ಕೋಲಾರ, ಅ.24 – ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಶ್ರೀನಿವಾಸ್ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಮೇಲೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ವೇಣುಗೋಪಾಲ್ ಹಾಗೂ ಮನೀಂದ್ರ ಕಾಲಿಗೆ ಗುಂಡೇಟು ತಗುಲಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಕರಣದ ಮತ್ತೊಬ್ಬ ಆರೋಪಿ ಸಂತೋಷ್ಗೂ ಗಾಯಗಳಾಗಿವೆ. ಕೋಲಾರ ಜಿಲ್ಲೆ ವೇಮಗಲ್ ಪೊಲೀಸ್ ಠಾಣಾ ಇನ್ಸ್ ಸ್ಪೆಕ್ಟರ್ ವೆಂಕಟೇಶ್ ಅವರು ಆತ್ಮರಕ್ಷಣೆಗೆ ಹಾರಿಸಿದ ಗುಂಡು ಇಬ್ಬರಿಗೆ ತಗುಲಿ ಗಾಯಗೊಂಡಿದ್ದಾರೆ.
ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಲಕ್ಷ್ಮೀಸಾಗರ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಯಿತು. ಹಲ್ಲೆ ವೇಳೆ ಇನ್ಸ್ಪೆಕ್ಟರ್ ವೆಂಕಟೇಶ್, ಪೊಲೀಸ್ ಸಿಬ್ಬಂದಿ ಮಂಜುನಾಥ್ ಮತ್ತು ನಾಗೇಶ್ ಅವರಿಗೂ ಗಾಯಗಳಾಗಿವೆ. ಗಾಯಾಳುಗಳಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಶ್ರೀನಿವಾಸ್ ಕೊಲೆ ಪ್ರಕರಣದ ಆರೋಪಿಗಳಲ್ಲಿ ಆರು ಜನರ ಪೈಕಿ ಇದುವರೆಗೆ ಮೂರು ಜನ ಪ್ರಮುಖ ಆರೋಪಿಗಳ ಬಂಧನವಾಗಿದೆ. ಸುಪಾರಿ ಪಡೆದು ಕೊಲೆಗೆ ಯತ್ನಿಸಿರುವ ಆರೋಪವಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಮಾಜಿ ಸ್ಟೀಕರ್ ರಮೇಶ್ ಕುಮಾರ್ ಅವರ ಆಪ್ತರಾದ ಶ್ರೀನಿವಾಸ್ ಅವರನ್ನು ದುಷ್ಕರ್ಮಿಗಳು ಭಾನುವಾರ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇವರು ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡ, ಕೌನ್ಸಿಲರ್ ಆಗಿದ್ದರು. ಶ್ರೀನಿವಾಸ್ ಮುಂದಿನ ಲೋಕಸಭಾ ಚುನಾವಣೆ ಆಕಾಂಕ್ಷಿಯಾಗಿದ್ದರು.
ಮುಳಬಾಗಿಲು ರಸ್ತೆಯ ನಿರ್ಮಾಣ ಹಂತದ ರೆಸ್ಟೋರೆಂಟ್ ಬಳಿ ಆರು ಮಂದಿ ದಾಳಿ ಮಾಡಿ ಹಲ್ಲೆ ನಡೆಸಿ ಪರಾರಿಯಾಗಿದ್ದರು. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶ್ರೀನಿವಾಸ್ ಅವರನ್ನು ಕೂಡಲೇ ಆರ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶ್ರೀನಿವಾಸ್ ಮೃತಪಟ್ಟಿದ್ದರು.


1 ಟಿಪ್ಪಣಿ
mgm poker download betmgm WA mgmbet