ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಸಮರ್ಥ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ವಿಷಾದಿಸಿದ್ದಾರೆ.
ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದಿದ್ದಾರೆ.
ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.
Previous Articleಹುಷಾರ್…! ಎಚ್ಚರಿಕೆಯಿಂದ ಇರಿ
Next Article ವಿಕ್ರಾಂತ್ ರೋಣ ಮೊದಲ ದಿನದ ಕಲೆಕ್ಷನ್ ಎಷ್ಟು?