ಬೆಂಗಳೂರು,ಮಾ.10- ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಮಬಲದೊಂದಿಗೆ ಚುನಾವಣೆ ಎದುರಿಸಲು ಸಜ್ಜುಗೊಂಡಿದೆ.ಇದಕ್ಕಾಗಿ ಯಡಿಯೂರಪ್ಪ ಅವರಿಗೆ ಪ್ರಚಾರ ಸಮಿತಿಯ ನೇತೃತ್ವವಹಿಸಲಾಗುವುದು ಎಂಬ ನಿರೀಕ್ಷೆಯಿತ್ತು.
ಆದರೆ ಈ ನಿರೀಕ್ಷೆ ಇದೀಗ ಹುಸಿಯಾಗಿದೆ.ಚುನಾವಣೆ ದೃಷ್ಟಿಯಿಂದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗಳನ್ನು ರಚನೆ ಮಾಡಿದೆ.
ಪ್ರಚಾರ ಸಮಿತಿಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೂ ಸೇರಿದಂತೆ 25 ಮಂದಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಮುಖಂಡರಾದ ಅಶೋಕ, ಶ್ರೀರಾಮುಲು ಅವರ ಜೊತೆಗೆ ರಾಜ್ಯದ ಎಲ್ಲಾ ಕೇಂದ್ರ ಸಚಿವರಿಗೆ ಅವಕಾಶ ನೀಡಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ಮಾಡಲಾಗಿದೆ. ಈ ಸಮಿತಿಯಲ್ಲಿ ತೇಜಸ್ವಿನಿ ಅನಂತ ಕುಮಾರ್, ಮಲ್ಕಾಪುರೆ,ಲಿಂಬಾವಳಿ,ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 14 ಮಂದಿ ಸದಸ್ಯರಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಸಮಿತಿಗಳನ್ನು ರಚನೆ ಮಾಡಿದ್ದಾರೆ.
BJP ಉನ್ನತ ಸಮಿತಿಗಳ ರಚನೆ-ಹುಸಿಯಾದ ನಿರೀಕ್ಷೆ
Previous ArticleBJPಗೆ ಗುಡ್ ಬೈ ಹೇಳಲು ಸಜ್ಜಾದ ಪೂರ್ಣಿಮಾ, ಸೋಮಣ್ಣ, ಶ್ರೀಮಂತ ಪಾಟೀಲ್
Next Article Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup