂರು,ಜು.15-
ಶಿಕ್ಷಣ ನೀಡುವ ಗುರುವನ್ನು ನಮ್ಮ ಸಮಾಜ ದೇವರ ಪ್ರತಿರೂಪ ಎಂಬಂತೆ ಪೂಜನೀಯ ಸ್ಥಾನವನ್ನು ನೀಡಿದೆ.ತನ್ನ ಗುರು ಕೂಡ ಹೀಗೆ ಎಂದು ನಂಬಿದ ವಿದ್ಯಾರ್ಥಿನಿಯನ್ನು ಆಕೆಯ ಉಪನ್ಯಾಸಕರು ವಿಕೃತ ಕಾಮಿಯಂತೆ ಬಳಸಿಕೊಂಡು ಪೊಲೀಸರ ಅತಿಥಿಯಾಗಿದ್ದಾನೆ.
ಉಪನ್ಯಾಸಕರು ಮಾತ್ರವಲ್ಲದೆ ಆತನ ಇಬ್ಬರು ಸ್ನೇಹಿತರು ಕೂಡಾ ವಿದ್ಯಾರ್ಥಿನಿಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾರೆ.
ವಿದ್ಯಾರ್ಥಿನಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ ನಡೆಸಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ಸೇರಿ ಮೂವರು ಕಾಮುಕರನ್ನು ಬೆಂಗಳೂರಿನ ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆಯ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ,ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಬಂಧಿತ ಆರೋಪಿಗಳಾಗಿದ್ದಾರೆ.
ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರದ ಪರಿಚಯವಾಗಿ ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ.
ಈ ನಡುವೆ ವಿದ್ಯಾರ್ಥಿನಿ ಬೆಂಗಳೂರಿಗೆ ಬಂದಿದ್ದಾರೆ ಆನಂತರವೂ ಈ ಉಪನ್ಯಾಸಕ ಆಕೆಯ ಜೊತೆ ಪಾಠ ಪ್ರವಚನ ಕುರಿತು ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ.
ಅದೇ ನೆಪದಲ್ಲಿ ಬೆಂಗಳೂರಿಗೆ ಬಂದು ಆಕೆಯನ್ನು ಮಾರತಹಳ್ಳಿಯ ಗೆಳೆಯನ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.
ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಮತ್ತೊಬ್ಬ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ.
ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.
ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.
ಮಹಿಳಾ ಆಯೋಗದ ಮಾಹಿತಿ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.