ಚೆನ್ನೈ.ಮಾ.20 – ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಮಂತ್ರಿ ಶೋಭಾ ಕರಂದ್ಲಾಜೆ (Shobha Karandlaje) ಸಂಕಷ್ಟಕ್ಕೆ ಸಿಲುಕಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟವನ್ನು ತಮಿಳುನಾಡಿಗೆ ಸೇರಿದವರು ಮಾಡಿದ್ದಾರೆ ತಮಿಳುನಾಡಿನ ಕೆಲವರು ಕೃಷ್ಣಗಿರಿ ಪ್ರದೇಶದಲ್ಲಿ ಬಾಂಬ್ ಸ್ಫೋಟಕ್ಕೆ ತರಬೇತಿ ಪಡೆದಿದ್ದಾರೆ ಎಂದು ಆಪಾದಿಸಿದ್ದರು.
ಸಚಿವರ ಈ ಹೇಳಿಕೆ ತಮಿಳುನಾಡಿನವರನ್ನು ಕೆರಳಿಸಿದ್ದು ಹಲವರು ಟೀಕಾ ಪ್ರಹಾರ ನಡೆಸಿದ್ದಾರೆ. ಇದಷ್ಟೇ ಅಲ್ಲ ಹಲವು ರಾಜಕೀಯ ಪಕ್ಷಗಳ ನಾಯಕರು ಶೋಭಾ ಕರಂದ್ಲಾಜೆ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದರು. ತಮ್ಮ ತಮ್ಮ ಹೇಳಿಕೆಗೆ ಈ ರೀತಿ ಖಂಡನೆ ವ್ಯರ್ಥವಾಗುತ್ತಿದ್ದಂತೆ ಎಚ್ಚೆತ್ತ ಸಚಿವೆ ಶೋಭಾ ಕರಂದ್ಲಾಜೆ ಬೇಷರತ್ ಕ್ಷಮೆ ಯಾಚಿಸಿದ್ದರು.
ಆದರೂ ಅವರ ವಿರುದ್ಧದ ಕೋಪ ಶಮನಗೊಂಡಿಲ್ಲ ಇದೀಗ ತಮಿಳುನಾಡಿನ ಮಧುರೈನ ನಿವಾಸಿ ತ್ಯಾಗರಾಜನ್ ಎನ್ನುವರು ಮಧುರೈ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆ ಜನಾಂಗೀಯ ದ್ವೇಷಕ್ಕೆ ಪ್ರಚೋದನೆ ನೀಡುವ ರೀತಿಯಲ್ಲಿ ಇದೆ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಬಾಂಧವ್ಯಕ್ಕೆ ದಕ್ಕೆ ಉಂಟು ಮಾಡಿದೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.
ಈ ದೂರನ್ನು ಸ್ವೀಕರಿಸಿರುವ ಮಧುರೈ ಸೈಬರ್ ಕ್ರೈಂ ಪೊಲೀಸರು ಶೋಭಾ ಕರಂದ್ಲಾಜೆ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 153, 153(A), 505(1)(b), 505(2) ಅನ್ವಯ ಎಫ್ ಐ ಆರ್ ದಾಖಲಿಸಿದ್ದಾರೆ.
ಮತ್ತೊಂದೆಡೆ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ ಕೂಡ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದೆ.