ಬೆಂಗಳೂರು,
ನಾಯಕತ್ವ ಬದಲಾವಣೆ ಕುರಿತಾದ ವಿಚಾರಗಳು ನಿರ್ಣಾಯಕ ಘಟ್ಟ ತಲುಪಿವೆ ಎಂದು ಹೇಳುತ್ತಿರುವಾಗಲೇ ಗ್ರಾಮೀಣಾಭಿವೃದ್ಧಿ ಮಂತ್ರಿ ಪ್ರಿಯಾಂಕ ಖರ್ಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುಧೀರ್ಘ ಸಮಾಲೋಚನೆ ನಡೆಸಿದರು.
ಬೆಳಗ್ಗೆ ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಪ್ರಿಯಾಂಕ ಖರ್ಗೆ ಅವರು ಸುದೀರ್ಘ ಎರಡು ಗಂಟೆಗಳ ಕಾಲ ಅವರ ಜೊತೆ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್ ಗಳ ಕುರಿತಂತೆ ಪ್ರತಿಕ್ರಿಯೆ ನೀಡಿದರು.
ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಿಗಳು ಯಾರು ಇಲ್ಲ ಅವರಿಗೆ ಯಾರಾದರೂ ವಿರೋಧಿಗಳು ಅಂತ ಇದ್ದರೆ ಅದು ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂದು ಸ್ಪಷ್ಟಪಡಿಸಿದರು
ಕುರಿ ಕಾಯುವವನು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಿಕೊಳ್ಳುತ್ತಿಲ್ಲ ಎಂದು ಹೇಳುವುದು ಸರಿಯಲ್ಲ. ಸಹಿಷ್ಣುತೆ ಇಲ್ಲದಿದ್ದರೆ ಸಿದ್ದರಾಮಯ್ಯ ಅವರಿಗೆ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಲು ಮತ್ತು ಅಷ್ಟೊಂದು ಬಜೆಟ್ ಮಂಡಿಸಲು ಸಾಧ್ಯವಾಗುತ್ತಿತ್ತೇ? ಎಂದು ಪ್ರಶ್ನಿಸಿದರು
ಮುಖ್ಯಮಂತ್ರಿ ಅವರ ಪರವಾಗಿ ಯಾರು ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೋ ಗೊತ್ತಿಲ್ಲ. ಆದರೆ ಅದನ್ನು ಒಪ್ಪಲಾಗುವುದಿಲ್ಲ ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ
ಅರಸು ಅವರ ದಾಖಲೆಯನ್ನೇ ಮುರಿದು ಹೆಚ್ಚಿನ ಅವರಿಗೆ ರಾಜ್ಯದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ ಅಷ್ಟೇ ಅಲ್ಲ ಹಣಕಾಸು ಮಂತ್ರಿಯಾಗಿ ಸಿದ್ದರಾಮಯ್ಯ 16 ಬಜೆಟ್ ಮಂಡಿಸಿ, 17ನೇ ಬಜೆಟ್ಗೆ ತಯಾರಿ ನಡೆಸಿದ್ದಾರೆ. ಒಳ್ಳೆಯ ಆಡಳಿತ ನೀಡಿದ್ದಾರೆ ಸಹಿಷ್ಣುತೆ ಇಲ್ಲದೆ ಇದ್ದರೆ ಇದೆಲ್ಲವೂ ಸಾಧ್ಯವಾಗುತ್ತಿತ್ತೇ? ಎಂದು ಕೇಳಿದರು.
ಸಿದ್ದರಾಮಯ್ಯ ಅವರು 2013ರಿಂದ 2018ರ ನಡುವೆ ಮುಖ್ಯಮಂತ್ರಿಯಾಗಿದ್ದಾಗ ಹಲವು ಭಾಗ್ಯ ಸರಣಿಯ ಯೋಜನೆ ನೀಡಿದ್ದರು. ಈ ಬಾರಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ನ ಎಲ್ಲರೂ ಅವರ ಜೊತೆ ಇರುವ ಕಾರಣಕ್ಕೆ ಇದು ಸಾಧ್ಯವಾಗಿದೆ. ಆದರೂ ಯಾವ ಸಂದರ್ಭದಲ್ಲಿ ಅವರು ಹೇಳಿದ್ದಾರೋ ಗೊತ್ತಿಲ್ಲ ಎಂದರು.
ಸಿದ್ದರಾಮಯ್ಯ ಅವರು ಬುದ್ಧ, ಬಸವ, ಅಂಬೇಡ್ಕರ್ ತತ್ವಗಳನ್ನು ಪಾಲಿಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ಬದ್ಧತೆ ಹೊಂದಿದ್ದಾರೆ. ಇದಕ್ಕೆ ರಾಜಕೀಯ ಎದುರಾಳಿಗಳಾಗಿರುವುದು ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ಮಾತ್ರ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿಗೆ ಯಾರು ವಿರೋಧಿಗಳಿಲ್ಲ ಎಂದು ಸ್ಪಷ್ಟ ಪಡಿಸಿದರು. ಕಾಂಗ್ರೆಸ್ ನಲ್ಲಿ ಸುಧೀರ್ಘಕಾಲ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ನಮಲ್ಲಿ ಯಾರು ಸಿದ್ದರಾಮಯ್ಯ ಅವರಿಗೆ ವಿರೋಧಿಗಳಿಲ್ಲ. ಎಲ್ಲರೂ ಹಿತೈಷಿಗಳೇ ಆಗಿದ್ದಾರೆ ಎಂದು ಸ್ಪಷ್ಟಪಡಿಸಿದರು.

