ಬೆಂಗಳೂರು,ಮೇ13- ದೇಶದ ಗಮನ ಸೆಳೆದಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ ತಂದೆ- ಮಕ್ಕಳು, ಮಾವ- ಅಳಿಯನಿಗೆ ಮತದಾರ ಮನ್ನಣೆ ನೀಡಿದ್ದಾನೆ ಜೊತೆಗೆ ಸದಾ ಸುದ್ದಿಯಲ್ಲಿರುವ ಹರಕು ಬಾಯಿಯ ನಾಯಕರನ್ನು ತಿರಸ್ಕರಿಸಿದ್ದಾನೆ.
ಸತತವಾಗಿ ಆಯ್ಕೆಯಾಗುತ್ತಿದ್ದವರೂ ಸೇರಿ ಮಂತ್ರಿಗಳನ್ನು ಮನೆಗೆ ಕಳುಹಿಸಿದ್ದಾನೆ ಕಾಂಗ್ರೆಸ್ ನಿಂದ ಸತತವಾಗಿ ಗೆಲ್ಲುತ್ತಿದ್ದವರ ಮತಗಳ ಅಂತರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುವ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಿದ್ದಾನೆ.
ಚುನಾವಣೆಯಲ್ಲಿ ಸ್ಪರ್ಧಿಸಿದ್ದ ತಂದೆ -ಮಕ್ಕಳಲ್ಲಿ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದರೆ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿದ್ದಾನೆ.
ಇದನ್ನು ಹೊರತು ಪಡಿಸಿ ಚುನಾವಣಾ ಕಣದಲ್ಲಿದ್ದ ತಂದೆ- ಮಕ್ಕಳು ಜಯಗಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಜಯಗಳಿಸಿದರೆ, ಅವರ ಪುತ್ರ ಹಾಗೂ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ
ಮಾಜಿ ಸಚಿವ ಎಂ. ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಕೃಷ್ಣ ಅವರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ದೇವನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅವರ ಪುತ್ರಿ ರೂಪಕಲಾ ಕೆಜಿಎಫ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ಜಾತ್ಯಾತೀತ ಜನತಾದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ
ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಮರು ಆಯ್ಕೆಯಾದರೆ, ಅವರ ಪುತ್ರ ಜಿ.ಡಿ.ಹರೀಶ್ಗೌಡ ಹುಣಸೂರು ಕ್ಷೇತ್ರದಲ್ಲಿ ಚುನಾಯಿತರಾಗಿದ್ದಾರೆ.
ಹಾಸನದ ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಮಂಜು ಆಯ್ಕೆಯಾದರೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅವರ ಪುತ್ರ ಮಂಥರ್ ಗೌಡ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಆಯ್ಕೆಯಾದರೆ, ಗೌರಿಬಿದನೂರಿನಲ್ಲಿ ಪಕ್ಷೇತರರಾಗಿ ಕಣಕ್ಕಿಳಿದಿದ್ದ ಅವರ ಮಾವ ಪುಟ್ಟಸ್ವಾಮಿಗೌಡ ಚುನಾಯಿತರಾಗಿದ್ದಾರೆ.
ಮಂತ್ರಿಗಳು ಮನೆಗೆ-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಘಟಾನುಘಟಿ ಸಚಿವರುಗಳಿಗೆ ಸೋಲುಂಟಾಗಿದೆ. ಸಚಿವರಾದ ಗೋವಿಂದ ಕಾರಜೋಳ, ಡಾ.ಕೆ.ಸುಧಾಕರ್, ಎಂಟಿಬಿ ನಾಗರಾಜ್, ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಬಿ.ಸಿ.ಪಾಟೀಲ್, ಕೆ.ಸಿ.ನಾರಾಯಣಗೌಡ, ವಿ.ಸೋಮಣ್ಣ, ಬಿ.ಸಿ.ನಾಗೇಶ್, ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಸೇರಿದಂತೆ ಘಟಾನುಘಟಿ ನಾಯಕರು ಮುಖಭಂಗ ಅನುಭವಿಸಿದ್ದಾರೆ.
ಸತತ ಆರು ಬಾರಿ ಗೆದ್ದಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಶಿರಸಿಯಲ್ಲಿ ಭಾರೀ ಮುಖಭಂಗವಾಗಿದೆ. ಅದೇ ರೀತಿ ಮುಧೋಳದಲ್ಲಿ ಐದು ಬಾರಿ ಗೆದ್ದಿದ್ದ ಗೋವಿಂದ ಕಾರಜೋಳ ಮುಧೋಳದಲ್ಲಿ, ಮುರುಗೇಶ್ ನಿರಾಣಿ ಬೀಳಗಿಯಲ್ಲಿ, ಬಿ.ಸಿ.ಪಾಟೀಲ್ ಹಿರೇಕೆರೂರಿನಲ್ಲಿ ಪರಾಭವಗೊಂಡಿದ್ದಾರೆ.
Previous ArticleKarnataka Election – ಫಲಿತಾಂಶ ವಿಶ್ಲೇಷಣೆ
Next Article ಶ್ರಮಜೀವಿಗಳಿಗೆ ಮಂತ್ರಿಮಂಡಲದಲ್ಲಿ ಸ್ಥಾನ


1 Comment
betmgm Tennessee betmgm-play mgm gambling app