ಬೆಂಗಳೂರು,ಏ.23- ವಿಧಾನಸಭೆ Electionಯ ಹೊಸ್ತಿಲಿನಲ್ಲಿ ರಾಜ್ಯ ಕಾಂಗ್ರೆಸ್ಸಿಗೆ ಹೊಸ ಸವಾಲು ಎದುರಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಲೈಂಗಿಕ ಕಿರುಕುಳ ಆರೋಪದಲ್ಲಿ ಸಿಲುಕಿದ್ದು ಬಂಧನದ ಭೀತಿ ಎದುರಿಸುತ್ತಿದ್ದಾರೆ.
ವಿಧಾನಸಭಾ ಚುನಾವಣೆಯ ಸಮಯದಲ್ಲಿ ನಡೆದಿರುವ ಈ ಬೆಳವಣಿಗೆ ಕಾಂಗ್ರೆಸ್ ಪಾಲಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಅಸ್ಸಾಂನ ಯುವ ಕಾಂಗ್ರೆಸ್ನ ಘಟಕದ ಅಧ್ಯಕ್ಷೆಯಾಗಿದ್ದ ಡಾ.ಅಂಕಿತಾ ದತ್ತಾ ಇವರ ವಿರುದ್ಧ ಮಾಡಲಾಗಿರುವ ಆರೋಪ ಆಧರಿಸಿ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸರ ಬಂಧನಕ್ಕೆ ಅಸ್ಸಾಂ ಪೊಲೀಸರ ವಿಶೇಷ ತಂಡ ಬೆಂಗಳೂರಿಗೆ ಆಗಮಿಸಿದೆ.
ಅಸ್ಸಾಂ ಗುಹಾಟಿಯ ಐಪಿಎಸ್ ಅಧಿಕಾರಿ ಪ್ರತೀಕ್ ನೇತೃತ್ವದಲ್ಲಿ ಪೊಲೀಸರ ತಂಡ ಬೆಂಗಳೂರಿಗೆ ಆಗಮಿಸಿದ್ದು ಸ್ಥಳೀಯ ಪೊಲೀಸರ ನೆರವಿನಲ್ಲಿ ಬಸವೇಶ್ವರನಗರದಲ್ಲಿರುವ ಬಿ.ವಿ.ಶ್ರೀನಿವಾಸ್ರ ಮನೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿ.ವಿ.ಶ್ರೀನಿವಾಸ್ ಕಾಂಗ್ರೆಸ್ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ಈಗ ಅವರಿಗೆ ಕಾನೂನಿನ ತೊಡಕು ಎದುರಾಗಿದ್ದು, ಬಂಧನ ಭೀತಿ ಉಂಟಾಗಿದೆ. ಅಸ್ಸಾಂನ ಯುವಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿದ್ದ ಅಂಕಿತಾ ದತ್ತಾ ಆರೋಪ ಮಾಡಿ, ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮತ್ತು ಅಸ್ಸಾಂನ ಉಸ್ತುವಾರಿ ನೋಡಿಕೊಳ್ಳುವ ಪ್ರಧಾನ ಕಾರ್ಯದರ್ಶಿ ಕಳೆದ ಆರು ತಿಂಗಳಿನಿಂದ ತಮಗೆ ನಿರಂತರ ಕಿರುಕೂಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಕುರಿತು ತಾವು ಕಾಂಗ್ರೆಸ್ನ ಹಿರಿಯ ನಾಯಕರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಆರೋಪಿಸಿದ್ದರು. ಅದರ ಆಧಾರದ ಮೇಲೆ ಕಾಂಗ್ರೆಸ್ ಅಂಕಿತಾರನ್ನು ಪಕ್ಷದಿಂದ ನಿನ್ನೆಯಷ್ಟೆ ಆರು ವರ್ಷಗಳ ಕಾಲ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿದೆ.
ಅದರ ಬೆನ್ನಲ್ಲೆ ಗುವಹಾಟಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಶ್ರೀನಿವಾಸ್ರನ್ನು ಬಂಧಿಸಲು ಕಾರ್ಯಚರಣೆಯನ್ನು ಆರಂಭಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಅಸ್ಸಾಂ ಪೊಲೀಸರಿಗೆ ನೋಟಿಸ್ ನೀಡಿದ್ದು, ವಿವರಣೆ ಕೇಳಿದೆ.