ಬೆಂಗಳೂರು, ಡಿ. 29: ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಇದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರ ಕನಸಿನ ಕಾರ್ಯಕ್ರಮ.
ತಮ್ಮ ಅಗತ್ಯಗಳಿಗಾಗಿ ಬೆಂಗಳೂರಿನ ನಾಗರೀಕರು ಅಹವಾಲುಗಳನ್ನು ಹಿಡಿದು ಬಿಬಿಎಂಪಿ, ಜಲ ಮಂಡಳಿ, ಬೆಸ್ಕಾಂ,ಬಿಡಿಎ ಮೊದಲಾದ ಕಚೇರಿಗಳಿಗೆ ಎಡತಾಕುವುದು.ಅಧಿಕಾರಿಗಳ ಕಚೇರಿ ಬಾಗಿಲು ಕಾಯುವುದು ಮಾಮೂಲು. ಇಷ್ಟಾದರೂ ಕೆಲವರ ಕೆಲಸ ಆದರೆ,ಆದೀತು ಇಲ್ಲವಾದರೆ ಇಲ್ಲ.ಇದಕ್ಕಾಗಿ ನಾಗರೀಕರು ಪಡುವ ಬವಣೆ ಅಷ್ಟಿಷ್ಟಲ್ಲ.
ಇದನ್ನು ತಪ್ಪಿಸಲು ಇದೀಗ ಡಿ.ಕೆ.ಶಿವಕುಮಾರ್ ಅವರು, ಜನ ಸಾಮಾನ್ಯರು ಅಹವಾಲು ಹಿಡಿದು
ನಮ್ಮ ಮನೆವರೆಗೂ ತರುವುದನ್ನು ತಪ್ಪಿಸಿ, ಸರ್ಕಾರವೇ ಅವರ ಬಳಿಗೆ ಹೋಗಿ ಅವರ ಸಮಸ್ಯೆ ಆಲಿಸಲು ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜನವರಿ 3 ರಿಂದ ತಿಂಗಳಾಂತ್ಯದವರೆಗೂ 10 ದಿನಗಳ ಕಾಲ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನ ಎರಡು ಮೂರು ವಿಧಾನಸಭಾ ಕ್ಷೇತ್ರಗಳ ಜನರ ಅಹವಾಲು ಆಲಿಸಲಾಗುವುದು.
ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಕಂದಾಯ ಇಲಾಖೆಯ ಖಾತೆ ಸಮಸ್ಯೆ, ನಮ್ಮ ಇಲಾಖೆ ಹಾಗೂ ಸರ್ಕಾರದ ಐದು ಗ್ಯಾರಂಟಿ ಸೇರಿದಂತೆ ಜನರ ಸಮಸ್ಯೆಗಳ ವಿಚಾರವಾಗಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ನಾಗರೀಗರು ತಮ್ಮ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಜನರು ಅಹವಾಲು ಹಿಡಿದು ಮಂತ್ರಿ,ಉಪ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಗಳ ಬಳಿ ಪ್ರತಿನಿತ್ಯ ಬರುತ್ತಾರೆ. ಇದನ್ನು ಕಡಿಮೆ ಮಾಡಲು ಈ ಕಾರ್ಯಕ್ರಮ ರೂಪಿಸಿದ್ದೇವೆ.ಬೆಂಗಳೂರಿನ ಒಂದು ಸ್ಥಳದಲ್ಲಿ ಈ ಕಾರ್ಯಕ್ರಮ ಆಯೋಜಿಸುವುದು ಬೇಡ ಎಂದು ವಿಧಾನಸಭಾ ಕ್ಷೇತ್ರಗಳನ್ನು ವಿಭಾಗಿಸಿ ಆಯಾ ವಲಯದಲ್ಲಿ ಒಂದೊಂದು ದಿನ ಮೀಸಲಿಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ನಿಗದಿ ಮಾಡಲಾಗಿದ್ದು, ಅದರ ಮಾಹಿತಿಯನ್ನು ಜಾಹೀರಾತುಗಳ ಮೂಲಕ ಪ್ರಕಟಿಸಲಾಗುವುದು. ಅಹವಾಲು ನೀಡಲು ಬರುವ ಜನರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ವಿವರಿಸಿದರು.
ಅಹವಾಲು ನೀಡಲು ಬರುವವರ ಹೆಸರು ನೋಂದಣಿ ಮಾಡುತ್ತೇವೆ. ನಂತರ ಅವರ ಅಹವಾಲುಗಳನ್ನು ಸ್ವೀಕರಿಸುತ್ತೇವೆ. ಜನರ ಸಮಸ್ಯೆಗೆ ಪರಿಹಾರ ನೀಡಲು ನೂರಾರು ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿರುತ್ತಾರೆ. ಜನರು ಯಾವುದೇ ದೂರು, ಅಹವಾಲು ಇದ್ದರೂ ಅದನ್ನು ನಮ್ಮ ಬಳಿಗೆ ತರಬಹುದು. ಕಾನೂನು ಚೌಕಟ್ಟಿನಲ್ಲಿ ಅವರಿಗೆ ಪರಿಹಾರ ನೀಡುವ ಪ್ರಯತ್ನ ಮಾಡಲಾಗುವುದು. ನಿಯಮ ಉಲ್ಲಂಘನೆ ದೂರುಗಳಿದ್ದರೆ ಅವುಗಳನ್ನು ಪರಿಹರಿಸಲು ಬೇರೆ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.