ಬೆಂಗಳೂರು,ಆ.12- ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನದಲ್ಲಿ ಆಗಸ್ಟ್ 15ರಂದು ಧ್ವಜಾರೋಹಣ ನಡೆಸಲು ಕಂದಾಯ ಇಲಾಖೆ ನಿರ್ಧರಿಸಿರುವ ಬೆನ್ನಲ್ಲೇ ಬಿಗಿ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನಡೆಯುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ. ಮೈದಾನದ ಸುತ್ತ ಮುತ್ತಲ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಇಂದು ಶಸ್ತ್ರ ಸಜ್ಜಿತ 250 ಕ್ಕೂ ಮಂದಿ ರಾಜ್ಯ ಮೀಸಲು ಪಡೆ ಇನ್ನಿತರ ಪಡೆಗಳ ಜೊತೆ ಸ್ಥಳೀಯ ಪೊಲೀಸರು ಪಥಸಂಚಲನ ನಡೆಸಿ ಸ್ಥಳೀಯರಲ್ಲಿ ಧೈರ್ಯ ತುಂಬಿದರು.
ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸಾಕಷ್ಟು ಸಂಖ್ಯೆಯ ಪೊಲೀಸರನ್ನು ಬಂಧೋಬಸ್ತ್ಗೆ ನಿಯೋಜಿಸಲಾಗಿದೆ ಎಂದು ಹೇಳಿದರು.
ಚಾಮರಾಜಪೇಟೆ ಮೈದಾನದಲ್ಲಿ ಕಂದಾಯ ಇಲಾಖೆಯೇ ಧ್ವಜಾರೋಹಣ ನೆರವೇರಿಸುವುದು ಎಂದು ಸರ್ಕಾರ ಸ್ಪಷ್ಟಪಡಿಸಿದ ಬೆನ್ನಲ್ಲೇ ಮೈದಾನಕ್ಕೆ ಪೊಲೀಸರು ಬಿಗಿಭದ್ರತೆ ಒದಗಿಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ.
ಈ ನಡುವೆ ಸರ್ಕಾರವು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಅಧಿಕೃತ ಆದೇಶ ಹೊರಡಿಸಿದೆ. ಆಗಸ್ಟ್ 15 ರಂದು ಬೆ.8 ಗಂಟೆಗೆ ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸ್ಥಳೀಯ ಶಾಸಕರು ಮತ್ತು ಸಂಸದರಿಗೆ ಆಹ್ವಾನ ನೀಡಲಾಗಿದೆ. ಬೆಂಗಳೂರು ಉತ್ತರ ಉಪವಿಭಾಗದ ಉಪವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
Previous Articleರಸ್ತೆ ಗುಂಡಿಗೆ ಪೊಲೀಸ್ ಮುಖ್ಯಪೇದೆ ಪುತ್ರನ ಬಲಿ
Next Article ಸನ್ನಡತೆಯ ಆಧಾರದ ಮೇಲೆ 81 ಕೈದಿಗಳಿಗೆ ಬಿಡುಗಡೆ ಭಾಗ್ಯ