ಬೆಂಗಳೂರು, ಸೆ.25 – ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರೈತರು, ವಿವಿಧ ಪಕ್ಷಗಳ ಮುಖಂಡರು ಕಾವೇರಿ ಕಣಿವೆಯ ವಿವಿಧ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ಬೆಂಗಳೂರು ಬಂದ್ ಹಾಗೂ ಕರ್ನಾಟಕ ಬಂದ್ ಕರೆ ಕೇಳಿಬಂದಿದೆ.
ರೈತ ನಾಯಕರು, ಕನ್ನಡ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಈ ಬಂದ್ ಕರೆಗೆ ಬೆಂಬಲ ಘೋಷಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಕೂಡ ಬಂದ್ ಗೆ ಸಹಕಾರ ನೀಡುವುದಾಗಿ ತಿಳಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಮ್ಮ ನೆಲ, ಜಲ, ಭಾಷೆ ವಿಚಾರದಲ್ಲಿ ಪಕ್ಷಾತೀತ ಹೋರಾಟ ಅಗತ್ಯ. ನಿಮ್ಮ ಹೋರಾಟಕ್ಕೆ ನಾವು ಅಡಚಣೆ ಮಾಡುವುದಿಲ್ಲ ಪ್ರತಿಭಟನೆ ಮಾಡೋಕೆ, ರಾಜ್ಯದ ಹಿತ ಕಾಪಾಡೋಕೆ ಸಹಕಾರ ಕೊಡ್ತೀವಿ ಎಂದು ಹೇಳಿದ್ದಾರೆ.
ನೀರು ಬಿಡುಗಡೆ ವಿರೋಧಿಸಿ ನಾಳೆ ಕರೆ ನೀಡಿರುವ ಬೆಂಗಳೂರು ಬಂದ್ ಗೆ 150ಕ್ಕೂ ಹೆಚ್ಚು ಸಂಘಟನೆಗಳು ಕರೆಕೊಟ್ಟಿದೆ. ಖಾಸಗಿ ಸಾರಿಗೆ ಒಕ್ಕೂಟದ 32 ಸಂಘಟನೆಗಳಿಂದಲೂ ಬೆಂಬಲ ಸಿಕ್ಕಿದೆ.
ಈಗಾಗಲೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ನಾಳೆ ರಜೆ ಘೋಷಿಸಿವೆ.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಧಾನ್ಯ ವರ್ತಕರು, ಬಟ್ಟೆ ವ್ಯಾಪಾರಿಗಳು, ಚಿನ್ನ,ಬೆಳ್ಳಿ ಮಾರಾಟಗಾರರು, ಓಲಾ,ಉಬರ್ ಕೂಡ ಬಂದ್ ಬೆಂಬಲಿಸಿವೆ.ಹೀಗಾಗಿ ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಿಲಿಕಾನ್ ಸಿಟಿ ಬೆಂಗಳೂರು ಸ್ತಬ್ಧವಾಗಲಿದೆ.
ಇದರ ಜೊತೆಯಲ್ಲಿ ರಾಮನಗರ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ ತಾಲ್ಲೂಕಿನಲ್ಲೂ ಬಂದ್ ನಡೆಸಲು ಸ್ಥಳೀಯ ಸಂಘಟನೆಗಳು ನಿರ್ಧರಿಸಿವೆ.