ಧಾರವಾಡ,ಡಿ.17: ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ನಾಯಕತ್ವಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಲೋಕಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಪ್ರಮುಖ ಅಸ್ತ್ರವಾಗಿ ಬಳಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಈ ಹಿನ್ನೆಲೆಯಲ್ಲಿ ಶೆಟ್ಟರ್ ಅವರಿಗೆ ಹೊಸ ಜವಾಬ್ದಾರಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮುತುವರ್ಜಿ ವಹಿಸಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಅವರು,ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದಾಗಿ ರಾಜಕೀಯ ಪಲ್ಲಟಗಳಾಗಿತ್ತು. ಕಾಂಗ್ರೆಸ್ 135 ಸ್ಥಾನ ಗೆಲ್ಲಲು ಶೆಟ್ಟರ್ ಅವರ ಸೇರ್ಪಡೆಯೂ ಸಹಕಾರಿಯಾಗಿತ್ತು ಎಂಬ ವಿಶ್ಲೇಷಣೆ ಇದೆ.
ಆದರೆ ,ವಿಧಾನಸಭೆ ಚುನಾವಣೆಯಲ್ಲಿ ಶೆಟ್ಟರ್ ಸೋಲು ಕಂಡಿದ್ದರು. ಆದರೂ ಕಾಂಗ್ರೆಸ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನೇಮಿಸಿದ್ದು,ಮಂತ್ರಿ ಮಾಡಲಿದೆ ಎಂದು ಹೇಳಲಾಗುತಿತ್ತು.ಆದರೆ ಕಾಂಗ್ರೆಸ್ ನಲ್ಲೇ ಮಂತ್ರಿ ಸ್ಥಾನದ ಆಕಾಂಕ್ಷೆ ಹೊಂದಿರುವ ಹಲವಾರು ಹಿರಿಯ ನಾಯಕರು ಇರುವ ಹಿನ್ನೆಲೆಯಲ್ಲಿ ಶೆಟ್ಟರ್ ಅವರಿಗೆ ಮಂತ್ರಿ ಸ್ಥಾನ ಕಲ್ಪಿಸುವುದು ಕಷ್ಟ ಎನ್ನಲಾಗಿದೆ ಈ ಹಿನ್ನೆಲೆಯಲ್ಲಿ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಸಿಎಂ ಒಲವು ಹೊಂದಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವೆಂಬಂತೆ ಗದಗ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಶೆಟ್ಟರ್ ಅವರನ್ನು ಭೇಟಿ ಮಾಡಿದರು.
ಶೆಟ್ಟರ್ ಅವರು ಇಂದು ತಮ್ಮ 68 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು ಅವರಿಗೆ ಶುಭ ಹಾರೈಸಿದ ಮುಖ್ಯಮಂತ್ರಿಗಳು ನಂತರ ಶೆಟ್ಟರ್ ಕುಟುಂಬ ಸದಸ್ಯರೊಂದಿಗೆ ಉಪಹಾರ ಸೇವಿಸಿದರು.
ಈ ವೇಳೆ ಶೆಟ್ಟರ್ ಅವರನ್ನು ಕುರಿತು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವರ ಅಭಿಪ್ರಾಯ ಕೇಳಿದರು ಎನ್ನಲಾಗಿದೆ.ಆದರೆ ಇದನ್ನು ನಯವಾಗಿ ನಿರಾಕರಿಸಿದ ಅವರು ತಾವು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಇದು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದೇನೆ ಹೀಗಾಗಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ನಯವಾಗಿ ನಿರಾಕರಿಸಿದರು ಎಂದು ಗೊತ್ತಾಗಿದೆ.
ಆದರೆ,ತಾವು ಹಾಗೂ ಪಕ್ಷದ ನಾಯಕತ್ವ ಬಯಸುವುದಾದರೆ ತಮ್ಮ ಪುತ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಆಕಾಂಕ್ಷೆ ಹೊಂದಿದ್ದಾರೆ. ಆತನಿಗೆ ಧಾರವಾಡದ ಬದಲಾಗಿ ಹಾವೇರಿ ಅಥವಾ ಬೆಳಗಾವಿ ಕ್ಷೇತ್ರದಲ್ಲಿ ಅವಕಾಶ ನೀಡಬಹುದು ಇಲ್ಲವಾದರೆ ದಾವಣಗೆರೆ ಕ್ಷೇತ್ರದಲ್ಲೂ ಅವಕಾಶ ನೀಡಬಹುದಾಗಿದೆ.ಈ ಕುರಿತಂತೆ ತಾವು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರೊಂದಿಗೆ ಮಾತನಾಡುತ್ತೇನೆ.ತಾವೂ ಕೂಡಾ ಮಾತನಾಡಬಹುದಾಗಿದೆ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ಬಿಜೆಪಿಯ ಕೆಲವು ನಾಯಕರು ಈ ವಿಷಯವಾಗಿ ತಮ್ಮನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ತಾವು ಬಿಜೆಪಿ ಸೇರಿದರೆ ಈ ಮೂರರಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡುವುದಾಗಿ ಆಹ್ವಾನಿಸಿದ್ದಾರೆ.ಆದರೆ ತಾವು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ನಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದ ಅವರು ತಾವು ಟಿಕೆಟ್ ನೀಡದೆ ಹೋದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂಬ ಭರವಸೆ ನೀಡಿದರು ಎನ್ನಲಾಗಿದೆ.
ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆಗೆ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅವರು ನೀಡುವ ವರದಿ ಮತ್ತು ಶಾಸಕರು, ಹಿಂದೆ ಅಭ್ಯರ್ಥಿಗಳಾಗಿದ್ದವರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು' ಎಂದರು.
ಅಲ್ಪಸಂಖ್ಯಾತರಿಗೆ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು' ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ‘ಹಿಂದೆಯೂ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿತ್ತು. ಈ ಬಾರಿಯೂ ನೀಡುತ್ತೇವೆ. ಆದರೆ, ಬಿಜೆಪಿಯವರು ಅಲ್ಪಸಂಖ್ಯಾತರ ಮತಗಳೇ ಬೇಡ ಎನ್ನುತ್ತಾರೆ. ಅವರು ದೇಶದ ನಾಗರಿಕರಲ್ಲವೇ?‘ ಎಂದು ಪ್ರಶ್ನಿಸಿದರು.
ಶೀಘ್ರ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರು, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು' ಎಂದು ತಿಳಿಸಿದರು.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಅವಕಾಶ ನೀಡುವಂತೆ ನ.27ರಂದು ಪತ್ರ ಬರೆಯಲಾಗಿದೆ. ಈವರೆಗೂ ಅವಕಾಶ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು,ರಾಜ್ಯದಲ್ಲಿ ₹35 ಸಾವಿರ ಕೋಟಿ ಮೊತ್ತದ ಬೆಳೆ ನಷ್ಟ ಆಗಿದೆ. ರಾಷ್ಟ್ರೀಯ ವಿಕೋಪ ಪರಿಹಾರ ನಿಧಿಯಡಿ (ಎನ್ಡಿಆರ್ಎಫ್) ರಾಜ್ಯಕ್ಕೆ ₹18 ಸಾವಿರ ಕೋಟಿ ಬರಬೇಕು. ಇದು ಕೇಂದ್ರದ ಹಣವಲ್ಲ. ರಾಜ್ಯದ ಜನರ ತೆರಿಗೆ ಹಣ. ನಾವು ₹4 ಲಕ್ಷ ಕೋಟಿ ತೆರಿಗೆ ಕಟ್ಟುತ್ತೇವೆ. ಕೇಂದ್ರದಿಂದ ನಮಗೆ ವಾಪಸ್ ಬರುವುದು ₹50 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ?' ಎಂದು ಪ್ರಶ್ನಿಸಿದರು.