ನವದೆಹಲಿ:
ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಎಂ ಸ್ಥಾನದ ವಿಚಾರವು ನನ್ನ, ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ನಡುವಣ ವಿಷಯವಾಗಿದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ಸಂಗತಿಯಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾಯಕತ್ವ ಬದಲಾವಣೆ ಅಥವಾ ಸಿಎಂ ಸ್ಥಾನದ ಹಂಚಿಕೆ ಕುರಿತಾದ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ರಾಹುಲ್ ಗಾಂಧಿ ಅವರ ಭೇಟಿ ವೇಳೆ ಸಿಎಂ ಸ್ಥಾನದ ಬಗ್ಗೆ ಚರ್ಚೆಯಾಯಿತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಆಂತರಿಕ ವಿಚಾರ ಎಂದು ತಿಳಿಸಿದರು.
ಪಕ್ಷದ ಯೋಜನೆಗಳು ಬಹಿರಂಗಕ್ಕಿಲ್ಲ:
ಅಸ್ಸಾಂ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ನಡೆಯಲಿರುವ ಸಭೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ನಮ್ಮ ಪಕ್ಷದ ತಂತ್ರಗಾರಿಕೆ ಹಾಗೂ ಯೋಜನೆಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಇವೆಲ್ಲವೂ ಪಕ್ಷದ ವೇದಿಕೆಯಲ್ಲಿ ಮಾತ್ರ ಚರ್ಚೆಯಾಗುವ ವಿಷಯಗಳು. ಸಾರ್ವಜನಿಕವಾಗಿ ಹೇಳಿಕೆ ನೀಡಲು ಬರುವುದಿಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನೀಡಲಿದ್ದಾರೆ” ಎಂದು ಹೇಳಿದರು.
ದೆಹಲಿ ಭೇಟಿಯ ಉದ್ದೇಶವೇನು?
ತಮ್ಮ ದೆಹಲಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ ಡಿ.ಕೆ.ಶಿವಕುಮಾರ್, “ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ. ಇದರ ಜೊತೆಗೆ ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ತೊಡಕುಗಳಿದ್ದು, ಈ ಬಗ್ಗೆ ಚರ್ಚಿಸಲು ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ” ಎಂದು ತಿಳಿಸಿದರು.
ಒಟ್ಟಿನಲ್ಲಿ ಸಿಎಂ ಸ್ಥಾನದ ವಿಚಾರವಾಗಿ ನಡೆಯುತ್ತಿರುವ ಚರ್ಚೆಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿ ಅಂಗಳದಲ್ಲಿ ಚುಟುಕು ಹಾಗೂ ಸ್ಪಷ್ಟ ಉತ್ತರ ನೀಡುವ ಮೂಲಕ ಕುತೂಹಲ ಕಾಯ್ದಿರಿಸಿದ್ದಾರೆ.

