ಬೆಂಗಳೂರು:
ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರಿಗೆ ಅಮೆರಿಕದಲ್ಲಿ ನಡೆಸಿದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಹಲವು ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ.
ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ ಶಿವಣ್ಣ ಬೇಗ ಚೇತರಿಸಿಕೊಳ್ಳಲಿ ಎಂದು ರಾಜ್ಯದ ಹಲವೆಡೆಗಳಲ್ಲಿ ಹೋಮ, ಪೂಜೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಶಿವರಾಜ್ಕುಮಾರ್ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ನಟ ಶಿವರಾಜ್ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್ಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ ಎಂದು ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿದ್ದಾರೆ
Previous Articleಪಾರ್ಟಿ ಹೆಸರಲ್ಲಿ ಖದೀಮರ ಕರಾಮತ್ತು.
Next Article ಡಿಜಿಟಲ್ ಅರೆಸ್ಟ್ ಎನ್ನುವುದೇ ಇಲ್ಲ.

