ಬೆಂಗಳೂರು, ಮಾ.1 – ಉದ್ಯಾನ ನಗರಿ ಬೆಂಗಳೂರುನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಬ್ರೂಕ್ಫೀಲ್ಡ್ ನ ಕುಂದಲಹಳ್ಳಿ ಮುಖ್ಯರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಪೋಟ ಸಂಭವಿಸಿದೆ.
ಮಧ್ಯಾಹ್ನ ಊಟದ ಸಮಯವಾದ ಕಾರಣ ಹೋಟೆಲ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಜಮಾಯಿಸಿದ್ದು ಈ ವೇಳೆ ಬಾರಿ ಸದ್ದಿನೊಂದಿಗೆ ಉಂಟಾದ ಸ್ಪೋಟಕ್ಕೆ ಎಲ್ಲರೂ ಬೆಚ್ಚಿಬಿದ್ದಿದ್ದಾರೆ
ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆಯು ಬಹುತೇಕ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಅವರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ.’
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯ ಪೊಲೀಸರು ದಾವಿಸಿ ಪರಿಶೀಲನೆ ನಡೆಸಿದರು.
ಮೊದಲಿಗೆ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿತ್ತು.
ಆದರೆ, ತನಿಖೆಯ ಸಮಯದಲ್ಲಿ ಸಿಲಿಂಡರ್ಗಳು ಹಾಗೂ ಸಂಪರ್ಕದ ಪೈಪ್ಗಳು ಕೆಫೆಯ ಹೊರಗಿನ ಭಾಗದಲ್ಲಿ ಯಥಾಸ್ಥಿತಿಯಲ್ಲಿರುವುದು ಗೊತ್ತಾಗಿದೆ. ಹೀಗಾಗಿ, ಸ್ಫೋಟದ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.
ಶುಕ್ರವಾರ ಮಧ್ಯಾಹ್ನ ಕೆಫೆಯಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಿತ್ತು. ಒಂದೇ ಕಂಪನಿಯ ಐವರು ಸಿಬ್ಬಂದಿ ಒಂದೇ ಸ್ಥಳದಲ್ಲಿ ಕುಳಿತು ಊಟ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ 2 ಬಾರಿ ಸ್ಫೋಟ ಸಂಭವಿಸಿ, ದೊಡ್ಡ ಶಬ್ದ ಕೇಳಿಸಿತ್ತು. ಕೆಲ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದೆ. ಗಾಯಾಳುಗಳನ್ನು ರಕ್ಷಿಸಿರುವ ಸ್ಥಳೀಯರು, ಆಟೊದಲ್ಲಿ ಆಸ್ಪತ್ರೆಗೆ ಕರೆದೊಯ್ದು ಸೇರಿಸಿದ್ದಾರೆ.
ನಾಲ್ವರು ಗ್ರಾಹಕರು ಹಾಗೂ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಮಹಿಳೆ ಸ್ವರ್ಣಾ ನಾರಾಯಣಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ದೇಹದ ಶೇ 40ರಷ್ಟು ಸುಟ್ಟಿದೆ. ಮುಖ ಹಾಗೂ ಕಿವಿ ಭಾಗದಲ್ಲೂ ತೀವ್ರ ಗಾಯವಾಗಿದೆ. ಇವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಅನುಮಾನಾಸ್ಪದ ವಸ್ತುಗಳು: ‘ಸ್ಫೋಟ ಸ್ಥಳದಲ್ಲಿ ಅನುಮಾನಾಸ್ಪದ ವಸ್ತುಗಳು ಸಿಕ್ಕಿವೆ. ಯಾವ ರೀತಿ ಸ್ಫೋಟ ಆಯಿತು? ಸ್ಫೋಟಕ್ಕೆ ಕಾರಣವೇನು ? ಎಂಬುದು ಪರಿಶೀಲನೆಯಿಂದ ತಿಳಿಯಬೇಕಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು, ಕೆಫೆ ಹಾಗೂ ಸುತ್ತಮುತ್ತ ಪರಿಶೀಲನೆ ನಡೆಸಿ ಕೆಲ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳು: ‘ಕೆಫೆಯಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಗಳು ಓಡಾಡಿದ್ದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಕೆಫೆ ಮಾಲೀಕರು ಮಾಹಿತಿ ನೀಡಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ. ಅವರು ಯಾರು ಎಂಬುದನ್ನು ತಿಳಿಯಲಾಗುತ್ತಿದೆ’ ಎಂದು ಅಧಿಕಾರಿ ತಿಳಿಸಿದರು.
ಎನ್ ಐ ಎ ಗೆ ಮಾಹಿತಿ:
ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೋಟೆಲ್ ಸಿಬ್ಬಂದಿ ಮತ್ತು ಗಾಯಗೊಂಡವರ ವಿಚಾರಣೆ ನಡೆಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಇದೊಂದು ಸ್ಫೋಟ ಪ್ರಕರಣವಾಗಿದೆ ಹೀಗಾಗಿ ಸಮಗ್ರ ಮಾಹಿತಿಯನ್ನು ಕೇಂದ್ರ ಗುಪ್ತದಳ ಹಾಗೂ ರಾಷ್ಟ್ರೀಯ ತನಿಕ ದಳಕ್ಕೆ ರವಾನಿಸಿದ್ದೇವೆ ಎಂದು ಹೇಳಿದರು.
ವಿಧಿ ವಿಜ್ಞಾನ ಪ್ರಯೋಗಾಲಯ ತಂತ್ರಜ್ಞರು ಸ್ಥಳಕ್ಕೆ ಆಗಮಿಸಿ, ಸ್ಪೋಟಕ್ಕೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.
ಸುಧಾರಿತ ಸ್ಫೋಟ:
ಘಟನೆಯ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೊಂದು ಸುಧಾರಿತ ಸ್ಪೋಟಕಗಳನ್ನು ಬಳಸಿ ಮಾಡಲಾಗಿರುವ ಸ್ಪೋಟ ಪ್ರಕರಣವಾಗಿದೆ ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದರು.
ಗೃಹ ಸಚಿವ ಪರಮೇಶ್ವರ ಅವರು ವಿದ್ಯಮಾನಗಳ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ ಸ್ಥಳೀಯ ಪೊಲೀಸರು ಮತ್ತು ಕೇಂದ್ರ ತನಿಖಾ ತಂಡದ ಜೊತೆ ನಿರಂತರ ಸಂಪರ್ಕದಲ್ಲಿದ್ದು ಎಲ್ಲ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಈ ಬಗ್ಗೆ ಯಾರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದರು
ಸದ್ಯ ಸಿಸಿಟಿವಿ ಪರಿಶೀಲನೆ ನಡೆಯುತ್ತಿದೆ. ಯಾರೋ ಒಬ್ಬರು ಬ್ಯಾಗ್ ಇಟ್ಟಿರುವುದು ತಿಳಿದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಟೆರರಿಸ್ಟ್ ಮಾಡಿರುವ ಬಗ್ಗೆ ಇನ್ನು ಗೊತ್ತಿಲ್ಲ. ಸ್ವಲ್ಪ ಸಮಯದಲ್ಲೇ ಸಂಪೂರ್ಣ ಮಾಹಿತಿ ಗೊತ್ತಾಗುತ್ತದೆ. ಸ್ಫೋಟಕ ಭಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದದ್ದರೂ ಅದು ಪರಿಣಾಮಕಾರಿಯಾಗಿದೆ ಎಂದರು.
ಎಲ್ಲರ ಕಾಲದಲ್ಲೂ ಕೂಡ ಘಟನೆಗಳು ನಡೆದಿವೆ ಆದರೆ ಇಂತಹ ಘಟನೆ ನಡೆಯಬಾರದು. ಇತ್ತೀಚೆಗೆ ಇಂತಹ ಘಟನೆ ನಡೆದಿರಲಿಲ್ಲ. ಮಂಗಳೂರಲ್ಲಿ ಘಟನೆ ನಡೆದಿತ್ತು. ಹಿಂದಿನ ಸರ್ಕಾರದಲ್ಲಿ ಹಲವು ಸ್ಫೋಟಗಳು ನಡೆದಿತ್ತು. ನಮ್ಮ ಸರ್ಕಾರದಲ್ಲಿ ಈವಾಗ ಈ ಘಟನೆ ನಡೆದಿದೆ. ಆರೋಪಿಗಳನ್ನ ಪತ್ತೆ ಹಚ್ಚಿ ಶಿಕ್ಷಿಸಲಾಗುವುದು. ಬ್ಲಾಸ್ಟ್ ಆಗಿರುವುದು ಸತ್ಯವಾಗಿದೆ. ಬ್ಲಾಸ್ಟ್ ಮಾಡಿರುವವರ ವಿರುದ್ಧ ಶಿಸ್ತಿನ, ಕಠಿಣ ಕ್ರಮ ಆಗಲಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು.
ತನಿಖೆ ನಡೆಯುತ್ತಿದೆ:
ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಅವರು ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂದು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.
ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋ ಇದೆ. ಸುಮಾರು 2 ಕಿ.ಮೀ. ವ್ಯಾಪ್ತಿಯಲ್ಲಿ ಯಾರು ಬಂದು ಹೋಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ. ಸದ್ಯಕ್ಕೆ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೆಲವರು ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ರಕ್ಷಣೆ ನೀಡುತ್ತೇವೆ” ಎಂದು ತಿಳಿಸಿದರು.
ಈ ಸ್ಫೋಟದಲ್ಲಿ ಐಇಡಿ ಬಳಸಲಾಗಿದೆ ಎಂಬುದರ ಬಗ್ಗೆ ಕೇಳಿದಾಗ, “ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

