ಬೆಂಗಳೂರು, ಜ.10- ಲೋಕಸಭೆ Electionಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ಇದೀಗ ದಲಿತ ಸಮುದಾಯದ ಮತಗಳ ಓಲೈಕೆಗೆ ಮುಂದಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈ ಸಮುದಾಯದ ಮತದಾರರು ಕಾಂಗ್ರೆಸ್ ಬೆಂಬಲಿಸಿದ ಪರಿಣಾಮವಾಗಿ ಬಿಜೆಪಿ ಅಧಿಕಾರಕ್ಕೆ ಬರಲಿಲ್ಲ. ಅಧಿಕಾರದಲ್ಲಿದ್ದಾಗ ಕೈಗೊಂಡ ಕೆಲವು ನಿರ್ಧಾರಗಳು ದಲಿತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದವು.
ಈ ಕುರಿತಂತೆ ಹೈಕಮಾಂಡ್ ನೀಡಿರುವ ಸೂಚನೆ ಆಧರಿಸಿ, ದಲಿತ ಸಮುದಾಯದ ಮತಗಳನ್ನು ಸೆಳೆಯಲು ಪ್ರಯತ್ನ ಆರಂಭಿಸಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ದಲಿತ ಮತದಾರರನ್ನು ಆಕರ್ಷಿಸಲು ಪ್ರತಿ ಜಿಲ್ಲೆಯಲ್ಲೂ ಭೀಮ ಸಮಾವೇಶ (Bheema Samavesha) ನಡೆಸಲು ಮುಂದಾಗಿದೆ.ಸಂಕ್ರಾಂತಿ ಮುಗಿಯುತ್ತಿದ್ದಂತೆ ಜಿಲ್ಲಾ ಮಟ್ಟದಲ್ಲಿ ಭೀಮ ಸಮಾವೇಶ ನಡೆಯಲಿದೆ ಇವಗಳ ಬಳಿಕ ಮಧ್ಯ ಕರ್ನಾಟಕದಲ್ಲಿ ಬೃಹತ್ ರಾಜ್ಯ ಮಟ್ಟದ ಸಮಾವೇಶ ನಡೆಸಲು ತೀರ್ಮಾನಿಸಿದೆ.
ಪ್ರತಿ ಜಿಲ್ಲೆಯಲ್ಲೂ ಒಂದೊಂದು ಸಮಾವೇಶಕ್ಕೆ 50 ಸಾವಿರದಿಂದ ಒಂದು ಲಕ್ಷದವರೆಗೂ ಜನರನ್ನು ಸೇರಿಸಬೇಕೆಂದು ಹೈಕಮಾಂಡ್ ಸೂಚಿಸಿದ್ದು, ಇದರಲ್ಲಿ ರಾಜ್ಯ ಮುಖಂಡರ ಜೊತೆಗೆ ಕೇಂದ್ರದ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ ಅಂತ್ಯಕ್ಕೆ ಇಲ್ಲವೇ ಮಾರ್ಚ್ ಮೊದಲ ವಾರದಲ್ಲಿ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರಮೋದಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಆಹ್ವಾನಿಸುವ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ. ಈಗಾಗಲೇ ಸಮಾವೇಶಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದ್ದು,ಸಂಕ್ರಾಂತಿ ಮುಗಿದ ನಂತರ ವಾರಕ್ಕೆ ಎರಡೆರಡು ಸಮಾವೇಶಗಳು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.