ಬೆಂಗಳೂರು – ರಾಜ್ಯದ ಬರಪಿಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರಕ್ಕೆ ಹಾರ್ದಿಕ ನೆರವು ಮತ್ತು ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪದ ವಿಚಾರ ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಚಟಾಪಟಿಗೆ ಕಾರಣವಾಗಿದೆ.
ರಾಜ್ಯ ಸರ್ಕಾರ ರಾಜಕೀಯ ಕಾರಣಕ್ಕಾಗಿ ಕೇಂದ್ರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರಿಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಈ ಕುರಿತಂತೆ ತಮ್ಮ ಜೊತೆ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಮತ್ತು ಹಣಕಾಸು ಆಯೋಗದ ವರದಿ ಹೇಳಿದ್ದರೂ ವಿಶೇಷ ಅನುದಾನ ನೀಡದಿರುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದು, ಅಗತ್ಯ ದಾಖಲೆಗಳೊಂದಿಗೆ ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಪರವಾಗಿ ನಾವು ನ್ಯಾಯ ಕೇಳುತ್ತಿದ್ದೇವೆಯೇ ಹೊರತು ಭಿಕ್ಷಾಪಾತ್ರೆ ಹಿಡಿದು ಭಿಕ್ಷೆ ಕೇಳುತ್ತಿಲ್ಲ. ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯ ನಮ್ಮದು. ನಮ್ಮ ಹಕ್ಕು ಕೇಳಿದರೆ ನಮ್ಮ ಮೇಲೆಯೇ ಗೂಬೆ ಕೂರಿಸುತ್ತಾರೆ. ಸತ್ಯ ಜನರಿಗೆ ತಿಳಿಯಬೇಕು. ಆದ್ದರಿಂದ, ಮೈಸೂರು ಅಥವಾ ಬೆಂಗಳೂರೇ ಆಗಲಿ. ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧನಿದ್ದೇನೆ. ಸತ್ಯ ಯಾವುದು, ಸುಳ್ಳು ಯಾವುದು ಎಂಬುದನ್ನು ಜನರ ತೀರ್ಮಾನಕ್ಕೆ ಬಿಡೋಣ’ ಎಂದರು.
ರಾಜ್ಯದ ವಿವಿಧ ಯೋಜನೆಗಳಿಗೆ ಬಜೆಟ್ ಅನುದಾನ ಹಾಗೂ ಬರ ಪರಿಹಾರ ಕಾಮಗಾರಿಗಳಿಗಾಗಿ ನೆರವು ನೀಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಒಂದು ಪೈಸೆ ಬಾಕಿ ಉಳಿಸಿಕೊಂಡಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದರೆ, ಅವರ ಹೇಳಿಕೆಗಳು ಸತ್ಯದಿಂದ ಕೂಡಿಲ್ಲ. ಇದೇ 31ಕ್ಕೆ ಮೈಸೂರಿಗೆ ಬರುವ ಅವರು ಚರ್ಚೆಗೆ ಸಿದ್ಧರಾಗಲಿ. ಒಂದೇ ವೇದಿಕೆಯಲ್ಲಿ ಚರ್ಚೆ ನಡೆಯಲಿ ಎಂದು ಆಗ್ರಹಿಸಿದರು.
ನಮಗೆ ಬರಬೇಕಾಗಿರುವ ಬಾಕಿಯ ಬಗ್ಗೆ ಮನವರಿಕೆ ಮಾಡಲು ಸಾಧ್ಯವಾಗದ ಕಾರಣ ನಿರ್ಮಲಾ ಆವರು ಗೊಂದಲ ಮೂಡಿಸುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ (2020) ಅವರೂ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದರು. ಹಾಗಿದ್ದರೆ ಯಡಿಯೂರಪ್ಪ ಸುಳ್ಳು ಹೇಳಿದ್ದರಾ? ಬಸವರಾಜ ಬೊಮ್ಮಾಯಿ ಅವರೂ ಪತ್ರ ಬರೆದಿದ್ದರು. ಆಗ ಅದಕ್ಕೆ ಉತ್ತರ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು ವಿಶೇಷ ಅನುದಾನಕ್ಕೆ ಸಂಪನ್ಮೂಲವನ್ನು ನೀವೇ ಹೊಂದಾಣಿಕೆ ಮಾಡಿಕೊಳ್ಳಿ ಎಂದಿದ್ದರು’ ಎಂದು ನೆನಪಿಸಿದರು.


1 ಟಿಪ್ಪಣಿ
betmgmontario betmgm-play betmgm South Carolina