ಬೆಂಗಳೂರು, ಮೇ 29- ಮನುಕುಲವನ್ನು ಇನ್ನಿಲ್ಲದಂತೆ ಕಾಡಿದ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಆರೋಗ್ಯ ಇಲಾಖೆಯಿಂದ ನಡೆದ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಮುಂದಾಗಿದೆ.
ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ದೃಷ್ಟಿಯಿಂದ ಖರೀದಿಸಲಾದ ಪಿಪಿಇ ಕಿಟ್ ಆಸ್ಪತ್ರೆಗಳಿಗೆ ಆಮ್ಲಜನಕ ಸೇರಿದಂತೆ ಕೆಲವು ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
ಆರೋಗ್ಯ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಸಿದರು ನಾಳೆ ಉನ್ನತ ಮಟ್ಟದ ಸಭೆ ಕರೆಯಲಾಗಿದ್ದು ಆ ಸಭೆಗೆ ಇಲಾಖೆಯಲ್ಲಿ ನಡೆದ ಎಲ್ಲಾ ಖರೀದಿ ಪ್ರಕ್ರಿಯೆಗಳ ಬಗ್ಗೆ ಅಗತ್ಯ ದಾಖಲೆಗಳ ಜೊತೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
ಅಧಿಕಾರಿಗಳಿಗೆ ನೀಡಿರುವ ಸೂಚನೆಯ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ವಿಧಾನಮಂಡಲದ ಲೆಕ್ಕಪತ್ರ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ಆರೋಗ್ಯ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿವರ ನೀಡಿವೆ ಈ ಎಲ್ಲವನ್ನು ಪರಿಶೀಲಿಸಿ ಅಗತ್ಯವೆನಿಸುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜೊತೆಗೆ ಕೋವಿಡ್ ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಮಾಹಿತಿ ತೆಗೆದುಕೊಂಡು ನಂತರ ಪರಿಹಾರದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮೊದಲೇ ಸಿಎಂ ಈ ಖಾತೆ ಕೊಡುತ್ತೇನೆ ಅಂತ ಹೇಳಿದ್ದರು. ಅದರಂತೆ ಆರೋಗ್ಯ ಇಲಾಖೆ ಜವಾಬ್ದಾರಿ ನನಗೆ ನೀಡಿದ್ದಾರೆ. ಕಳೆದ ಬಾರಿ ಆಹಾರ ಇಲಾಖೆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೆ. ಈ ಬಾರಿ ಸಿಎಂ ಆರೋಗ್ಯ ಇಲಾಖೆ ನೀಡಿದ್ದಾರೆ. ದೊಡ್ಡ ಇಲಾಖೆ ಹೆಚ್ಚಿನ ಜವಾಬ್ದಾರಿ ಇದೆ. ಪಾರದರ್ಶಕವಾಗಿ ಕೆಲಸ ಮಾಡಬೇಕಿದೆ. ಎಲ್ಲರಿಗೂ ಆರೋಗ್ಯ ವ್ಯವಸ್ಥೆ ನೀಡುವ ಕೆಲಸ ಮಾಡಬೇಕಿದೆ ಎಂದರು.
ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
Previous Articleಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
Next Article Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು