ಬೆಂಗಳೂರು,ಸೆ.1 – ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ವಿರುದ್ಧ ರಾಜ್ಯಪಾಲರಿಗೆ ಬರೆದ ಲಂಚ ಆರೋಪದ ಪತ್ರ ಪ್ರಕರಣದ ಬಂಧಿತ ಕೆಆರ್ ಪೇಟೆಯ ಕೃಷಿ ಇಲಾಖೆಯ ಅಧಿಕಾರಿಗಳಾದ ಶಿವಪ್ರಸಾದ್, ಗುರುಪ್ರಸಾದ್ ರನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.
ಬಂಧಿತ ಗುರುಪ್ರಸಾದ್ ವಿಚಾರಣೆ ವೇಳೆ ಇಡೀ ಘಟನಾವಳಿಗಳ ಹಿಂದೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಬ್ಬರ ಕೈವಾಡವಿರುವುದನ್ನು ಬಾಯ್ಬಿಟ್ಟಿದ್ದು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರನ್ನು ಸಿಐಡಿ ಅಧಿಕಾರಿಗಳು ಕರೆಸಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಸಿಐಡಿ ವಿಚಾರಣೆ ವೇಳೆ ಜಂಟಿ ನಿರ್ದೇಶಕರು ಗೊಂದಲದ ಹೇಳಿಕೆ ನೀಡಿದ್ದಾರೆ. ಇನ್ನು ಜಂಟಿ ನಿರ್ದೇಶಕ ಕೈವಾಡದ ಕುರಿತು ಮಹತ್ವದ ಸಾಕ್ಷ್ಯಾಧಾರ ಸಿಐಡಿಗೆ ಲಭ್ಯವಾಗಿದೆ. ಸಾಕ್ಷ್ಯದ ಸತ್ಯಾಸತ್ಯತೆ ಪರಿಶೀಲನೆಗೆ ಸಿಐಡಿ ಪೊಲೀಸರು ಎಫ್ಎಸ್ಎಲ್ಗೆ ರವಾನೆ ಮಾಡಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
ಏನಿದು ಪ್ರಕರಣ:
ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ,ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದರು. 6 ರಿಂದ 8 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೃಷಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿಯುವುದಾಗಿ ದೂರಿನ ಪತ್ರದಲ್ಲಿ ಉಲ್ಲೇಖಿಸಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯಪಾಲರು ಈ ಬಗ್ಗೆ ಸರ್ಕಾರ ಮುಖ್ಯಕಾರ್ಯದರ್ಶಿ ಪತ್ರ ಬರೆದಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರದೀಪ್ ಸೂಚಿಸಿದ್ದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಠಿಸಿತ್ತು. ಪ್ರತಿಪಕ್ಷಗಳು ಸಚಿವರ ರಾಜಿನಾಮೆಗೆ ಪಟ್ಟು ಹಿಡಿದಿದ್ದವು.