ಬೆಂಗಳೂರು,ಫೆ.28:
ಉಪಮುಖ್ಯಮಂತ್ರಿಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ರಾಜಕೀಯವಾಗಿ ಸಮರ ಸಾರಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿಕೆ ಶಿವಕುಮಾರ್ ಅವರ ಸೋದರ ಹಾಗೂ ಮಾಜಿ ಸಂಸದ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದರು.
ಸತೀಶ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ಗೃಹದಲ್ಲಿ ಭೇಟಿಯಾದ ಡಿಕೆ ಸುರೇಶ್ ಹಲವು ರಾಜಕೀಯ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ ಪ್ರಮುಖವಾಗಿ ಕರ್ನಾಟಕ ಹಾಲು ಒಕ್ಕೂಟದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಉಭಯ ನಾಯಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಚುನಾವಣೆ ಸೋತ ನಂತರ ಡಿಕೆ ಸುರೇಶ್ ಅವರು ರಾಜಕೀಯವಾಗಿ ಯಾವುದೇ ಅಧಿಕಾರ ಹೊಂದಿಲ್ಲ. ಹೀಗಾಗಿ ಅವರನ್ನು ಸದ್ಯದಲ್ಲೇ ನಡೆಯಲಿರುವ ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚಿಸಿದ್ದು ಅವರಿಗೆ ಅಧ್ಯಕ್ಷ ಸ್ಥಾನ ದೊರಕಿಸುವ ಕೊಡುವ ಕುರಿತಂತೆ ತಂತ್ರಗಾರಿಕೆ ಆರಂಭಿಸಿದ್ದಾರೆ.
ಈ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಎಂಎಫ್ ಅಧ್ಯಕ್ಷರಾಗಿದ್ದ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹುದ್ದೆ ತೊರೆದಿದ್ದರು. ಇದೀಗ ಬದಲಾದ ಲೆಕ್ಕಾಚಾರದಲ್ಲಿ ಅವರು ಮತ್ತೊಮ್ಮೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಜ್ಜುಗೊಂಡಿದ್ದಾರೆ. ಇದಕ್ಕೆ ಅವರ ಸೋದರ ಹಾಗೂ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರ ಆಶೀರ್ವಾದ ಇದೆ ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆ ಸುರೇಶ್ ಅವರು ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಭೇಟಿಯ ನಂತರ ಪ್ರತಿಕ್ರಿಯೆ ನೀಡಿದ ಡಿಕೆ ಸುರೇಶ್ ತಮ್ಮ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ ತಮ್ಮ ಕ್ಷೇತ್ರ ವ್ಯಾಪ್ತಿಯ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತಂತೆ ಮಾತುಕತೆ ನಡೆಸಿದ್ದೇನೆ.
ಸತೀಶ ಜಾರಕಿಹೊಳಿ ಅವರು ಲೋಕೋಪಯೋಗಿ ಮಂತ್ರಿಯಾಗಿರುವ ಕಾರಣಕ್ಕೆ ಅವರನ್ನು ಹಲವು ಬಾರಿ ಭೇಟಿ ಮಾಡಿ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದ್ದೇನೆ ಅದೇ ರೀತಿ ಇಂದೂ ಕೂಡ ಮಾತುಕತೆ ನಡೆಸಿದ್ದು ಇದರಲ್ಲಿ ವಿಶೇಷವೇನಿಲ್ಲ ಎಂದು ಸ್ಪಷ್ಟಪಡಿಸಿದರು.
ಸತೀಶ್ ಜಾರಕಿಹೊಳಿ ಈ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಸುರೇಶ್ ಅವರು ನಮ್ಮ ಪಕ್ಷದ ನಾಯಕ ಹಾಗೂ ಮಾಜಿ ಸಂಸದ ಅವರನ್ನು ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ಆಗಿಂದಾಗೆ ಸಂಪರ್ಕಿಸಿ ಮಾತುಕತೆ ನಡೆಸುತ್ತಿರುತ್ತೇನೆ ಅದೇ ರೀತಿಯಲ್ಲಿ ಇಂದು ಕೂಡ ಬೇಟಿಯಾಗಿ ಮಾತುಕತೆ ನಡೆಸಿದ್ದೇವೆ ಇದರಲ್ಲಿ ವಿಶೇಷ ಎನೂ ಇಲ್ಲ ಎಂದು ತಿಳಿಸಿದರು
Previous Articleಜಗ್ಗಿ ವಾಸುದೇವ್ ಯಾವ ಪಾರ್ಟಿ ?
Next Article ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.

