ಶ್ರೀನಗರ,ಆ.24-ಜಮ್ಮು ಮತ್ತು ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಬಿಜೆಪಿ ನಾಯಕರೊಬ್ಬರ ಮೃತದೇಹವು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಬಿಜೆಪಿ ನಾಯಕ ಸೋಮಿ ರಾಜ್ ಕೆಲವು ಸಮಯದ ಹಿಂದೆ ನಾಪತ್ತೆಯಾಗಿದ್ದರು. ಕಥುವಾ ಹೀರಾನಗರ ಟೌನ್ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿ ಮರಕ್ಕೆ ನೇಣು ಬಿಗಿಯಲಾಗಿದ್ದು, ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದಿಲ್ಲ.
ಬಿಜೆಪಿ ನಾಯಕನ ಸಾವಿನ ನಿಖರವಾದ ಕಾರಣವನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ಹೀರಾನಗರ ಪಟ್ಟಣದಲ್ಲಿರುವ ತಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿ ಬಿಜೆಪಿ ಮುಖಂಡ ಸೋಮಿ ರಾಜ್ ಅವರ ಶವ ಮರಕ್ಕೆ ನೇತಾಡುತ್ತಿರುವುದನ್ನು ಗ್ರಾಮಸ್ಥರು ಬೆಳಿಗ್ಗೆ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹದ ಮೇಲೆ ರಕ್ತದ ಗುರುತುಗಳಿದ್ದು, ಸಮೀಪದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಬಿಜೆಪಿ ನಾಯಕ ಸೋಮಿ ರಾಜ್ ನಿನ್ನೆ ನಾಪತ್ತೆಯಾಗಿದ್ದು, ಬಳಿಕ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಸಂಬಂಧ ಹೀರಾನಗರ ಪೊಲೀಸರು ಸೆಕ್ಷನ್ 174 ಸಿಆರ್ಪಿಸಿ ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದರು. ಅವರ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಹಾಗೂ ಬಿಜೆಪಿಯ ಹಲವು ಮುಖಂಡರು ಆಗ್ರಹಿಸಿದ್ದಾರೆ.
ವೈದ್ಯಕೀಯ ಮತ್ತು ಕಾನೂನು ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಮೃತರ ದೇಹವನ್ನು ಅಂತಿಮ ವಿಧಿಗಳಿಗಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಈ ಬಗ್ಗೆ ತನಿಖೆ ನಡೆಸಲು ಎಸ್ಡಿಪಿಒ ಬಾರ್ಡರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಕಥುವಾ ಆರ್ಸಿ ಕೊತ್ವಾಲ್ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕರೊಬ್ಬರನ್ನು ಗುರಿಯಾಗಿಸಿಕೊಂಡಿರುವುದು ಇದೇ ಮೊದಲಲ್ಲ. ಕಳೆದ 2 ವರ್ಷಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ 23ಕ್ಕೂ ಹೆಚ್ಚು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.
Previous Articleಅಮಿತಾಬ್ ಬಚ್ಚನ್ ಗೆ ಕೋವಿಡ್-19 ಪಾಸಿಟಿವ್ ಧೃಡ
Next Article ಮಾನಸಿಕ ಅಸ್ವಸ್ಥನ ಮೇಲೆ ಹಲ್ಲೆ