ಬೆಂಗಳೂರು,
ಅವಕಾಶ ವಂಚಿತ ಹಿಂದುಳಿದ ವರ್ಗಗಳ ಹಲವು ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಹಿಂದುಳಿದ ವರ್ಗಗಳ ಸಮುದಾಯದ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಬಜೆಟ್ ಸಿದ್ಧತೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಶಾಸಕರು ಮಾಜಿ ಮಂತ್ರಿಗಳು ಹಾಗೂ ವಿವಿಧ ಸಮುದಾಯದ ಮುಖಂಡರು ಭೇಟಿ ಮಾಡಿ ಹಿಂದುಳಿದ ವರ್ಗಗಳ ಹಲವಾರು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮುದಾಯಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯ ಬಗ್ಗೆ ಪ್ರಸ್ತಾಪಿಸಿದ ಹಲವಾರು ಮುಖಂಡರು ಈ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ದೃಷ್ಟಿಯಿಂದ ತಕ್ಷಣವೇ ಆಯೋಗದ ಅಧ್ಯಕ್ಷ ಮಧುಸೂದ ನಾಯಕ್ ಅವರಿಗೆ ತಮ್ಮ ವರದಿ ಸಲ್ಲಿಸುವಂತೆ ಸೂಚಿಸಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ನೀಡಿದರು ಅದು ಸಮೀಕ್ಷೆ ನಡೆಸಿದ ಅವಧಿ ಮತ್ತು ವರದಿ ಸ್ವೀಕರಿಸಿದ ಅವಧಿ ಹತ್ತು ವರ್ಷ ದಾಟಿದ ಪರಿಣಾಮ ಕಾನೂನಿನಲ್ಲಿ ಅದನ್ನು ಜಾರಿಗೊಳಿಸಲು ಅವಕಾಶವಿರಲಿಲ್ಲ ಈಗ ಮಧುಸೂದನ್ ನಾಯಕ್ ನೇತೃತ್ವದ ಆಯೋಗ ತಕ್ಷಣ ವರದಿ ಸಲ್ಲಿಸಿದರೆ ಅದನ್ನು ಅನುಷ್ಠಾನಕ್ಕೆ ತರಲು ಅನುಕೂಲವಾಗಲಿದೆ ಎಂದು ಹಲವು ನಾಯಕರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಳ್ಳಲು ಪ್ರಯತ್ನಿಸಿದರು ಎಂದು ತಿಳಿದುಬಂದಿದೆ.
ಮಾರ್ಚ್ ಆರರಂದು ರಾಜ್ಯ ಬಜೆಟ್ ಮಂಡನೆ ಯಾಗಲಿದೆ ಅದಕ್ಕೂ ಮುನ್ನವೇ ವರದಿಯನ್ನು ಸ್ವೀಕರಿಸಿ ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು ಆನಂತರ ಬಜೆಟ್ ನಲ್ಲಿ ವರದಿ ಅನುಷ್ಠಾನಕ್ಕೆ ಅಗತ್ಯವಿರುವ ಅನುದಾನ ತೆಗೆದಿರಿಸಬೇಕು ಎಂದು ನಿಯೋಗ ಮನವಿ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಾತ್ರ ಈ ವರದಿಯನ್ನು ಅನುಷ್ಠಾನಕ್ಕೆ ತರಲು ಸಾಧ್ಯ. ನಿಮಗೆ ಮಾತ್ರ ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇದೆ ಹೀಗಾಗಿ ನಿಮ್ಮ ಅವಧಿಯಲ್ಲಿ ಇದನ್ನು ಅನುಷ್ಠಾನಕ್ಕೆ ತರುವ ಮೂಲಕ ಇತಿಹಾಸ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟ ನಿಯೋಗ ಸ್ವಾತಂತ್ರ್ಯ ಬಂದ ನಂತರದಿಂದ ಹಿಂದುಳಿದ ವರ್ಗಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವ ಮೂಲಕ ಚಾರಿತ್ರಾರ್ಹ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

