ಬೆಂಗಳೂರು,ಆ.29:
ಚಿತ್ರದುರ್ಗ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ ಜೈಲಿನಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ.
ಕೋರ್ಟ್ ಆದೇಶದಂತೆ ಜೈಲು ಅಧಿಕಾರಿಗಳು ಸಿನಿಮೀಯ ಮಾದರಿಯಲ್ಲಿಯೇ ಎಂದು ಮುಂಜಾನೆ ದರ್ಶನ್ ಅವರನ್ನು ಅತ್ಯಂತ ಬಿಗಿ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಿದರು.
ನಟ ದರ್ಶನ್ ವರ್ಗಾವಣೆ ಬಗ್ಗೆ ಯಾವುದೇ ಮಾಹಿತಿ ಬಹಿರಂಗಪಡಿಸದ ಅಧಿಕಾರಿಗಳು ಅಭಿಮಾನಿಗಳು ಮತ್ತು ಮಾಧ್ಯಮದವರ ಕಣ್ಣು ತಪ್ಪಿಸಿ ಬೆಳಕು ಹರಿಯುವುದರೊಳಗೆ ಬಳ್ಳಾರಿಯ ಕೇಂದ್ರ ಕಾರಾಗೃಹ ತಲುಪಿಸುವಲ್ಲಿ ಯಶಸ್ವಿಯಾದರು.
ವಿವಾದ:
ಇಷ್ಟೆಲ್ಲಾ ಮುಂಜಾಗ್ರತೆ ವಹಿಸಿದರು ಈ ವರ್ಗಾವಣೆ ಪ್ರಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ದರ್ಶನ್ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಬರುವ ವೇಳೆ ಕೂಲಿಂಗ್ ಗ್ಲಾಸ್ ಧರಿಸಿದ್ದರು ಎಂಬ ಅಂಶ ಇದೀಗ ಹೊಸ ವಿವಾದ ಸೃಷ್ಟಿಸಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರವಲಯ ಡಿಐಜಿ ಟಿ.ಪಿ.ಶೇಷ ಅವರು
ಕೊಲೆ ಆರೋಪಿ, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕರೆತಂದ ಸಂದರ್ಭದಲ್ಲಿ ಆರೋಪಿ ಕೂಲಿಂಗ್ ಗ್ಲಾಸ್ ಧರಿಸಲು ಅವಕಾಶ ಕೊಟ್ಟ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ
ಈ ಸಂಬಂಧ ಬಂದಿಖಾನೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ವರದಿ ನೀಡಿದ್ದು
ದರ್ಶನ್ ಅವರನ್ನು ಬಳ್ಳಾರಿ ಜೈಲಿನ ಮುಂದೆ ಕರೆತಂದಾಗ ಅವರು ಕೂಲಿಂಗ್ ಗ್ಲಾಸ್ ಧರಿಸಿದ್ದರು. ಇದು ಜೈಲಿನ ನಿಯಮಗಳಿಗೆ ವಿರುದ್ಧವಾದುದು. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ ವರದಿಗಳು ಬಿತ್ತರವಾಗುತ್ತಿವೆ. ಇದರಿಂದ ಇಲಾಖೆಯ ಘನತೆಗೆ ಧಕ್ಕೆ ಬಂದಿದೆ ಎಂದು ಹೇಳಿದ್ದಾರೆ.
ದರ್ಶನ್ ಒಬ್ಬ ಸೆಲೆಬ್ರಿಟಿ ಆಗಿದ್ದರಿಂದ ಈ ಪ್ರಕರಣದಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕಿತ್ತು. ಈಗಾಗಲೇ ಆರೋಪಿ ಕುರಿತಾಗಿ ಸಣ್ಣ ಸಣ್ಣ ತಪ್ಪುಗಳು ಕೂಡ ದೊಡ್ಡ ಸುದ್ದಿಗಳಾಗುತ್ತಿವೆ. ಯಾವುದೇ ಅಣ್ಣ ತಪ್ಪೂ ಆಗದಂತೆ ಎಚ್ಚರಿಕೆ ವಹಿಸಬೇಕಾಗಿತ್ತು. ಆದರೆ, ಬೆಂಗಳೂರಿನಿಂದ ಆರೋಪಿಯನ್ನು ಕರೆತಂದ ಬೆಂಗಾವಲು ಅಧಿಕಾರಿ, ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಎಂದೂ ಅವರು ಪತ್ರದಲ್ಲಿ ತಿಳಿಸಿದ್ದಾರೆ
ಬಿಗಿ ಭದ್ರತೆ:
ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಬೇಕು.ಆ ಕೊಠಡಿಗೆ 24×7 ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇರಿಸಬೇಕು. ಪ್ರತಿನಿತ್ಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಶೇಖರಿಸಬೇಕು.ಸೆಲ್ನ ಕರ್ತವ್ಯಕ್ಕೆ ಪ್ರತ್ಯೇಕವಾಗಿ ಒಬ್ಬ ಮುಖ್ಯವೀಕ್ಷಕ ಅಧಿಕಾರಿ ನಿಯೋಜಿಸಬೇಕು ಎಂದು ತಿಳಿಸಲಾಗಿದೆ.
ದರ್ಶನ್ ಅವರಿಗೆ ಸಾಮಾನ್ಯ ಬಂದಿಗೆ ಕೊಡುವ ಸೌಲಭ್ಯ ಮಾತ್ರ ನೀಡಬೇಕು. ಬೇರೆ ಕೈದಿಗಳ ಜೊತೆಗೆ ದರ್ಶನ್ ಬೆರೆಯವಂತಿಲ್ಲ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಉತ್ತರವಲಯ ಡಿಐಜಿ ಟಿ.ಪಿ.ಶೇಷ ಅವರು ಜೈಲಿನ ಸೂಪರಿಂಟೆಂಡೆಂಟ್ ಜ್ಞಾಪನಾ ಪತ್ರ ಬರೆದಿದ್ದಾರೆ.
ಇದರ ಮೇಲೆ ನಿಗಾವಹಿಸಲು ಅಧಿಕಾರಿಗಳು ದಿಢೀರ್ ಭೇಟಿ ಮಾಡಬೇಕು. ಪ್ರತಿನಿತ್ಯ ಜೈಲರ್ ಭೇಟಿ ನೀಡಿ ಭದ್ರತೆ ಪರಿಶೀಲಿಸಬೇಕು. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಬೀಗ ಹಾಕಬೇಕು ಮತ್ತು ಬೀಗ ತೆರೆಯಬೇಕು.
ಕಾರಾಗೃಹ ಸುತ್ತಲೂ ಸೂಕ್ತ ಭದ್ರತೆ ಒದಗಿಸಬೇಕು’ ಎಂದೂ ಸೂಚಿಸಿದ್ದಾರೆ.
ದರ್ಶನ್ ಭೇಟಿಗೆ ಅವರ ಪತ್ನಿ, ರಕ್ತಸಂಬಂಧಿ, ವಕಾಲತ್ತು ವಹಿಸಿದ ವಕೀಲರ ಭೇಟಿಗೆ ಮಾತ್ರ ಅವಕಾಶ ನೀಡಬೇಕು. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ನಾಯಕರ ಭೇಟಿಗೆ ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.
Previous Articleಸಿದ್ದರಾಮಯ್ಯ ಕೇಸ್ ಮುಂದೂಡಿಕೆ.
Next Article ರಜನಿಕಾಂತ್ ಜೊತೆ ರಚಿತಾ ರಾಮ್ ನಟನೆ.
