ಬೆಂಗಳೂರು: ಅಮವಾಸ್ಯೆ ದಿನದಂದು ಬಿಜೆಪಿ ಹೈಕಮಾಂಡ್ ಒಳ್ಳೆಯ ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10 ರಿಂದ12 ಸೀಟ್ ಖಾಲಿ ಆಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಪಕ್ಷದಿಂದ ನಮ್ಮನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದರೆ ಯಾವಾಗ ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ. 6 ವರ್ಷಗಳ ಕಾಲ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಾರೆ. ನೋಟೀಸ್ ಕೊಡುವ ಮುನ್ನ ಅಮಿತ್ ಶಾ ನನ್ನ ಜತೆ ಮಾತಾಡಿದ್ದರು.
ಕ್ಷೇತ್ರದಲ್ಲಿರುವ ಭಿನ್ನಮತದ ಬಗ್ಗೆ ಅವರ ತಿಳಿಸಿ ಸಮಸ್ಯೆ ಬಗೆಹರಿಸದಿದ್ದರೆ ಪಕ್ಷ ತೊರೆಯುವುದಾಗಿ ನಾನು ಹೇಳಿದ್ದೆ. ಬಿಜೆಪಿಯ ಯಾರೂ ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಲಿಲ್ಲ. ಅಮಾವಾಸ್ಯೆಯ ದಿನ ಒಳ್ಳೆಯದು ಮಾಡಿದ್ದಾರೆ. ಸಂತೋಷವಾಗಿದ್ದೇನೆ ಎಂದು ಹೇಳಿದರು.
ಉಚ್ಚಾಟನೆಗೂ ಮುನ್ನ ಶಿಸ್ತು ಸಮಿತಿಯಿಂದ ನೋಟೀಸ್ ನೀಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ನೋಟೀಸ್ ಗೆ ಉತ್ತರಿಸಿದ್ದೆ. ಬಿಜೆಪಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಸದ್ಯಕ್ಕೆ ನಮ್ಮ ಕೆಲಸವನ್ನು ನಾವು ಮಾಡಿಕೊಂಡು ಹೋಗುತ್ತೇವೆ. ಚುನಾವಣೆ ಘೋಷಣೆಯಾದಾಗ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಯತ್ನಾಳ್ ರನ್ನು ಅಂದೇ ಉಚ್ಚಾಟಿಸಿದ್ದರೆ ಬಿಜೆಪಿ ಸರ್ಕಾರ ಹೋಗುತ್ತಿರಲಿಲ್ಲ
ಉಚ್ಚಾಟನೆ ಮಾಡಿದವರಿಗೆ ಚಾಮುಂಡೇಶ್ವರಿ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ. ನಮ್ಮ ಉಚ್ಚಾಟನೆಗೂ, ಯತ್ನಾಳ್ ಉಚ್ಚಾಟನೆಗೂ ತುಂಬಾ ವ್ಯತ್ಯಾಸವಿದೆ. ಬಿಜೆಪಿಯ ಒಬ್ಬ ಶಾಸಕ ವಿಧಾನಸೌಧದಲ್ಲಿ ರೇಪ್ ಮಾಡುತ್ತಾನೆ. ವಿಪಕ್ಷ ನಾಯಕರಿಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಪ್ರಯತ್ನ ಮಾಡುತ್ತಾರೆ. ಒಕ್ಕಲಿಗ ಹೆಣ್ಮಗಳನ್ನು ಮಂಚಕ್ಕೆ ಕರೆಯುವುದನ್ನು ಎಲ್ಲಾದರೂ ಕೇಳಿದ್ದೀರಾ? ಬಿಜೆಪಿ ಪ್ರಾಮಾಣಿಕ ಆಗಿದ್ದರೆ ಇಂತಹವರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಪರೋಕ್ಷವಾಗಿ ಶಾಸಕ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು.
ಉಚ್ಚಾಟನೆ ತಪ್ಪಿಸಲು ಬಿಎಸ್ವೈ, ವಿಜಯೇಂದ್ರ ಅಲ್ಲದೇ ಉಳಿದ ನಾಯಕರೂ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ನಾನಾಗಿ ಹೋಗಿ ಮೇಲೆ ಬಿದ್ದು ಕೇಳುವ ಮನಸ್ಸು ನನ್ನದಲ್ಲ. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉಳಿಸಿಕೊಳ್ಳುವ ಪ್ರಯತ್ನ ಮಾಡ್ಲಿಲ್ಲ. ಇಬ್ಬರೂ ಕೂಡ 100% ನನ್ನ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ಅವರು ಪ್ರಯತ್ನ ಮಾಡಿದ್ದರೆ ಇಂದು ನಾನು ಉಚ್ಚಾಟನೆ ಆಗುತ್ತಿರಲಿಲ್ಲ ಎಂದರು.
ನನ್ನನ್ನು ಬೆಳೆಸಿದ್ದು ಡಿಕೆಶಿ:
ಡಿಕೆ ಶಿವಕುಮಾರ್ ನನ್ನನ್ನು ರಾಜಕೀಯವಾಗಿ ಬೆಳೆಸಿದವರು. ಸಹಕಾರ ಕ್ಷೇತ್ರದಲ್ಲಿ ನಾನು ಬೆಳೆಯಲು ಡಿ.ಕೆ.ಶಿವಕುಮಾರ್ ಕಾರಣ. ಉತ್ತರಹಳ್ಳಿ ಟಿಕೆಟ್ ಸಿಗಲು ಡಿ.ಕೆ.ಶಿವಕುಮಾರ್ ಅವರೇ ಕಾರಣ. ಖರ್ಗೆ, ಪರಮೇಶ್ವರ್ ಯಶವಂತಪುರ ಕ್ಷೇತ್ರದ ಟಿಕೆಟ್ ಕೊಡಿಸಿದರು.
ಹಿಂದೆ ಕಾಂಗ್ರೆಸ್ನಲ್ಲಿದ್ದ ಕಾರಣಕ್ಕೆ ಅನುದಾನ ಕೇಳುವ ಕೆಲಸ ಮಾಡಿದೆ. ಅದರಿಂದಾಗಿ ಇವರು ಪಕ್ಷಕ್ಕೆ ಮುಜುಗರ ಆಗುತ್ತೆ ಎನ್ನುವುದಾದರೆ ರೇಪ್, ಏಡ್ಸ್ ಇಂಜೆಕ್ಷನ್ ಯಾವುದೂ ಮುಜುಗರ ಅಲ್ಲವೇ? ಕ್ಷೇತ್ರದ ವಿಚಾರ ಸರಿಪಡಿಸದಿದ್ದರೆ ಪಕ್ಷದಲ್ಲಿ ಮುಂದುವರಿಯಲ್ಲ ಎಂದಿದ್ದೆ. ಅಮಿತ್ ಶಾ ನನ್ನ ಜೊತೆ ಮಾತನಾಡಿದ್ದಾಗ ಈ ಬಗ್ಗೆ ಹೇಳಿದ್ದೆ ಎಂದು ಹೇಳಿದರು.ಯ
Previous Articleರಾಜ್ಯಪಾಲರಿಗೆ ಸರ್ಕಾರದ ಮೊರೆ
Next Article ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
