ಬೆಂಗಳೂರು,ಜೂ.19- ರಾಜ್ಯ ಭದ್ರತಾ ಆಯೋಗದ ಸದಸ್ಯರನ್ನಾಗಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಭದ್ರತಾ ಆಯೋಗಕ್ಕೆ ಎಲ್ಲಾ ಸದಸ್ಯರನ್ನು ನೇಮಕ ಮಾಡಬೇಕು ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963 ಮತ್ತು 2006ರಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ರಾಜ್ಯ ಆಯೋಗ ತನ್ನ ಕಾರ್ಯ ನಿರ್ವಹಿಸುವಂತಾಗಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ 2021ರಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಭದ್ರತಾ ಆಯೋಗಕ್ಕೆ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ 2021ರ ಜೂನ್ 22ರಂದು ಮಧ್ಯಂತರ ಆದೇಶ ಮಾಡಿತ್ತು.
ಈ ಆದೇಶದ ಹಿನ್ನೆಲೆಯಲ್ಲಿ ಜಾನ್ ಮೈಕೆಲ್ ಕುನ್ಹಾ ಅವರನ್ನು ಭದ್ರತಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿರುವ ಬಗ್ಗೆ ಇದೇ ಜೂನ್ 12ರಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಸದಸ್ಯರ ನೇಮಕದ ಬಗ್ಗೆ 2021ರಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿತ್ತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಶಿಫಾರಸು ಮಾಡುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು. ಅದರಂತೆ, 2021ರ ಆಗಸ್ಟ್ 21ರಂದು ಮುಖ್ಯ ನ್ಯಾಯಮೂರ್ತಿಗಳು ನ್ಯಾಯಮೂರ್ತಿ ಕುನ್ಹಾ ಅವರ ಹೆಸರು ಶಿಫಾರಸು ಮಾಡಿದ್ದರು. ಇದೀಗ ಸುಮಾರು ನಾಲ್ಕು ವರ್ಷಗಳ ಬಳಿಕ ಸದಸ್ಯರ ನೇಮಕವಾಗಿದೆ.
ರಾಜ್ಯ ಭದ್ರತಾ ಆಯೋಗ ರಚಿಸುವ ಸಂಬಂಧ ಸುಪ್ರೀಂ ಕೋರ್ಟ್ 2006ರಲ್ಲಿ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಪೊಲೀಸ್ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರುವುದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಕಾರ್ಯಕ್ಷಮತೆಯ ಮೌಲ್ಯಮಾಪನ ಮಾಡಿ ಅಗತ್ಯ ನೀತಿಗಳನ್ನು ರೂಪಿಸುವುದು ರಾಜ್ಯ ಭದ್ರತಾ ಆಯೋಗದ ಮುಖ್ಯ ಉದ್ದೇಶವಾಗಿದೆ. 2012ರಲ್ಲೇ ಕರ್ನಾಟಕದಲ್ಲಿ ರಾಜ್ಯ ಭದ್ರತಾ ಆಯೋಗ ರಚನೆ ಆಗಿದೆ.
ಆದರೆ, ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈ ಆಯೋಗ ಕೆಲಸ ಮಾಡುತ್ತದೆ. ಗೃಹ ಸಚಿವರು ಆಯೋಗದ ಉಪಾಧ್ಯಕ್ಷರಾಗಿದ್ದು, ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಶಿಫಾರಸು ಮಾಡಿದ ನಿವೃತ್ತ ನ್ಯಾಯಮೂರ್ತಿಯೊಬ್ಬರು ಸೇರಿ ವಿಧಾನಸಭೆಯ ಪ್ರತಿಪಕ್ಷದ ನಾಯಕರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಈ ಆಯೋಗದ ಸದಸ್ಯರಾಗಿರುತ್ತಾರೆ.
Previous Articleಕೆಪಿಟಿಸಿಎಲ್ ನೌಕರರಿಗೆ ಇಂಧನ ಮಂತ್ರಿ ಸಲಹೆ.
Next Article ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.