ಬೆಂಗಳೂರು – ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕಾರಣಿಗಳ ಪಕ್ಷಾಂತರ ಪರ್ವ ತೀವ್ರಗೊಂಡಿದ್ದು,ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.
ಬಳ್ಳಾರಿಯ ಕೂಡ್ಲಿಗಿ ಕ್ಷೇತ್ರದ ಶಾಸಕ,ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಎನ್.ವೈ. ಗೋಪಾಲಕೃಷ್ಣ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಮಾಜಿ ಸಂಸದ ದಿವಂಗತ ಎನ್.ವೈ ಹನುಮಂತಪ್ಪ ಅವರ ಸೋದರರಾಗಿರುವ ಇವರು ಮೂಲತಃ ಕಾಂಗ್ರೆಸಿಗರು.ಕಳೆದ 2018ರಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಮುನಿಸಿಕೊಂಡು ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾಗಿದ್ದರು.
ಇದೀಗ ಅವರು ಮರಳಿ ಕಾಂಗ್ರೆಸ್ ಸೇರುತ್ತಿದ್ದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಕ್ಷೇತ್ರದ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಕಳೆದ ರಾತ್ರಿ ಅವರು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆಯನ್ನು ಖಚಿತಪಡಿಸಿದ್ದರು.
ಎನ್.ವೈ. ಗೋಪಾಲಕೃಷ್ಣ ಅವರು ಮೂಲತಃ ಮೊಳಕಾಲ್ಮುರು ಕ್ಷೇತ್ರದವರು. ಅಲ್ಲಿ ನಾಲ್ಕು ಬಾರಿ ಗೆದ್ದಿದ್ದರು ಈ ಬಾರಿ ಬಿಜೆಪಿ ನಾಯಕ ಶ್ರೀರಾಮುಲು ಅವರು ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸದೆ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಬರಲಿದ್ದಾರೆ. ಇದು ಗೋಪಾಲಕೃಷ್ಣ ಅವರಿಗೆ ಅನುಕೂಲವಾಗುವ ನಿರೀಕ್ಷೆ ಇದೆ.ಇದರಿಂದ ಕಳೆದ ಬಾರಿ ಇಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಡಾ. ಬಿ. ಯೋಗೇಶ್ ಬಾಬುಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ.