ಬೆಂಗಳೂರು,ಆ.27-
ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬಾಕಿ ಇರುವ ಹಣವನ್ನು ಈ ಮಾಸಾಂತ್ಯದೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿವಿಧ ತಾಂತ್ರಿಕ ಕಾರಣಗಳಿಗಾಗಿ ಹಣ ತಲುಪುತ್ತಿರಲಿಲ್ಲ. ಅದನ್ನು ಸರಿಪಡಿಸಲಾಗಿದೆ ಎಂದು ಹೇಳಿದರು.ದಖ
ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 1.58 ಕೋಟಿ ಕುಟುಂಬಗಳಿವೆ. ಅವುಗಳ ಪೈಕಿ 1.23 ಕೋಟಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆ ಯನ್ನು ಜಾರಿಗೊಳಿಸಲಾಗಿದೆ.ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ ಎಂದರು.
ಇನ್ನು 27 ಲಕ್ಷ ಕುಟುಂಬಗಳು ಯೋಜನೆಯಿಂದ ಹೊರಗಿವೆ. ಬಹುತೇಕ ಅವರಲ್ಲಿ ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿದಾರರು ಇರಬಹುದು ಅಥವಾ ಯೋಜನೆಯ ಸೌಲಭ್ಯ ತಮಗೆ ಬೇಡ ಎಂದು ನಿರಾಕರಿಸಿರಲೂ ಬಹುದು ಎಂದು ಹೇಳಿದರು.
ಈಗಲೂ ವೆಬ್ಸೈಟ್ ಮುಕ್ತವಾಗಿದ್ದು, ಆದಾಯ ತೆರಿಗೆ ಜಿಎಸ್ಟಿ ಪಾವತಿ ಮಾಡದೇ ಇರುವವರು ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಆಧಾರ್ ಸಂಖ್ಯೆಯನ್ನು ನಮೂದಿಸುತ್ತಿದ್ದಂತೆ ಸ್ಪಷ್ಟ ಮಾಹಿತಿಗಳು ಲಭ್ಯವಾಗುತ್ತವೆ ಎಂದು ತಿಳಿಸಿದರು.