ಬೆಂಗಳೂರು, ಮಾ.18- ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಿಯೂ ಕುಡಿಯುವ ನೀರು ಮತ್ತು ದನಗಳ ಮೇವಿಗೆ ತೊಂದರೆ ಆಗಬಾರದು ಎಂದು ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿತ್ಯದ ವಿದ್ಯಮಾನಗಳ ಬಗ್ಗೆ ನಿಗಾ ವಹಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು ಮಂತ್ರಿಗಳು ನಿಯಮಿತವಾಗಿ ಸಭೆ ನಡೆಸಿ ಕುಡಿಯುವ ನೀರು ಸೇರಿದಂತೆ ಬರ ಪರಿಹಾರ ಕಾಮಗಾರಿಗಳ ಉಸ್ತುವಾರಿ ವಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಪ್ರತಿನಿತ್ಯ ಮುಖ್ಯ ಕಾರ್ಯದರ್ಶಿಗಳು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು ಹಾಗೂ ವಾರಕ್ಕೊಮ್ಮೆ ಕ್ರಿಯಾ ಯೋಜನೆ ರೂಪಿಸಿ ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ಸಲಹೆ ಮಾಡಿದ್ದಾರೆ.
ಕುಡಿಯುವ ನೀರಿನ ಕಾಮಗಾರಿಗಾಗಿ ಯಾವುದೇ ಕಾರಣಕ್ಕೂ ಹಣಕಾಸಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಹಣವಿರುವುದನ್ನು ಖಾತರಿ ಪಡಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಜೂನ್ ಅಂತ್ಯದವರೆಗೆ ಕುಡಿಯುವ ನೀರು ಪೂರೈಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಅಗತ್ಯವಿರುವ ಕಡೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಯುವುದು. ಬತ್ತಿ ಹೋಗಿರುವ ಬೋರ್ ವೆಲ್ ಗಳನ್ನು ಮರುಪೂರಣ ಗೊಳಿಸುವ ಕಡೆ ಗಮನಹರಿಸಬೇಕು ಲಭ್ಯವಿರುವ ಜಲಮೂಲಗಳಿಂದ ಕೆರೆ ತುಂಬಿಸುವ ಯೋಜನೆ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
