ಬೆಂಗಳೂರು
ಲೈಂಗಿಕ ಹಗರಣದ ಸುಳಿಗೆ ಸಿಲುಕಿದ ಮುರುಘಾ ಶರಣರು ಜೈಲು ಪಾಲಾಗುತ್ತಿದ್ದಂತೆ ಮುರುಘಾಮಠಕ್ಕೆ ಇನ್ನಿಲ್ಲದಂತೆ ಗ್ರಹಚಾರಗಳು ಕಾಡತೊಡಗಿವೆ. ಮಠದ ಹೆಸರಿನಲ್ಲಿ ನಡೆದಿರುವ ಹಗರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ನಡುವೆ ಬೃಹನ್ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವೇಶ್ವರ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ರಾಜ್ಯ ಸರ್ಕಾರ ಕಾಲಕಾಲಕ್ಕೆ ನೀಡಿರುವ ಕೋಟ್ಯಂತರ ರೂಪಾಯಿಗಳ ಅನುದಾನದ ಸಂಪೂರ್ಣ ಮಾಹಿತಿ ಒದಗಿಸಬೇಕು ಮತ್ತು ಈ ಅನುದಾನ ನೀಡುವಾಗ ಏನಾದರೂ ಷರತ್ತುಗಳನ್ನು ವಿಧಿಸಲಾಗಿತ್ತೇ ಎಂಬುದನ್ನು ತಿಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ IAS ಅಧಿಕಾರಿ ಪಿ.ಎಸ್.ವಸ್ತ್ರದ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ SJM ವಿದ್ಯಾಪೀಠದ ಅಧ್ಯಕ್ಷ, ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಮತ್ತು ಭಕ್ತರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿತ್ತು.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, ‘ಮುರುಘಾಮಠಕ್ಕೆ ನೂರಾರು ವರ್ಷಗಳ ವೈಭವೋಪೇತ ಇತಿಹಾಸವಿದೆ. ಆದರೆ, ದುರದೃಷ್ಟವಶಾತ್ ಈಗಿನ ಪೀಠಾಧಿಪತಿ ಮುರುಘಾ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಮಠಕ್ಕೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹಾಗೂ ನೂರಾರು ವಿದ್ಯಾಸಂಸ್ಥೆಗಳ ದೈನಂದಿನ ಆಡಳಿತಕ್ಕೆ ವ್ಯತ್ಯಯ ಉಂಟಾಗಬಾರದು ಎಂಬ ಏಕೈಕ ಕಾರಣಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ’ ಎಂದು ಸರ್ಕಾರದ ನಿಲುವನ್ನು ಬಲವಾಗಿ ಸಮರ್ಥಿಸಿದರು.
‘ಮಠದ ವತಿಯಿಂದ ನಿರ್ಮಿಸಲಾಗುತ್ತಿರುವ ಅತಿ ಎತ್ತರದ ಬಸವ ಪ್ರತಿಮೆ ಹಾಗೂ ಅಲ್ಲಮಪ್ರಭು ಸಂಶೋಧನಾ ಕೇಂದ್ರಕ್ಕೆ ಸರ್ಕಾರವು ಕಾಲಕಾಲಕ್ಕೆ ಕೋಟ್ಯಂತರ ರೂಪಾಯಿಗಳ ಬೃಹತ್ ಅನುದಾನ ನೀಡುತ್ತಾ ಬಂದಿದೆ. ಇದಕ್ಕೆ ತಾಜಾ ಉದಾಹರಣೆಯಾಗಿ 2022 ರ ಸೆಪ್ಟೆಂಬರ್ 15 ರಂದು ಸರ್ಕಾರ 10 ಕೋಟಿ ರೂ. ಗಳನ್ನು ನೀಡಿದೆ. ಇದಕ್ಕೂ ಮುನ್ನ ಸಾಕಷ್ಟು ಆರ್ಥಿಕ ನೆರವು ಒದಗಿಸಲಾಗಿದೆ. ಈ ಕುರಿತ ಎಲ್ಲ ದಾಖಲೆಗಳನ್ನು ಕೋರ್ಟ್ಗೆ ಒದಗಿಸಲಾಗುವುದು’ ಎಂದರು.
‘ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಆರ್ಥಿಕ ನೆರವಿನ ಅಂಶಗಳೂ ಅಡಗಿವೆ ಎಂಬುದನ್ನು ನ್ಯಾಯಪೀಠ ಪರಿಗಣಿಸಬೇಕು. ಅಂತೆಯೇ, ಆಡಳಿತಾಧಿಕಾರಿ ನೇಮಕಕ್ಕೂ ಮುನ್ನ ಮುಖ್ಯಮಂತ್ರಿಗಳು ಸ್ವತಃ ನೂರು ಬಾರಿ ಯೋಚಿಸಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದರಲ್ಲಿ ಮಠದ ಆಸ್ತಿ ಸಂರಕ್ಷಣೆ ಮತ್ತು ಭಕ್ತರ ಹಿತಾಸಕ್ತಿ ಕಾಪಾಡುವ ಉದ್ದೇಶ ಅಡಗಿದೆ. ಮಠದ ಜೊತೆಗೆ ಸಂಘರ್ಷಕ್ಕಿಳಿಯುವ ಅಥವಾ ವ್ಯಾಜ್ಯ ಮಾಡುವ ಧೋರಣೆಯಿಲ್ಲ’ ಎಂದು ಸ್ಪಷ್ಟಪಡಿಸಿದರು.
ಆಡಳಿತಾಧಿಕಾರಿ ಪರ ಹಿರಿಯ ವಕೀಲ ಗಂಗಾಧರ ಗುರುಮಠ ಅವರಿಗೆ ಫೆಬ್ರುವರಿ 2 ರಂದು ವಾದ ಮಂಡಿಸಲು ಅವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.