ಮೈಸೂರು,ಸೆ.25-
ಮುಡಾ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಎಫ್ಐಆರ್ ದಾಖಲಿಸಬೇಕು’ ಎಂದು ಜೆಡಿಎಸ್ ಪಟ್ಟು ಹಿಡಿದಿದೆ.
ಸಿಎಂ ವಿರುದ್ಧ ದೂರುದಾರರಲ್ಲಿ ಒಬ್ಬರಾದ ಜೆಡಿಎಸ್ ಮುಖಂಡ ಎಸ್.ಪಿ. ಪ್ರದೀಪ್ಕುಮಾರ್ ಅವರು ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರಿಗೆ ಮನವಿ ಮಾಡಿದ್ದಾರೆ.
ಜೆಡಿಎಸ್ ಮುಖಂಡರೊಂದಿಗೆ ಲೋಕಾಯುಕ್ತ ಕಚೇರಿಗೆ ಬಂದ ಅವರು, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ನಿನ್ನೆ ಪ್ರಕಟಿಸಿದ ತೀರ್ಪಿನ ಪ್ರತಿಯೊಂದಿಗೆ ದೂರು ಸಲ್ಲಿಸಿದರು.
ಇದಕ್ಕೆ ಪ್ರತಿಯಾಗಿ ಅವರಿಗೆ ಸ್ವೀಕೃತಿ ನೀಡಲಾಯಿತು. ಆದರೆ, ಇದನ್ನು ಒಪ್ಪದ ಅವರು‘ನಾನು ಹಿಂದೆ ಸಲ್ಲಿಸಿದ್ದ ದೂರು ಆಧರಿಸಿ ಕೈಗೊಂಡ ಕ್ರಮದ ಬಗ್ಗೆ ಹಿಂಬರಹ ಕೊಡಬೇಕು’ ಎಂದು ಪ್ರದೀಪ್ಕುಮಾರ್ ಪಟ್ಟು ಹಿಡಿದರು. ‘ಈಗ ಕೊಡುವುದಕ್ಕೆ ಬರುವುದಿಲ್ಲ’ ಎಂಬ ಪ್ರತಿಕ್ರಿಯೆ ನೀಡಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರದೀಪ್ಕುಮಾರ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಭಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಕ್ರಮದಲ್ಲಿ ಭಾಗಿಯಾದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿ, ಬಂಧಿಸುವಂತೆ ದೂರು ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.
‘ಹೈಕೋರ್ಟ್ ಮಂಗಳವಾರ ನೀಡಿರುವ ಪ್ರಕಾರ, ನಾನು ಜುಲೈ 31ರಂದು ಹಾಗೂ ಆ.19ರಂದು ಸಲ್ಲಿಸಿರುವ ದೂರುಗಳನ್ನು ಆಧರಿಸಿ ಎಫ್ಐಆರ್ ದಾಖಲಿಸಲು ಅವಕಾಶವಿದೆ. ನ್ಯಾಯಾಲಯವೇ ಹೇಳಿರುವಂತೆ ಪೂರ್ವ ಅನುಮತಿಯೇನೂ ಬೇಕಾಗುವುದಿಲ್ಲ. ಆದ್ದರಿಂದ ತನಿಖೆಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದೇನೆ’ ಎಂದರು.
‘ಈ ಕ್ಷಣದಲ್ಲೇ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದೆ. ಪ್ರತಿಕ್ರಿಯಿಸಿದ ಅಧಿಕಾರಿ, ತೀರ್ಪಿನ ಪ್ರತಿ ಓದಲು ಸಮಯಬೇಕಾಗುತ್ತದೆ ಎಂದರು. ಪ್ರತಿ ಕೊಟ್ಟಿದ್ದೇನೆ, ಓದಿ ಮನವರಿಕೆ ಮಾಡಿಕೊಡುತ್ತೇನೆ ಎಂದರೂ ಕೇಳಲಿಲ್ಲ. ನಾನು ಹಿಂದೆ ನೀಡಿದ ದೂರುಗಳನ್ನು ಆಧರಿಸಿಯೂ ಕ್ರಮ ಕೈಗೊಂಡಿಲ್ಲ; ಈಗ ದೂರು ನೀಡಿದರೂ ಸ್ಪಂದಿಸುತ್ತಿಲ್ಲ. ಕೂಡಲೇ ಎಫ್ಐಆರ್ ಮಾಡಿ, ಆರೋಪಿಗಳನ್ನು ಬಂಧಿಸಬೇಕು ಎನ್ನುವುದು ನನ್ನ ಒತ್ತಾಯ. ಆದರೆ, ಲೋಕಾಯುಕ್ತ ಅಧಿಕಾರಿಗಳು ದುರ್ವರ್ತನೆ ತೋರುತ್ತಿದ್ದಾರೆ. ಅವರು ಮುಖ್ಯಮಂತ್ರಿ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
‘ಎಫ್ಐಆರ್ ದಾಖಲಿಸುವುದಕ್ಕೆ ಯಾವುದೇ ತಡೆಯಾಜ್ಞೆ ಕೂಡ ಇಲ್ಲ. ಆದರೆ, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಿದ್ದಾರೆ. ಹಿಂಬರಹ ನೀಡದೇ ಹಾರಿಕೆ ಉತ್ತರ ಕೊಡುತ್ತಿದ್ದಾರೆ’ ಎಂದು ದೂರಿದರು.
‘ನಾನು ಮೊದಲ ದೂರು ಸಲ್ಲಿಸಿದ್ದಾಗ ಅಧಿಕಾರಿಯೇ ಬೇರೆ. ಈಗಿರುವ ಅಧಿಕಾರಿಯೇ ಬೇರೆ. ಮೈಸೂರು ಲೋಕಾಯುಕ್ತ ಎಸ್ಪಿ ವರ್ಗಾವಣೆಯಲ್ಲಿ ದುರುದ್ದೇಶಪೂರ್ವಕ ಕ್ರಮ ಕಂಡುಬರುತ್ತಿದೆ’ ಎಂದು ಆರೋಪಿಸಿದರು.
‘ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಹಾಕಿ, ಪ್ರಕರಣ ದಾಖಲಿಸುವಂತೆ ನಿರ್ದೇಶನ ಕೊಡಿಸುವ ಕೆಲಸ ಮಾಡುತ್ತೇನೆ. ಎಫ್ಐಆರ್ ದಾಖಲಾದ ಮೇಲೆ, ಲೋಕಾಯುಕ್ತದ ಮೇಲೆ ನಮಗೆ ನಂಬಿಕೆ ಇಲ್ಲವಾದ್ದರಿಂದ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವಂತೆ ಕೇಳುತ್ತೇನೆ’ ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಘಟಕದ ವಕ್ತಾರ ರವಿಚಂದ್ರೇಗೌಡ, ಮಾಜಿ ಮೇಯರ್ ಎಂ.ಜೆ.ರವಿಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ಎಸ್ಬಿಎಂ ಮಂಜು ಸೇರಿದಂತೆ ಜೆಡಿಎಸ್ ಮುಖಂಡರು ಜೊತೆಗಿದ್ದರು


1 ಟಿಪ್ಪಣಿ
Для обеспечения максимальной безопасности на дороге рекомендуем приобрести купить камеру заднего вида на грузовик.
Применение камер заднего вида на грузовиках способствует уменьшению числа ДТП при движении задним ходом.