ಬೆಂಗಳೂರು,ಫೆ.24: ಬಿಜೆಪಿ ಹಿರಿಯ ನಾಯಕರು ಮತ್ತು ಕಾರ್ಯಕರ್ತರ ಅಸಮಾಧಾನಕ್ಕೆ ಗುರಿಯಾಗಿರುವ ಮೈಸೂರು ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರಿಗೆ ಮತ್ತೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿವೆ.
ಮಾಜಿ ಮಂತ್ರಿ ರಾಮದಾಸ್ ಅಪ್ಪಚ್ಚು ರಂಜನ್ ಸೇರಿದಂತೆ ಹಲವಾರು ಮುಖಂಡರು ಈ ಕ್ಷೇತ್ರದಿಂದ ಪ್ರತಾಪ್ ಸಿಂಹ ಮತ್ತೆ ಕಣಕ್ಕಿಳಿಯುವುದು ಬೇಡ ಎಂದು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದಾರೆ ಒಂದು ವೇಳೆ ಇವರು ಕಣಕ್ಕಿಳಿದರು ಗೆಲ್ಲುವುದು ಕಷ್ಟವಾಗಲಿದೆ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ತಮ್ಮ ಸೋದರನ ಕಳ್ಳನಾಟ ಪ್ರಕರಣ ಸೇರಿದಂತೆ ಹಲವಾರು ವಿಷಯಗಳಲ್ಲಿ ವಿವಾದಕ್ಕೆ ಗುರಿಯಾಗಿರುವ ಪ್ರತಾಪ ಸಿಂಹ ಇತ್ತೀಚೆಗೆ ಪಕ್ಷದ ಕಾರ್ಯಕರ್ತರಿಂದಲೂ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ ಪಕ್ಷದ ಕಾರ್ಯಕರ್ತರ ಯಾವುದೇ ಅಭಿಪ್ರಾಯಗಳಿಗೆ ಮನ್ನಣೆ ನೀಡದೆ ಮುಂದುವರೆಯುತ್ತಿರುವ ಸಂಸದರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿದೆ.
ಇದರ ಜೊತೆಯಲ್ಲಿ ಪಕ್ಷದಿಂದ ನಡೆದಿರುವ ಆಂತರಿಕ ಸಮೀಕ್ಷೆಗಳಲ್ಲೂ ಪ್ರತಾಪ ಸಿಂಹ ಅವರ ವಿರುದ್ಧ ವರದಿಗಳು ಬಂದಿದ್ದು ಇದೀಗ ಹೈಕಮಾಂಡ್ ಅವರ ಬದಲಿಗೆ ಬೇರೆಯವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.
ಇದರ ಬೆನ್ನಲ್ಲೇ ಕಾರ್ಯಯೋನ್ಮುಖವಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ನಾಯಕ ಸಾರಾ ಮಹೇಶ್ ಅವರು ಈ ಕ್ಷೇತ್ರದಿಂದ ಕಣಕ್ಕಿಳಿಯುವ ಪ್ರಯತ್ನ ಆರಂಭಿಸಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಈ ಹಿನ್ನೆಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕು ಇಲ್ಲವಾದರೆ ತಾವು ಬಿಜೆಪಿಯ ಚಿನ್ಹೆಯಡಿ ಸ್ಪರ್ಧಿಸಲು ಸಿದ್ಧವಿದ್ದು ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆಗೆ ಒಂದೆರಡು ಸುತ್ತಿನ ಮಾತು ಕಥೆ ಪೂರ್ಣಗೊಳಿಸಿರುವ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜೊತೆಗೂ ಮಾತನಾಡಿದ್ದಾರೆ ಎನ್ನಲಾಗಿದೆ.
ಕುಮಾರಸ್ವಾಮಿ ಅವರು ಈ ಕುರಿತಂತೆ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಅವರ ಜೊತೆಗೂ ಮಾತನಾಡಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಮತ್ತೆ ಈ ಕ್ಷೇತ್ರದಿಂದ ಕಣಕ್ಕಿಳಿಸಿದರೆ ಪಕ್ಷ ಸೋಲು ಅನುಭವಿಸಲಿದೆ ಹೀಗಾಗಿ ಅವರ ಬದಲಿಗೆ ಸಾ.ರಾ. ಮಹೇಶ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ಗೆಲುವು ಸಾಧ್ಯ.
ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೊಡ್ಡ ರೀತಿಯ ಮುಖಭಂಗ ಉಂಟಾಗಲಿದೆ ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಇದಕ್ಕೆ ಅವಕಾಶ ನೀಡಿಕೊಡಲು ನೀಡಬೇಕು ಮೇಲಾಗಿ ಸಾ.ರಾ. ಮಹೇಶ್ ಅವರು ಈ ಹಿಂದೆ ಬಿಜೆಪಿಯಲ್ಲಿ ಇದ್ದರು ಹೀಗಾಗಿ ಅವರಿಗೆ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಜೊತೆ ಉತ್ತಮ ಒಡನಾಟವಿದೆ ಹೀಗಾಗಿ ಅವರನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಹೇಳಿದ್ದು ಬಹುತೇಕ ಹೈಕಮಾಂಡ್ ಇದಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿದೆ.

