ಬೆಂಗಳೂರು,ಫೆ.24- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಮತದಾರರ ಓಲೈಕೆಗಾಗಿ ನಾನಾ ರೀತಿಯ ಕಸರತ್ತು ಆರಂಭಿಸಿದೆ.
ಪ್ರಣಾಳಿಕೆ ಪ್ರಕಣೆಗೂ ಮುನ್ನವೇ ಹಲವು ಭರವಸೆ ನೀಡುತ್ತಿರುವ ಕಾಂಗ್ರೆಸ್ ನಾಯಕರು ಇದೀಗ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಕುಟುಂಬಗಳ ಪ್ರತೀ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದರು.
ಈಗಾಗಲೆ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ನೆರವು ಹಾಗೂ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಪೂರೈಸುವ ‘ಗ್ಯಾರಂಟಿ’ ಭರವಸೆಗಳನ್ನು ಪ್ರಕಟಿಸಿದೆ.
ಈಗ ಮೂರನೇ ‘ಗ್ಯಾರಂಟಿ’ ಭರವಸೆಯಾಗಿ ತಲಾ 10 ಕೆ.ಜಿ. ಅಕ್ಕಿಯ ಭರವಸೆಯನ್ನು ಪ್ರಕಟಿಸಿದೆ.
ಈ ವೇಳೆ ಮಾತನಾಡಿದ
ಸಿದ್ದರಾಮಯ್ಯ ಹಿಂದಿನ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೊಳಿಸಿದ ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಪ್ರತೀ ಕೆ.ಜಿ.ಗೆ 3 ರೂಪಾಯಿ ದರದಲ್ಲಿ ಅಕ್ಕಿ ಒದಗಿಸುತ್ತಿತ್ತು. 2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಬಿಪಿಎಲ್ ಕುಟುಂಬಗಳಿಗೆ ಪ್ರತೀ ಕೆ.ಜಿ.ಗೆ 1ರೂಪಾಯಿ ದರದಲ್ಲಿ 30 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿತ್ತು. ನಂತರ ಉಚಿತವಾಗಿ ಪ್ರತಿ ಸದಸ್ಯರಿಗೆ ತಲಾ 7 ಕೆ.ಜಿ. ವಿತರಿಸಲಾಗುತ್ತಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅದನ್ನು 5 ಕೆ.ಜಿ.ಗೆ ಇಳಿಸಿದೆ’ ಎಂದು ಆಪಾದಿಸಿದರು.
ಈಗ ಅಕ್ಕಿ ವಿತರಣೆಗೆ 4,000 ಕೋಟಿಯಿಂದ 5,000 ಕೋಟಿಯವರೆಗೆ ವೆಚ್ಚವಾಗುತ್ತಿದೆ. ತಲಾ 10 ಕೆ.ಜಿ. ವಿತರಿಸಿದರೆ ಇನ್ನೂ 4,000 ಕೋಟಿ ಹೆಚ್ಚಿನ ವೆಚ್ಚವಾಗಬಹುದು. ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂಬುದು ಕಾಂಗ್ರೆಸ್ ಪಕ್ಷದ ಉದ್ದೇಶ’ ಎಂದು ಹೇಳಿದರು.
ಇದು ಸಿದ್ದರಾಮಯ್ಯ ಅವರ ಕಾರ್ಯಕ್ರಮ ಅಲ್ಲ, ಮೋದಿಯವರ ಕಾರ್ಯಕ್ರಮ ಎಂದು ಬೊಮ್ಮಾಯಿ ಹೇಳುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದವರು ಮೋದಿಯೆ? ಸುಳ್ಳು ಹೇಳುವುದನ್ನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದಾರೆ. ಅದಕ್ಕಾಗಿಯೇ ಆರ್ಎಸ್ಎಸ್ನವರು ಇವರನ್ನು ಆಯ್ಕೆ ಮಾಡಿಕೊಂಡಿದ್ದಾರೆ’ ಎಂದರು.
ಡಿ.ಕೆ. ಶಿವಕುಮಾರ್ ಮಾತನಾಡಿ, ‘ಅನ್ನಭಾಗ್ಯ ಜನರಿಂದ ಕೋವಿಡ್ ಸಂಕಷ್ಟದ ಕಾಲದಲ್ಲಿ ಜನರಿಗೆ ನೆರವಾಯಿತು. ಈಗ ಅಧಿಕಾರಕ್ಕೆ ಬಂದರೆ ತಲಾ 10 ಕೆ.ಜಿ. ಅಕ್ಕಿ ವಿತರಿಸಲಾಗುವುದು’ ಎಂದು ಹೇಳಿದರು.
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ ಉಳಿತಾಯ ಮಾಡಲು ಸಹಕಾರಿಯಾಗುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನವನ್ನು ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ರಾಜ್ಯವನ್ನು ಹಸಿವು ಮುಕ್ತವನ್ನಾಗಿ ಮಾಡಬೇಕು ಎಂದು ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
Previous Article15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
Next Article ಅಕ್ರಮ ಬಂದೂಕುಗಳ ವಶ


1 ಟಿಪ್ಪಣಿ
mgm casino online bet mgm com betmgm West Virginia