ಬೆಂಗಳೂರು, ನ.11- ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿಯ ಹಾಲ ಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ (Abhinava Halashree) ಸ್ವಾಮೀಜಿಯನ್ನು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಾಮೀಜಿಗೆ ಹೈಕೋರ್ಟ್ ನವೆಂಬರ್ 8ರಂದು ಜಾಮೀನು ನೀಡಿತ್ತು. ಇದಾದ ಬಳಿಕ ಶೂರಿಟಿ, ಇಬ್ಬರು ವ್ಯಕ್ತಿಗಳ ಬಾಂಡ್ ಸೇರಿದಂತೆ ಹಲವು ಷರತ್ತುಗಳನ್ನು ಪೂರೈಸಿದ ಬಳಿಕ ಬೆಳಿಗ್ಗೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಹಾಲಶ್ರೀ ಸ್ವಾಮೀಜಿ ಅವರು ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಶ್ರೀರಾಮ ಸೇನೆಯ ಸಂಚಾಲಕ ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹಾಕಿ ಸ್ವಾಗತ ಮಾಡಿದರು.
ಈ ವೇಳೆ ಮಾತನಾಡಿದ ಅಭಿನವ ಹಾಲಶ್ರೀ ಪ್ರತ್ಯಕ್ಷವಾಗಿ ಕಂಡರು ಪ್ರಮಾಣಿಸಿ ನೋಡಬೇಕು. ಪ್ರಕರಣದ ತನಿಖೆ ವೇಳೆ ಅದನ್ನು ಪರಿಗಣಿಸಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆʼʼ ಎಂದು ಹೇಳಿದರು.
ನಮ್ಮನ್ನ ನಂಬಿ ಅರಾಧಿಸುವ ಸಮಾಜಕ್ಕೆ, ನಮ್ಮ ಮೇಲೆ ನಂಬಿಕೆಯಿಟ್ಟಿರುವ ಭಕ್ತ ಸಮೂಹದ ಆಶಯಕ್ಕೆ ಯಾವುದೇ ಧಕ್ಕೆ ಬರದಂತೆ ಬದುಕು ಕಟ್ಟಿಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿ ಬದುಕು ಸಾಗಿಸುತ್ತೇನೆ ಎಂದರು.
ಅವರು ಬೆಂಗಳೂರಿನಿಂದ ಹಿರೇಹಡಗಲಿಗೆ ನೇರವಾಗಿ ಹೋಗುತ್ತಾರಾ ಅಥವಾ ಕೆಲವು ದಿನ ಭಕ್ತರ ಮನೆಯಲ್ಲಿದ್ದು ಬಳಿಕ ಮಠಕ್ಕೆ ಹೋಗುತ್ತಾರೆಯೇ ಎನ್ನುವುದರ ಬಗ್ಗೆ ಖಾತ್ರಿಯಾಗಿಲ್ಲ.
ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಮತ್ತು ಗ್ಯಾಂಗ್ ಉದ್ಯಮಿ ಗೋವಿಂದ ಪೂಜಾರಿ ಅವರನ್ನು ವಂಚಿಸಿದ ಪ್ರಕರಣದಲ್ಲಿ ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದಾರೆ. ಚೈತ್ರಾ ಮತ್ತು ಇತರ ಆರು ಮಂದಿ ಆರೋಪಿಗಳು ನಾನಾ ಕಾರಣ ಹೇಳಿ ಗೋವಿಂದ ಪೂಜಾರಿಯಿಂದ 3.5 ಕೋಟಿ ರೂ. ಸುಲಿಗೆ ಮಾಡಿದ್ದರೆ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ 1.5 ಕೋಟಿ ರೂ. ಪಡೆದುಕೊಂಡಿದ್ದಾರೆ ಎಂದು ಗೋವಿಂದ ಪೂಜಾರಿ ಹೇಳಿದ್ದರು.
ಕಟಕ್ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ:
ಚೈತ್ರಾ ಕುಂದಾಪುರಗಳನ್ನು ಕಳೆದ ಸೆಪ್ಟೆಂಬರ್ 12ರಂದು ಉಡುಪಿಯ ಕೃಷ್ಣ ಮಠದ ಸಮೀಪದಿಂದ ಮತ್ತು ಉಳಿದವರನ್ನು ಅವರವರ ಊರುಗಳಿಂದ ಬಂಧಿಸಲಾಗಿತ್ತು. ಸೆ. 13ರಂದು ಸಂಜೆ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಆಗ ಕೋರ್ಟ್ ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳಿಗೆ 10 ದಿನಗಳ ಸಿಸಿಬಿ ಕಸ್ಟಡಿ ವಿಧಿಸಿತ್ತು. ಸಿಸಿಬಿ ಕಸ್ಟಡಿ ಅವಧಿ ಸೆ. 23ಕ್ಕೆ ಅಂತ್ಯಗೊಂಡ ಬಳಿಕ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.
ಚೈತ್ರಾ ಕುಂದಾಪುರ ಮತ್ತು ತಂಡವನ್ನು ಸಿಸಿಬಿ ಪೊಲೀಸರು ಬೆನ್ನಟ್ಟುತ್ತಿರುವ ಮಾಹಿತಿ ಸಿಗುತ್ತಿದ್ದಂತೆಯೇ ಅಭಿನವ ಹಾಲಶ್ರೀ ಸ್ವಾಮೀಜಿ ಮಠದಿಂದ ಪರಾರಿಯಾಗಿ ಮೈಸೂರಿಗೆ ಬಂದಿದ್ದರು. ಅಲ್ಲಿಂದ ಮೊಬೈಲ್ ಮತ್ತು ನಾಲ್ಕು ಸಿಮ್ ಖರೀದಿ ಮಾಡಿ ಬಸ್ ಮೂಲಕ ಹೈದರಾಬಾದ್ಗೆ ಅಲ್ಲಿಂದ ರೈಲು ಮೂಲಕ ಒಡಿಶಾದ ಕಟಕ್ಗೆ ಹೋಗಿದ್ದರು. ಮುಂದೆ ಕಾಶಿಗೆ ಹೋಗಿ ತಲೆಮರೆಸಿಕೊಳ್ಳುವ ಪ್ರಯತ್ನದಲ್ಲಿದ್ದ ಅವರನ್ನು ಕಟಕ್ ರೈಲು ನಿಲ್ದಾಣದಲ್ಲೇ ಅತ್ಯಂತ ಚಾಣಾಕ್ಷತನದಿಂದ ಬಂಧಿಸಲಾಗಿತ್ತು.


1 ಟಿಪ್ಪಣಿ
betmgm California online casino betmgm play betmgm IA