ಬೆಂಗಳೂರು,ಜ.22- ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ನಾಡಿದ್ದು(ಜ.24) ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿರುವುದರಿಂದ, ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ರಾಜ್ಯ ಸರ್ಕಾರವು 6 ವರ್ಷಗಳು ಕಳೆದರೂ ವೇತನ ಹೆಚ್ಚಳ ಮಾಡದಿರುವುದರಿಂದ ಸಿಡಿದೆದ್ದಿರುವ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಜ 24ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ.
ಪ್ರತಿಭಟನೆಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಹಾಗೂ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್, ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆ.ಎಸ್.ಆರ್.ಟಿ.ಸಿ ಹಾಗೂ ಎಸ್ಟಿ ಎಂಪ್ಲಾಯೀಸ್ ಯೂನಿಯನ್, ಕರಾರಸಾ ಸಂಸ್ಥೆ ಪ.ಜಾ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಿದ್ದಾರೆ.
ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. 4 ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಈ ವೇಳೆ ಸಾವಿರಾರು ನೌಕರರು ಧರಣಿಯಲ್ಲಿ ಭಾಗಿಯಾಗುತ್ತಿರುವುದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ.
ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್ನಲ್ಲಿ ನೌಕರರು 15 ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಮತ್ತೆ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ಯೋಜನೆ ಮಾಡಿದೆ.
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು 6 ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಿಯಮಬದ್ಧವಾಗಿ 2020 ಮಾರ್ಚ್ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು.
ಹೀಗಾಗಿ ನಿಗಮಗಳ ನಿರ್ಧಾರಕ್ಕೆ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1,20,000 ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2016ರಲ್ಲಿ ಶೇ 12.5ರಷ್ಟು ವೇತನ ಪರಿಷ್ಕರಣೆ ಆಗಿತ್ತು. ಆದರೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟ ನಡೆಸಿ ಒಂದೂವರೆ ವರ್ಷ ಕಳೆದರೂ ಬೇಡಿಕೆಯನ್ನು ಸರ್ಕಾರ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹಕ್ಕೆ ಸಿದ್ಧತೆಯನ್ನು ನೌಕರರು ಮಾಡಿಕೊಂಡಿದ್ದಾರೆ.
Previous Articleಇಂಗ್ಲೆಂಡ್ ನ ಪ್ರಧಾನ ಮಂತ್ರಿ ರಿಷಿ ಸುನಾಕ್’ರಿಗೆ ದಂಡ!
Next Article ತೆನೆ ಮತ್ತು ಕಮಲದ ಮಧ್ಯೆ ಜಗಳವಾಗಿ ಕೈ ಕಟ್