ಬೆಂಗಳೂರು: ಪತ್ರಿಕೋದ್ಯಮದ ಭೀಷ್ಮ ಎಂದೇ ಖ್ಯಾತರಾಗಿದ್ದ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ. ರಾಮಯ್ಯ (93) ಅವರು ನಿಧನರಾಗಿದ್ದಾರೆ. ಐದು ದಶಕಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು, ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಪ್ರತಿಷ್ಠಿತ ‘ದಿ ಹಿಂದೂ’ ಪತ್ರಿಕೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು, ವೃತ್ತಿ ನಿಷ್ಠೆ ಮತ್ತು ಸರಳತೆಗೆ ಹೆಸರಾಗಿದ್ದರು. ಕೇವಲ ಪತ್ರಿಕೋದ್ಯಮಕ್ಕೆ ಸೀಮಿತವಾಗದೆ, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಸಾರ್ವಜನಿಕ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ಅಜಾತ ಶತ್ರು ಎಂದೇ ಗುರುತಿಸಲ್ಪಟ್ಟಿದ್ದ ಇವರು, ಸಣ್ಣ ಪತ್ರಿಕೆಗಳ ಏಳಿಗೆಗಾಗಿ ಮತ್ತು ಪತ್ರಕರ್ತರ ಹಿತರಕ್ಷಣೆಗಾಗಿ ನಿರಂತರವಾಗಿ ಶ್ರಮಿಸಿದವರು.
ಅವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಾಗೂ ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಹಲವಾರು ಗೌರವಗಳು ಅವರಿಗೆ ಲಭಿಸಿವೆ. ಇತ್ತೀಚೆಗಷ್ಟೇ ಅವರ ಜೀವನದ ಅನುಭವಗಳನ್ನು ಒಳಗೊಂಡ ‘ನಾನು ಹಿಂದೂ ರಾಮಯ್ಯ’ ಎಂಬ ಆತ್ಮಕಥನ ಬಿಡುಗಡೆಯಾಗಿ ಓದುಗರ ಗಮನ ಸೆಳೆದಿತ್ತು.

