ಬೆಂಗಳೂರು, ಸೆ.20 – ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಆಮಿಷ ಒಡ್ಡುವ ಮೂಲಕ ಅಕ್ರಮ ಮಾರ್ಗದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಿದ್ದು ಈ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಬರೆದಿರುವ ಅವರು, ಪ್ರಜಾಸತ್ತಾತ್ಮಕ ನಿಯಮ ಉಲ್ಲಂಘಿಸಿ ಗೆದ್ದಿರುವ ಕಾಂಗ್ರೆಸ್ ನ ಎಲ್ಲಾ 135 ಶಾಸಕರನ್ನು ಅನರ್ಹ ಮಾಡಬೇಕು. ಅಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ವಿಸ್ತೃತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ಬಗ್ಗೆ ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಪ್ರಶ್ನಿಸಿದ್ದಾರೆ.
ಉಳಿದ ಕ್ಷೇತ್ರಗಳ ಕಥೆ ಹಾಗಿರಲಿ, ಕರ್ನಾಟಕದ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿಯೇ ಜಾತಿ ಸಮಾವೇಶ ನಡೆಸಿ ಕುಕ್ಕರ್, ಇಸ್ತ್ರಿಪೆಟ್ಟಿಗೆಗಳ ಭರ್ಜರಿ ಸಮಾರಾಧನೆ ನಡೆದಿದೆ. ಸಮಾಜವಾದಿ ಮುಖ್ಯಮಂತ್ರಿ ಮಹೋದಯರ ಹಾದಿಯಲ್ಲೇ ನಡೆದಿರುವ ಇಡೀ ರಾಜ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅದೇ ವಾಮಮಾರ್ಗದಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನಿಟ್ಟು ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ಕನ್ನಡಿಗರ ಪ್ರಜಾಸತ್ತೆಯ ಮಹಾದೇಗುಲ ವಿಧಾನಸೌಧದ ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಕೂಪನ್, ಗ್ಯಾರಂಟಿ ಕೂಪನ್ ಹಂಚಿಯೇ ಗೆದ್ದಿದ್ದಾರೆ. ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಸಹಿ ಹಾಕಿದ ಅಧಿಕೃತ ಅಮಿಷಗಳ 5 ಗ್ಯಾರಂಟಿ ಕೂಪನ್ ಗಳನ್ನು ಮನೆಮನೆಗೂ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಇದು ಸ್ವಾತಂತ್ರ್ಯ ಭಾರತ ಕಂಡ, ಅದೂ ಅಮೃತಕಾಲದಲ್ಲಿ ನಡೆದಿರುವ ಅತಿದೊಡ್ಡ ಚುನಾವಣಾ ಅಕ್ರಮ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಈ ಚುನಾವಣಾ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ನಡೆಸಬೇಕು. ಕರ್ನಾಟಕ ಮಾದರಿ ಎನ್ನುವ ವಿನಾಶಕಾರಿ ಮಹಾಮಾರಿಯನ್ನು ಇಡೀ ದೇಶಕ್ಕೆ ವಿಸ್ತರಿಸಲು ಹೊರಟಿದೆ.ಈ ಮೂಲಕ ಇಡೀ ಚುನಾವಣೆ ವ್ಯವಸ್ಥೆಯನ್ನೇ ನಾಶ ಮಾಡಲು ಸಂಚು ಹೂಡಿದೆ ಈ ಕೃತ್ಯವನ್ನು ಎಲ್ಲರೂ ತಡೆಯಲೇಬೇಕಿದೆ ಎಂದು ಅವರು ಹೇಳಿದ್ದಾರೆ.