ಬೆಂಗಳೂರು,ಜು.3-
ರಾಜ್ಯದ ಯಾವುದೇ ಭಾಗದಲ್ಲಿ ಕಲುಷಿತ ನೀರಿನ ಪ್ರಕರಣಗಳು ಜರುಗಬಾರದು ಇದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಲ್ಲಿಯಾದರೂ ಇಂತಹ ಪ್ರಕರಣ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ವಿಶ್ವಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಲುಷಿತ ನೀರಿನ ಹಾಗೂ ವಿಷಾಹಾರ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದರು.
ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು.ಇನ್ನು ಮುಂದೆ ಯಾವುದೇ ಪ್ರಕರಣಗಳು ವರದಿಯಾದರೂ ಅದಕ್ಕೆ ಅಧಿಕಾರಿಗಳನ್ನು ಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.
ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ರೋಗಕ್ಕೆ ಕಾರಣವಾಗುವ ಸೊಳ್ಳೆಗಳನ್ನು ನಾಶಪಡಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಇಲಾಖೆ, ಬಿಬಿಎಂಪಿ, ಸ್ಥಳೀಯ ಆಡಳಿತದ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ತ್ಯಾಜ್ಯವನ್ನು ಬೇಕಾಬಿಟ್ಟಿ ಬಿಸಾಡುವ ಬದಲು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಮಳೆ ನೀರನ್ನು ಸಂರಕ್ಷಿಸುವ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹೇಳಿದರು.
ನಿಸರ್ಗವನ್ನು ಪ್ರೀತಿಸಬೇಕು. ಮರಗಿಡಗಳನ್ನು ಬೆಳೆಸಬೇಕು. ಒಂದು ಮರ ಕಡಿದರೆ, ಅದಕ್ಕೆ ಬದಲಾಗಿ ಮತ್ತೊಂದು ಗಿಡ ನೆಡಬೇಕು. ಕಳೆದ 20 ವರ್ಷಗಳಿಂದಲೂ ನೆರೆ ಹಾಗೂ ಬರ ಪರಿಸ್ಥಿತಿಗಳು ರಾಜ್ಯವನ್ನು ಕಾಡುತ್ತಿವೆ. ಇವುಗಳನ್ನು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆಗಳು ಸರಿಯಾದ ದಾರಿಯಲ್ಲಿರಬೇಕು. ಎಲ್ಲೆಲ್ಲಿ ಸಂಶೋಧನಾ ಕೇಂದ್ರಗಳನ್ನು ತೆರೆಯಬೇಕು ಎಂಬ ಬಗ್ಗೆ ಗಮನ ಕೊಡುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದರು.
ಮಕ್ಕಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಬೇಕು. ಜಾಗತಿಕ ಅಸಮತೋಲನಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಒಂದು ದಿನ ಕಾರ್ಯಕ್ರಮ ಆಚರಿಸಿ ಮರೆತುಬಿಡುವ ಬದಲು ಪ್ರತಿದಿನವೂ ಪರಿಸರ ರಕ್ಷಣೆಯ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
Previous Articleಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
Next Article ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.


1 Comment
Stackshine https://en.stackshine.io simplifies SaaS spend management with full software visibility, renewal tracking, and employee offboarding automation. Reduce costs, eliminate unused tools, and gain control over subscriptions with a smarter, centralized platform.