ಬೆಂಗಳೂರು, ಜೂ.4- ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವಾರಗಳು ಕಳೆದಿಲ್ಲ ಈಗಾಗಲೇ ಸರ್ಕಾರದ ಕೆಲವು ನಿರ್ಧಾರಗಳು ವಿವಾದಕ್ಕೆ ಕಾರಣವಾಗಿದ್ದು ಇದರ ವಿರುದ್ಧ ಬೀದಿ ಹೋರಾಟ ನಡೆಸಲು ಬಿಜೆಪಿ ಮುಂದಾಗಿದೆ.
ಪಠ್ಯಪುಸ್ತಕ ಪರಿಷ್ಕರಣೆ ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಸೇರಿದಂತೆ ಹಲವು ಕಾಯ್ದೆಗಳನ್ನು ಪರಿಷ್ಕರಿಸಲು ರಾಜ್ಯಸರ್ಕಾರ ಮುಂದಾಗಿದೆ ಎಂಬ ವರದಿಗಳ ಬೆನ್ನಲ್ಲೇ ಪಶು ಸಂಗೋಪನೆ ಸಚಿವ ಕೆ ವೆಂಕಟೇಶ್ ನೀಡಿದ ಹೇಳಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ
ಸಚಿವ ಕೆ.ವೆಂಕಟೇಶ್ ಎತ್ತು, ಎಮ್ಮೆ, ಕೋಣ ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. ಇದು ಬಿಜೆಪಿಯಲ್ಲಿ ಆಕ್ರೋಶದ ಕಿಚ್ಚನ್ನು ಹಚ್ಚಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈಕಮಾಂಡ್ ಮೆಚ್ಚಿಸಲೊ ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ ಎಂದು ತಿಳಿಸಿದ್ದಾರೆ.
ತಾಕತ್ತಿದ್ದರೆ ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಮಾಡಲಿ ಎಂದು ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ರವಿಕುಮಾರ್ ರಾಜ್ಯ ಸರ್ಕಾರದ ಈ ಧೋರಣೆಯನ್ನು ವಿರೋಧಿಸಿ ಗೋ ಪೂಜೆ ಅಭಿಯಾನ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.
ಉಚಿತ ವಿದ್ಯುತ್ ನ ಗೊಂದಲ ವಿದ್ಯುತ್ ದರ ಹೆಚ್ಚಳ ಮತ್ತು ಹಾಲು ಖರೀದಿ ದರ ಕಡಿತ ಮಾಡುವ ಮೂಲಕ ರಾಜ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸುತ್ತಿದೆ. ಸರಕಾರದ ಮೂರು ಜನವಿರೋಧಿ ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ನಾಳೆ ಮತ್ತು ನಾಡಿದ್ದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಈ ಮುಂಚೆ ಮನೆಗಳಲ್ಲಿ ಪ್ರತಿ ತಿಂಗಳು 70 ಯೂನಿಟ್ ವಿದ್ಯುತ್ ಬಳಸುತ್ತಿದ್ದರೆ 80 ಯೂನಿಟ್ ಬಳಸಿ. ಆದರೆ, ಯಾವುದೇ ಕಾರಣಕ್ಕೂ 80 ಯೂನಿಟ್ ಮೀರುವಂತಿಲ್ಲ ಎಂದು ನಿರ್ಬಂಧವನ್ನು ಹಾಕಿದೆ. ಹಾಗಿದ್ದರೆ ಈ ಹಿಂದೆ 200 ಯೂನಿಟ್ ಎಂದಿದ್ದೀರಲ್ಲವೇ? ಆ ಮಾತನ್ನು ನಡೆಸಿಕೊಡದೆ ಮಾತು ತಪ್ಪಿದವರು ಅಥವಾ ವಚನಭ್ರಷ್ಟತೆ ಆದಂತಲ್ಲವೇ? ಎಂದು ಕೇಳಿದರು.
ವಿದ್ಯುತ್ ಶುಲ್ಕವನ್ನೂ ಏರಿಸಿದ್ದೀರಿ. ಒಂದು ಯೂನಿಟ್ಗೆ 70 ಪೈಸೆ ಹೆಚ್ಚಿಸಲಾಗಿದೆ. ಅಂದರೆ 80 ಯೂನಿಟ್ಗೆ 56 ರೂ. ಹೆಚ್ಚಿಸಿದಂತಾಗಿದೆ. ಒಂದು ಸಾವಿರ ಯೂನಿಟ್ ಬಳಸುತ್ತಿದ್ದರೆ, 500, 300 ಯೂನಿಟ್ ಉಪಯೋಗಿಸಿದ್ದರೆ ಆ ಮೊತ್ತ ಉಚಿತ ಕೊಡಲು ಬಂದಂತಾಯಿತು. ಹಾಗಿದ್ದರೆ ಸರಕಾರ ಮಾಡಿದ್ದೇನು? ಸರಕಾರ ಒಂದೆಡೆ ಉಚಿತ ಎನ್ನುತ್ತದೆ; ಅದೇರೀತಿಯಲ್ಲಿ ಶುಲ್ಕ ಹೆಚ್ಚಿಸಿ ಜನರಿಂದಲೇ ಮತ್ತೆ ವಸೂಲಾತಿ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಹೆಚ್ಚಿಸಿದ 70 ಪೈಸೆ ದರವನ್ನು ವಾಪಸ್ ಪಡೆಯಲು ಆಗ್ರಹಿಸುತ್ತದೆ ಎಂದು ತಿಳಿಸಿದರು.
ಹಾಲಿನ ಪ್ರೋತ್ಸಾಹಧನವನ್ನು ಪ್ರತಿ ಲೀಟರ್ಗೆ 5 ರೂಪಾಯಿಗೆ ಬಿಜೆಪಿ ಸರಕಾರ ಹೆಚ್ಚಿಸಿತ್ತು. ಅದನ್ನು 1.5 ರೂ. ಕಡಿಮೆ ಮಾಡಿದ್ದೀರಿ. ಇದರಿಂದ ಸರಕಾರಕ್ಕೆ ಹಣ ಉಳಿತಾಯ ಆಗುತ್ತಿದೆ. ಹಾಗಿದ್ದರೆ ನೀವು ಬಡವರಿಗೆ ಏನು ಸಹಾಯ ಮಾಡಿದಂತಾಯಿತು? ಬಡವರಿಗೆ ಹೇಗೆ ನೆರವಾದಂತಾಯಿತು? ಎಂದು ಕೇಳಿದರು. ಹಾಲು ಉತ್ಪಾದನೆಯಿಂದ ಜೀವನ ಮಾಡುವ ಲಕ್ಷಾಂತರ ಕುಟುಂಬಗಳು ಕರ್ನಾಟಕದಲ್ಲಿವೆ. ಅವರಿಗೆ ಸಹಾಯ ಮಾಡಬೇಕೆಂಬ ದೃಷ್ಟಿಯಿಂದ ನಾವು ಪ್ರೋತ್ಸಾಹಧನವನ್ನು 5 ರೂಪಾಯಿಗೆ ಹೆಚ್ಚಿಸಿದ್ದೆವು ಎಂದು ವಿವರಿಸಿದರು. ಹಾಲು ಉತ್ಪಾದಕರಿಗೆ ದೊಡ್ಡ ಹೊಡೆತ ಇದು. ಇದನ್ನು ಬದಲಿಸಿ ಹಿಂದಿನಂತೆ ಪ್ರೋತ್ಸಾಹಧನ ಕೊಡಲು ಆಗ್ರಹಿಸಿದರು.
ನೂತನ ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರು ಒಂದು ಹೇಳಿಕೆ ಕೊಟ್ಟಿದ್ದಾರೆ. ಬಿಜೆಪಿ ಸರಕಾರ ಈ ಹಿಂದೆ ಜಾರಿ ಮಾಡಿದ್ದ ಗೋಹತ್ಯಾ ನಿಷೇಧ ಕಾನೂನು ಕುರಿತು ಚರ್ಚಿಸಿ ಅದನ್ನು ಹಿಂಪಡೆಯುತ್ತೇವೆ; ಮತ್ತೆ ಗೋಹತ್ಯೆಗೆ ಅವಕಾಶ ಕೊಡುತ್ತೇವೆ; ನಮ್ಮ ಮನೆಯಲ್ಲೇ ವಯಸ್ಸಾದ ಹಸುಗಳಿದ್ದವು. ಅವುಗಳನ್ನು ಹೇಗೆ ರಕ್ಷಿಸುವುದು? ಹೇಗೆ ಸಾಕಲು ಸಾಧ್ಯ? ನಮಗೆ ನಷ್ಟ ಆಗುತ್ತದೆ ಎಂದಿದ್ದಾರೆ. ಅವುಗಳು ಸತ್ತಾಗ ಹೂಳಲೂ ಕಷ್ಟವಾಗುತ್ತಿದೆ. ಆದ್ದರಿಂದ ವಯಸ್ಸಾದ ಗೋವುಗಳನ್ನು ವಧೆ ಮಾಡಲು ಅವಕಾಶ ಕೊಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ಟೀಕಿಸಿದರು.
ಹಸುಗಳನ್ನು ನಮ್ಮ ದೇಶದಲ್ಲಿ ಪವಿತ್ರ ಭಾವನೆಯಿಂದ ಪೂಜೆ ಮಾಡುತ್ತಾರೆ. ಮಹಾತ್ಮ ಗಾಂಧಿಯವರು ಕೂಡ ಗೋಹತ್ಯೆ ಮಾಡಬಾರದು ಎಂದಿದ್ದರು. 1948 ಮತ್ತು 1964ರಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಕಾಂಗ್ರೆಸ್ ಸರ್ಕಾರವೇ ಜಾರಿಗೆ ತಂದಿತ್ತು. ಇದರಲ್ಲಿ ಎಮ್ಮೆ ಮತ್ತು ಕೋಣಗಳನ್ನು ವಧಿಸಬಹುದೆಂದು ಇದೆ. 1978ರ ಕಾನೂನಿನಲ್ಲಿ ಎತ್ತು ಮತ್ತು ಹೋರಿಗಳನ್ನು, 2020ರ ನಮ್ಮ ಸರ್ಕಾರ ತಂದ ಕಾನೂನಿನಲ್ಲಿ ಗೋಹತ್ಯೆ ಮತ್ತು ಎತ್ತು/ಹೋರಿಗಳನ್ನು ಹತ್ಯೆ ಮಾಡಬಾರದು ಎಂದು ಹೇಳಿವೆ. ಆದರೆ, ಸಿದ್ದರಾಮಯ್ಯ ಸರಕಾರವು ಗೋಹತ್ಯೆ ಅವಕಾಶ ಮಾಡಿಕೊಡಲು ಹೊರಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕಾನೂನು ರದ್ದತಿ ಪ್ರಸಾಪ್ತವನ್ನು ಬಿಜೆಪಿ ಖಂಡಿಸುತ್ತದೆ ಗೋಹತ್ಯಾ ನಿಷೇಧ ಕಾನೂನು ಹಿಂಪಡೆದರೆ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು
Previous Articleರೈಲು ದುರಂತಕ್ಕೆ ಕಾರಣ ಇನ್ನೂ ಸ್ಪಷ್ಟವಿಲ್ಲ
Next Article 41ನೇ ವಯಸ್ಸಿಗೇ ಮೃತರಾದ ಇನ್ಸ್ಪೆಕ್ಟರ್ ಮಂಜುನಾಥ್


1 Comment
https://pinnacle-bet.com.mx/
La plataforma Pinnacle no representa el casino habitual que te engancha con promociones gigantescas repletos de requisitos inalcanzables; su planteamiento se fundamenta en margenes ajustados, cuotas de alto valor y una dinamica sin ocultismos sin trucos.