ಬೆಳಗಾವಿ ಡಿ 11: ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ನಿರ್ದೇಶನ ನೀಡವಂತೆ ಮುಖ್ಯ ಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಭರವಸೆ ನೀಡಿದರು.
ಬೆಳಗಾವಿಯ ಸುವರ್ಣಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಸಂಘಟನೆಗಳ ಪ್ರತಿನಿಧಿಗಳ ಅಹವಾಲು ಅಲಿಸಿದ ಸಚಿವರು ಸಮಸ್ಯೆಗಳನ್ನು ಕಾನೂನಿನ ಪರಿಮಿತಿ ಹಾಗೂ ಸಂಪನ್ಮೂಲಗಳ ಲಭ್ಯತೆ ಆಧಾರದ ಮೇಲೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ರೈತರ ಪಂಪ್ ಸೆಟ್ ಗಳಿಗೆ 7 ಗಂಟೆ ಉಚಿತ ವಿದ್ಯುತ್ ನೀಡಲಾಗುತ್ತದೆ .ಉತ್ಪಾದನೆ, ಲಭ್ಯತೆ ಆಧಾರದ ಮೇಲೆ ಇದರ ಅವಧಿ ಹೆಚ್ಚಳದ ಬಗ್ಗೆ ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವರು ಹೇಳಿದರು.
ಎ.ಪಿ ಎಂ.ಸಿ ಕಾಯಿದೆ ತಿದ್ದುಪಡಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಪ್ತಿಗೆ ಬರಲಿದ್ದು ಈಗಾಗಲೇ ಆ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆ ಎಂದರು.
ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಪರಿಹಾರ ಹೆಚ್ಚಳದ ಬಗ್ಗೆಯೂ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೃಷಿ ಸಚಿವರು ಹೇಳಿದರು.
ಕಬ್ಬು ಬೆಳೆಗಾರರ ಸಮಸ್ಯೆ ಸೇರಿದಂತೆ ರೈತರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಎನ್ ಚಲುವರಾಯಸ್ವಾಮಿ ಹೇಳಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು ಕೇವಲ ಮಹಿಳಾ ಕೇಂದ್ರಿತವಾಗಿರದೆ ಗ್ರಾಮೀಣ ರೈತರು ಹಾಗೂ ಬಡಜನರ ಏಳಿಗೆಯ ಆಶಯದೊಂದಿಗೆ ರೂಪಿಸಲಾಗಿದೆ ಎಂದು ಸಚಿವರು ಮನವರಿಕೆ ಮಾಡಿಕೊಟ್ಟರು.