ಬೆಂಗಳೂರು.ಜ,4: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟವನ್ನು ಅಧಿಕಾರದ ಗದ್ದುಗೆಯಲ್ಲಿ ಕೂರಿಸಬೇಕು ಎಂದು ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯ ಸಿದ್ಧತೆ ಆರಂಭಿಸಿದ್ದಾರೆ.
ಹಲವಾರು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದ್ದ ರಾಮ ಮಂದಿರ ನಿರ್ಮಾಣ ಕನಸು ನನಸಾಗಿದ್ದು ಭಗವಾನ್ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಪೂರ್ಣಗೊಳ್ಳುತ್ತಿದ್ದಂತೆ ಚುನಾವಣಾ ತಯಾರಿಯತ್ತ ಪ್ರಧಾನಿ ಗಮನ ಹರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ದೇಶದ ಅತ್ಯಂತ ದೊಡ್ಡ ಹಬ್ಬದ ರೀತಿಯಲ್ಲಿ ಆಚರಿಸಲು ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಸಿದ್ಧತೆ ನಡೆಸಿದ್ದು,ಇದನ್ನೊಂದು ಕೇಂದ್ರ ಸರ್ಕಾರದ ಯಶಸ್ಸು ಎಂದು ಬಿಂಬಿಸಲಾಗುತ್ತಿದೆ.ಇದನ್ನು ಚುನಾವಣೆಯಲ್ಲಿ ತಮ್ಮ ಪರವಾದ ಅಲೆಯಾಗಿ ಪರಿವರ್ತಿಸಲು ಬಿಜೆಪಿ ಪಡೆ ತಯಾರಿ ಆರಂಭಿಸಿದೆ.
ಇದನ್ನು ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿ ಬಳಸುವ ಕುರಿತಂತೆ ಪರಿವಾರದ ನಾಯಕರ ಅಭಿಪ್ರಾಯ ಪಡೆದಿರುವ ಪ್ರಧಾನಿ ಮೋದಿ,ಈ ಕುರಿತಾಗಿ ಕೇಳಿಬರುತ್ತಿರುವ ಜನಾಭಿಪ್ರಾಯವನ್ನು ಮತಗಳಾಗಿ ಪರಿವರ್ತನೆ ಮಾಡಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿಬಚುನಾವಣೆಯ ಸಿದ್ಧತೆ ಆರಂಭಿಸುವಂತೆ ಕೇಂದ್ರ ಸರ್ಕಾರ ಈಗಾಗಲೇ ಚುನಾವಣೆ ಆಯೋಗಕ್ಕೆ ಸೂಚನೆ ನೀಡಿದೆ. ಆಯೋಗ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈಗಾಗಲೇ ಆಯೋಗದ ಅಧಿಕಾರಿಗಳು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದು ತಮ್ಮ ಸ್ವಂತ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಒಂದೇ ಸ್ಥಳದಲ್ಲಿ ಮೂರು ವರ್ಷಗಳ ಕಾಲ ಸೇವೆ ಪೂರ್ಣಗೊಳಿಸಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸೂಚಿಸಿದೆ.
ಚುನಾವಣಾ ಆಯೋಗದ ಮೂಲಗಳ ಪ್ರಕಾರ ಫೆಬ್ರವರಿ 2ನೇ ವಾರದಲ್ಲಿ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಲಿದೆ.ಸುಗಮ ಹಾಗೂ ಶಾಂತಿಯುತ ಚುನಾವಣೆ ನಡೆಸುವ ದೃಷ್ಟಿಯಿಂದ ಆಯೋಗ ಎಲ್ಲಾ ರಾಜ್ಯಗಳ ಪೊಲೀಸ್ ಅಧಿಕಾರಿಗಳಿಂದ ವರದಿ ತರಿಸಿಕೊಂಡಿದ್ದು ಏಳು ಹಂತಗಳಲ್ಲಿ ಚುನಾವಣೆ ನಡೆಸುವ ಸಾಧ್ಯತೆ ಇದೆ ಫೆಬ್ರವರಿ 2ನೇ ವಾರದಲ್ಲಿ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಲಿದ್ದು ಏಪ್ರಿಲ್ ಮೂರನೇ ವಾರದಿಂದ ಮೇ ಮೊದಲ ವಾರದೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗದ ಉನ್ನತ ಮೂಲಗಳು ತಿಳಿಸಿವೆ.
ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಹಲವು ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಪಾಲಿಕೆ, ಬಿಡಿಎ, ಜಲ ಮಂಡಳಿ, ರಾಜ್ಯ ರಸ್ತೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಹಾಗೂ ವಿವಿಧ ನೀರಾವರಿ ನಿಗಮಗಳಿಗೆ ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಟೆಂಡರ್ ಪ್ರಕ್ರಿಯೆ ಆರಂಭ ಮಾಡುವಂತೆ ಸೂಚನೆ ನೀಡಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಟೆಂಡರ್ ಪರಿಶೀಲನ ಉನ್ನತ ಸಮಿತಿ ರಚಿಸಿರುವ ಹಿನ್ನೆಲೆಯಲ್ಲಿ ಪೂರ್ಣಗೊಳಿಸಲಾದ ಟೆಂಡರ್ ಗಳನ್ನು ಸಮಿತಿಯ ಅಧ್ಯಯನಕ್ಕೆ ನೀಡಬೇಕಾಗಿದೆ ಹೀಗಾಗಿ ಈ ತಿಂಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳ ಟೆಂಡರ್ ಕರೆಯಬೇಕು ಅದನ್ನು ಫೆಬ್ರವರಿ ಮೊದಲ ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ಚುನಾವಣೆ ಪ್ರಕ್ರಿಯೆ ಆರಂಭಗೊಂಡರೆ ಸುಮಾರು ಆರು ತಿಂಗಳ ಕಾಲ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.