ಬೆಂಗಳೂರು, ಫೆ.9- ಬೆಂಗಳೂರು ನಗರದ ರಸ್ತೆ,ಪಾದಚಾರಿ ಮಾರ್ಗಗಳಲ್ಲಿ ಇನ್ನು ಮುಂದೆ ವಾಹನಗಳನ್ನು ನಿಲುಗಡೆ ಮಾಡಿ ಮೈಮರೆಯುವಂತಿಲ್ಲ.ಒಂದು ವೇಳೆ ಮೈ ಮರೆತರೆ ನಿಮ್ಮ ವಾಹನಗಳನ್ನು ಹರಾಜು ಹಾಕಿ ವಿಲೇವಾರಿ ಮಾಡಲಾಗುತ್ತದೆ.
ಯಾಕೆ ಹೀಗೆ ಅಂದರೆ ಬೆಂಗಳೂರಿನ ಪಾದಚಾರಿ ಮಾರ್ಗ ಮತ್ತು ರಸ್ತೆ ಬದಿಯಲ್ಲಿ ದೀರ್ಘ ಕಾಲದಿಂದ ನಿಲ್ಲಿಸಿರುವ ಅಪರಿಚಿತ, ವಾರಸುದಾರರು ಪತ್ತೆಯಾಗದ ವಾಹನಗಳನ್ನು ಹರಾಜು ಹಾಕಲು ಹೈಕೋರ್ಟ್ ಸೂಚನೆ ನೀಡಿದೆ.
ತ್ಯಾಗರಾಜನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸುವಂತೆ ಕೋರಿ ಸ್ಥಳೀಯ ನಿವಾಸಿ ಪ್ರಶಾಂತ್ ರಾವ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ವಾಹನಗಳ ಹರಾಜಿಗೆ ಕಾಲಮಿತಿ ನಿಗದಿಪಡಿಸಿ ಹರಾಜು ಮಾಡುವುದಕ್ಕೂ ಮುನ್ನ ಮಾಧ್ಯಮಗಳಲ್ಲಿ ದೊಡ್ಡ ಪ್ರಮಾಣದ ಪ್ರಚಾರ ನೀಡಬೇಕು ಎಂದು ಸಲಹೆ ನೀಡಿತು.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ ಶೆಟ್ಟಿ, ರಸ್ತೆಗಳಲ್ಲಿ ಬಿಟ್ಟು ಹೋಗಿರುವ ವಾಹನಗಳನ್ನು ಸ್ಥಳಾಂತರ ಮಾಡಲು ನಾಲ್ಕು ಸ್ಥಳಗಳನ್ನು ಗುರುತಿಸಲಾಗಿದೆ. ಪೊಲೀಸರು ಹಾಗೂ ಆರ್ಟಿಒ ಅಧಿಕಾರಿಗಳ ಮೂಲಕ ವಾಹನ ಮಾಲೀಕರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುತ್ತದೆ.ಅಲ್ಲದೆ, ರಸ್ತೆ ಬದಿ ನಿಂತಲ್ಲೇ ನಿಂತಿರುವ ವಾಹನಗಳನ್ನು ತೆಗೆಯುವಂತೆ ಸ್ಟಿಕ್ಕರ್ ಅಳವಡಿಸಿ 15 ದಿನಗಳ ನಂತರ ಆರ್ಟಿಒ ಕಚೇರಿಗೆ ತಂದು ಮಾಲೀಕರನ್ನು ಸಂಪರ್ಕಿಸಲಾಗುವುದು. ಮಾಲೀಕರು ಸಿಗದಿದ್ದರೆ ಕೋರ್ಟ್ ಅನುಮತಿ ಪಡೆದು ಹರಾಜು ಹಾಕಲಾಗುವುದು. ಆ ರೀತಿ ವಾಹನಗಳನ್ನು ಹರಾಜು ಹಾಕುವ ಮುನ್ನ ಪತ್ರಿಕಾ ಪ್ರಕಟಣೆ ನೀಡಲಾಗುವುದು ಎಂದು ವಿವರಿಸಿದರು.
ಅಲ್ಲದೆ, ವಾರಸುದಾರರು ಪತ್ತೆಯಾಗದ ಸಂದರ್ಭದಲ್ಲಿ ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ನ್ಯಾಯಾಲದಿಂದ ಅನುಮತಿ ಪಡೆದು ಅಂತಹ ವಾಹನಗಳನ್ನು ಹರಾಜು ಹಾಕಲಾಗುತ್ತದೆ. ಗೆಜೆಟ್ ಪ್ರಕಟಣೆಯ ದಿನಾಂಕದಿಂದ ಆರು ತಿಂಗಳಲ್ಲಿ ವಾಹನಗಳನ್ನು ಹರಾಜು ಹಾಕಲು 2023ರ ಜು.11ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ. ರಸ್ತೆಗಳಲ್ಲಿ ಬಿಟ್ಟು ಹೋಗಿರುವ ವಾಹನಗಳನ್ನು ತ್ವರಿತವಾಗಿ ವಿಲೇವಾರಿ ಮಾಡದಿದ್ದರೆ ಆಡಳಿತಾತ್ಮಕ ಅಪಾಯಗಳನ್ನು ಸೃಷ್ಟಿಸುತ್ತದೆ. ಹಾಗಾಗಿ, ಅವಧಿಯನ್ನು 15 ದಿನಕ್ಕೆ ಇಳಿಕೆ ಮಾಡಿದರೆ ಅನುಕೂಲವಾಗಲಿದೆ. ಅಲ್ಲದೇ ಕಡಿಮೆ ಅವಧಿ ನಿಗದಿಪಡಿಸಿದರೆ ಅನುಕೂಲವಾಗುತ್ತದೆ. ಅಲ್ಲದೇ ಆಂತಹ ವಾಹನಗಳ ಸ್ಥಳಾಂತರಕ್ಕೆ ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರದಲ್ಲಿ 2 ಎಕರೆ ಜಾಗ ಗುರುತಿಸಲಾಗಿದೆ ಎಂಬ ಪ್ರಮಾಣಪತ್ರದ ಅಂಶವನ್ನು ಇದೇ ವೇಳೆ, ಅಡ್ವೋಕೇಟ್ ಜನರಲ್ ನ್ಯಾಯಪೀಠದ ಗಮನಕ್ಕೆ ತಂದರು.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಹಾಗೂ ರಸ್ತೆಗಳಲ್ಲಿ ಬಿಟ್ಟು ಹೋಗಿರುವ ಅಪರಿಚಿತ ಮತ್ತು ವಾರಸುದಾರರು ಪತ್ತೆಯಾಗದ ವಾಹಗಳ ಸ್ಥಳಾಂತರ, ಅವುಗಳ ಹರಾಜು ಹಾಕುವ ಸಂಬಂಧ 2023 ರ ಜ.31ರಂದು ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ಸಭೆಯ ನಿರ್ಣಯಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಅನುಚೇತ್ ಅವರ ಅಫಿಡವಿಟ್ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಅದನ್ನು ಒಪ್ಪಿದ ನ್ಯಾಯಪೀಠ, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಮಾರ್ಪಡಿಸಿ ಅವಧಿಯನ್ನು ಕಡಿತಗೊಳಿಸಿತು. ಅದರಂತೆ, 15 ವರ್ಷ ಮೇಲ್ಪಟ್ಟ ವಾಹನಗಳನ್ನು ಎಲ್ಲ ಕಾನೂನು ಪ್ರಕ್ರಿಯೆ ಮುಗಿಸಿದ 30 ದಿನಗಳಲ್ಲಿ ಹರಾಜು ಹಾಕಬೇಕು, 1 ರಿಂದ 5 ವರ್ಷದ ವಾಹನಗಳನ್ನು ಮೂರು ತಿಂಗಳಲ್ಲಿ ಹಾಗೂ 5 ರಿಂದ 15 ವರ್ಷದ ವಾಹನಗಳನ್ನು ಹರಾಜು ಹಾಕಬೇಕು. ಅದರ ಪ್ರಗತಿ ಆಧರಿಸಿ ಪೊಲೀಸರು ನ್ಯಾಯಾಲಯದಿಂದ ಮುಂದಿನ ನಿರ್ದೇಶನಗಳನ್ನು ಕೋರಬಹುದು ಎಂದು ಹೇಳಿ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿತು.


1 Comment
Your luck is waiting — set it free right here, right now – https://irbesartanbuy.com , Spin until regret apologizes in cash .