ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದೆ.
ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡ ಎಸಿಬಿ ಮಂಗಳವಾರ ಬೆಳಿಗ್ಗೆ ಜಮೀರ್ ಮನೆ, ಕಚೇರಿ ಸೇರಿದಂತೆ ಐದು ಕಡೆ ದಾಳಿ ಮಾಡಿದೆ. ಏಕಕಾಲಕ್ಕೆ ಈ ದಾಳಿಯನ್ನು ನಡೆಸಲಾಗಿದ್ದು, ಕಂಟೋನ್ಮಂಟ್ ರೈಲ್ವೇ ನಿಲ್ದಾಣ ಬಳಿಯ ಜಮೀರ್ ನಿವಾಸ, ಸಿಲ್ವರ್ ಓಕ್ ಅಪಾರ್ಟೆಂಟ್ ನಲ್ಲಿಯ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆದಿದೆ. ದಾಳಿ ಮಾಡಿರುವ ಅಧಿಕಾರಿಗಳು ಈಗ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.