ಬೆಂಗಳೂರು , ಅ.3 – ರಾಜ್ಯದ ಮೌಲಾನಾ ಅಜಾದ್ ಮಾದರಿ ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ಉನ್ನತ ಶಿಕ್ಷಣದ ವೆಚ್ಚ ಭರಿಸುವ ಚಿಂತನೆ ನಡೆಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆಯಲ್ಲಿ1.60 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮೌಲಾನಾ ಅಜಾದ್ ಮಾದರಿ ಶಾಲೆ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಬಡವರ ಮಕ್ಕಳು ಬಡತನ ಹಾಗೂ ಆರ್ಥಿಕ ಸಂಕಷ್ಟ ಕಾರಣ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಚನೆ ಮಾಡಲಾಗಿದೆ ಎಂದು ಹೇಳಿದರು.
ನಾನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊಣೆಗಾರಿಕೆ ತೆಗೆದುಕೊಂಡ ನಂತರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ.ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ. ಇದನ್ನು ಅರ್ಥಮಾಡಿಕೊಂಡು ಮುಸ್ಲಿಂ ಸಮುದಾಯ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡಬೇಕು ಎಂದು ತಿಳಿಸಿದರು.
ಮುಸ್ಲಿಂ ಸಮುದಾಯದ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಗಮನ ಕೊಡಿ. ಶಿಕ್ಷಣವೇ ದೊಡ್ಡ ಶಕ್ತಿ, ಅದಕ್ಕಿರುವ ಬೆಲೆ ಯಾವುದಕ್ಕೂ ಇಲ್ಲ ಎಂದು ಮನವಿ ಮಾಡಿದ ಅವರು, ಬಿಜೆಪಿ ಸರ್ಕಾರ ಸ್ಥಗಿತ ಗೊಳಿಸಿದ್ದ ವಿದ್ಯಾರ್ಥಿ ವೇತನ ನಮ್ಮ ಸರ್ಕಾರ ಬಂದ ನಂತರ ದೇಶದಲ್ಲಿ ಮೊದಲು ಪುನರ್ ಆರಂಭಿಸಿದೆ ಎಂದು ಹೇಳಿದರು.
ವೈದ್ಯಕೀಯ, ಇಂಜಿನಿಯರ್ ಸೇರಿ ಉನ್ನತ ಶಿಕ್ಷಣ ಪಡೆಯುವ, ವಿದೇಶದಲ್ಲಿ ವ್ಯಾಸಂಗ ಮಾಡುವ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಸಾಲದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ನಿಮ್ಮ ಶಕ್ತಿ ತೋರಿಸಿ. ನಿಮ್ಮ ಮತ ಬೇಕಿಲ್ಲ ಎಂದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಾಗಿ ನಿಮ್ಮ ಹಿತರಕ್ಷಣೆ ಮಾಡುವ ಪಕ್ಷ ಕಾಂಗ್ರೆಸ್ ಒಂದೇ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದು ಎಂದು ಹೇಳಿದರು.
ಮಾಜಿ ಪ್ರಧಾನಿ ದೇವೇಗೌಡರಿಗೆ ಬಿಜೆಪಿ ಜತೆ ಮೈತ್ರಿ ಇಷ್ಟವಿಲ್ಲ, ಬಲವಂತ ಮಾಡಿ ಒಪ್ಪಿಸಲಾಗಿದೆ. ದೇವೇಗೌಡರು ಈಗಲೂ ಸೆಕ್ಯುಲರ್, ಕುಮಾರಸ್ವಾಮಿ ಸ್ವಾರ್ಥಕ್ಕೆ ಪಕ್ಷ ಬಲಿ ಕೊಟ್ಟಿದ್ದಾರೆ, ಮೈತ್ರಿ ಮಾತುಕತೆಗೆ ರಾಜ್ಯಾಧ್ಯಕ್ಷ ಇಬ್ರಾಹಿಂ ಕರೆದು ಕೊಂಡು ಹೋಗಿಲ್ಲ, ಇರುವ ಒಬ್ಬ ಸಂಸದ ಪ್ರಜ್ವಲ್ ಅವರೂ ಇರಲಿಲ್ಲ ಎಂದರು.


1 Comment
La pharmacie qui vous offre qualitГ©, proximitГ© et sГ©rГ©nitГ© – https://www.pharmacie-ouaki-la-riviere.com/mentions-legales/ , Des solutions pour toute la famille dans notre pharmacie complГЁte .