ಬೆಂಗಳೂರು, ಜ.9- ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ನಿಯೋಗ ತಕ್ಷಣವೇ ಬರ ಪೀಡಿತರ ನೆರವಿಗೆ ಧಾವಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಿದರು.
ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್,ಕಳೆದ 70 ವರ್ಷಗಳಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲ. ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ ಸುಮಾರು 600ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಆ ಕಡೆ ಸರ್ಕಾರ ತಿರುಗಿಯೂ ನೋಡಿಲ್ಲ. ತೀವ್ರ ಬರವಿದ್ದರೂ ರೈತರಿಗೆ ಪರಿಹಾರ ಧನ ತಲುಪಿಸಿಲ್ಲ. ರೈತರಿಗೆ ದಿಕ್ಕು ತೋಚದಂತೆ ಮಾಡಿದ್ದಾರೆ ಎಂದು ಆಪಾದಿಸಿದರು.
ನಮ್ಮ ಸರ್ಕಾರ ಅಧಿಕಾರಿದಲ್ಲಿದ್ದಾಗ ಕೇಂದ್ರದ ನೆರವಿಗೆ ಕಾಯದೆ ಡಿಬಿಟಿ ಮೂಲಕ ರೈತರಿಗೆ 3 ಸಾವಿರ ಕೋಟಿ ರೂ. ನೀಡಿದ್ದೆವು. ಆದರೆ ಈ ಸರ್ಕಾರ 100 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ. ರೈತರಿಗೆ ಬರೀ 3 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.
ಬರಪೀಡಿತ ಪ್ರದೇಶಗಳಿಗೆ ತಕ್ಷಣವೇ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ಮಾಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಬರ, ಪ್ರವಾಹದಂತಹ ಸಂಕಷ್ಟ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಸರ್ಕಾರ ಜೀವಂತ ಇದ್ದಂತೆ. ಸಂಕಷ್ಟದಲ್ಲಿರುವ ರೈತರ ಕಡೆಗೆ ನೋಡದಿದ್ದರೆ ಅದು ಸತ್ತಂತೆ ಎಂದು ಟೀಕಿಸಿದರು.
18 ಸಾವಿರ ಕೋಟಿ ರೂ. ಬರಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ ಕೇವಲ 105 ಕೋಟಿ ರೂ. ಮಾತ್ರ ಅಂದರೆ ಶೇ.1ರಷ್ಟೂ ಬಿಡುಗಡೆ ಮಾಡಿಲ್ಲ. ರೈತರಿಗೆ ತಲಾ 2000 ರೂ. ನೀಡುವುದಾಗಿ ಹೇಳಿ ತಿಂಗಳು ಕಳೆದರೂ ಹಣ ಬಿಡುಗಡೆ ಮಾಡಿಲ್ಲ. ಆಧಾರ್ ಜೋಡಣೆಯ ಕಥೆ ಹೇಳುತ್ತಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ 14 ಲಕ್ಷ ರೈತರಿಗೆ ನೇರವಾಗಿ ಹಣ ವರ್ಗಾವಣೆ ಮಾಡಿದ್ದೆವು ಎಂದರು.
ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಭಿವೃದ್ದಿ ಕಾಮಗಾರಿಗಳು ಆರಂಭವಾಗಿಲ್ಲ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ 3 ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದರು.


1 Comment
No Mostbet vocГЄ recebe 144% de bГґnus + 300 free spins para arrasar nos jogos – https://mostbetpt.pro/ , O cassino que mais valoriza seus jogadores te espera no Mostbet .