ಬೆಂಗಳೂರು, ನ.16-
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಮಗಾರಿಗಳಿಗೆ ಶೇಕಡ 40ರಷ್ಟು ಕಮಿಷನ್ ಕೊಡಬೇಕು ಎಂದು ಮಾಡಿದ್ದ ಆರೋಪ ಸುಳ್ಳು ಎಂದು ಬೆಳಕಿಗೆ ಬಂದಿದೆ.
ಅಂದು ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾ ಪತಿ ಎನ್ನುವರು ಈ ಬಗ್ಗೆ ಆರೋಪ ಮಾಡಿದ್ದರು ಅದನ್ನು ಅದನ್ನು ಅಂದು ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ರಾಜಕೀಯ ಹೋರಾಟಕ್ಕೆ ಅಸ್ತ್ರವನ್ನಾಗಿ ಮಾಡಿಕೊಂಡಿತ್ತು.
ಸಾಕಷ್ಟು ಚರ್ಚೆಗೆ ಗ್ರಾಸವಾದ ಈ ಪ್ರಕರಣವನ್ನು ಅಂದಿನ ಸರ್ಕಾರ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.
ಅಚ್ಚರಿಯೆಂದರೆ, ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಿದ್ದಾರೆ. ಅಂಬಿಕಾಪತಿ ಅಂದು ಮಾಡಿದ್ದ ಆರೋಪಗಳು ಆಧಾರರಹಿತ ಎಂಬುದು ಲೋಕಾಯುಕ್ತ ತನಿಖಾ ವರದಿಯಿಂದ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.
ಅಂಬಿಕಾಪತಿ ಬಿಬಿಎಂಪಿ ಆಟದ ಮೈದಾನದ ಕಾಮಗಾರಿಯ ಗುತ್ತಿಗೆಗಾಗಿ ಅಧಿಕಾರಿಗಳಿಗೆ ಮತ್ತು ಮಧ್ಯವರ್ತಿಗಳಿಗೆ ಲಂಚ ನೀಡಿದ್ದೇನೆ ಎಂದು ಹೇಳಿದ್ದರು.
ಈ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ,ಆರೋಪ ಮಾಡಿರುವ ಅಂಬಿಕಾಪತಿ, ಬಿಬಿಎಂಪಿ ಪೂರ್ವ ವಿಭಾಗದಲ್ಲಿ ಕಳೆದ 6 ವರ್ಷಗಳಲ್ಲಿ ಆಟದ ಮೈದಾನಕ್ಕೆ ಸಂಬಂಧಿಸಿದ ಗುತ್ತಿಗೆ ಪಡೆಯದೇ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕುರಿತ ದಾಖಲೆಗಳನ್ನೂ ಪರಿಶೀಲಿಸಲಾಗಿದ್ದು, ಗುತ್ತಿಗೆದಾರ ಎನ್ಎಂ ಕೃಷ್ಣಮೂರ್ತಿ ಕಾಮಗಾರಿ ಪೂರ್ಣಗೊಳಿಸಿರುವುದು ತಿಳಿದುಬಂದಿದೆ ಹೀಗಾಗಿ ಇವರು ಮಾಡಿದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

