ಬೆಂಗಳೂರು : ಮುಂಬರುವ ಬಿಬಿಎಂಪಿ ಹಾಗು ವಿಧಾನಸಭೆ ಚುನಾವಣೆಗೆ ಜೆಡಿಎಸ್ ಭರದ ಸಿದ್ದತೆ ಆರಂಭಿಸಿದೆ. ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಿರುವ ಜನತಾಮಿತ್ರ ಯಾತ್ರೆ ನಾಳೆಯಿಂದ ಆರಂಭವಾಗಲಿದೆ. ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಪ್ರಾರಂಭವಾಗುವ ಈ ಕಾರ್ಯಕ್ರಮವು ಎಲ್ಲ ವಿಧಾನಸಭಾ ಕ್ಷೇತ್ರ ಹಾಗು ವಾರ್ಡ್ಗಳಲ್ಲಿ ನಡೆಯಲಿದೆ.
ಜಲಧಾರೆಯಂತೆ ಜನತಾ ಮಿತ್ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಪಕ್ಷದ ಮುಖಂಡರೆಲ್ಲ ಪ್ರತ್ಯೇಕ ತಂಡಗಳಾಗಿ ಬೇರ್ಪಟ್ಟು ಸಂಚಾರ ಮಾಡಬೇಕು. ಎಲ್ಲ ವಾರ್ಡ್ಗಳಲ್ಲಿಯೂ ಸಭೆಗಳನ್ನು ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಸೂಚನೆ ನೀಡಿದ್ದಾರೆ.
ಜನತಾ ಮಿತ್ರ ಯಾತ್ರೆಗಾಗಿ ವಾಹನವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ.
ಜನತಾ ಮಿತ್ರ ಹೆಸರಿನ ಎಲ್ಇಡಿ ಪರದೆ ಹೊಂದಿರುವ 15 ವಾಹನಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ವಾಹನ ತಲಾ ಎರಡು ಕ್ಷೇತ್ರಗಳಿಗೆ ತೆರಳಲಿದೆ. ಅಷ್ಟೂ ವಾಹನಗಳಿಗೆ ಶಾಸಕರು ಅಥವ ಹಿರಿಯ ಮುಖಂಡರ ನೇತೃತ್ವದಲ್ಲಿ ಉಸ್ತುವಾರಿ ತಂಡಗಳನ್ನು ರಚನೆ ಮಾಡಲಾಗಿದೆ.
ಜನರು ತಮ್ಮ ನಿರೀಕ್ಷೆಯ ಸರ್ಕಾರ ಹೇಗಿರಬೇಕು ಎಂಬ ಬಗ್ಗೆ ಸಲಹೆ, ಅಭಿಪ್ರಾಯವನ್ನು ಕೊಡಬಹುದು.
ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಎಲ್ಲ ಪ್ರಮುಖರು ತಮ್ಮ ನೇತೃತ್ವದ ತಂಡಗಳ ಮೂಲಕ ಕ್ಷೇತ್ರಗಳಿಗೂ ಭೇಟಿ ನೀಡಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಹಾಗು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಬೆಂಗಳೂರು ನಗರಕ್ಕೆ ನೀಡಿದ ಕೊಡುಗೆಗಳ ಮಾಹಿತಿಯನ್ನು ಮನೆಮನೆಗೂ ಮುಟ್ಟಿಸುವ ಉದ್ದೇಶ ಜನತಾ ಮಿತ್ರ ಹೊಂದಿದೆ.
Previous Articleಬೆಳಗಿನ ಜಾವ 4 ಗಂಟೆ ಕಾಲ ಗರ್ಭಿಣಿಯನ್ನ ಹೊತ್ತು ನಡೆದ ಮಹದೇಶ್ವರ ಬೆಟ್ಟದ ಜನ
Next Article ಏಕನಾಥ ಶಿಂಧೆ ಮಹಾರಾಷ್ಟ್ರ ನೂತನ ಸಿಎಂ