ಬೆಂಗಳೂರು, ಅ.12- ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿಯ ಕೆಲವು ನಾಯಕರು ಸಿನಿಮೀಯ ರೀತಿಯಲ್ಲಿ ಕಾಂಗ್ರೆಸ್ ಶಾಸಕರುಗಳನ್ನು ಸಂಪರ್ಕ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಗುಡ್ ಬೈ ಹೇಳಿರುವ ಮಾಜಿ ಶಾಸಕ ಹಾಗೂ ರಾಮಪ್ಪ ಲಮಾಣಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು ಅಧಿಕಾರವಿಲ್ಲದೆ ಬಿಜೆಪಿ ನಾಯಕರು ವಿಲವಿಲ ಒದ್ದಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿಯ ಕೆಲವರು ಸಿನಿಮೀಯ ರೀತಿಯಲ್ಲಿ ಯಾರನ್ನೆಲ್ಲಾ ಭೇಟಿ ಮಾಡಿದ್ದಾರೆ ಎಂಬ ಮಾಹಿತಿ ತಮ್ಮ ಹತ್ತಿರ ಇದೆ. ಬಿಜೆಪಿ ತಂಡದವರು ನಡೆಸಿರುವ ಮಾತುಕತೆಯ ಇಂಚಿಂಚೂ ಮಾಹಿತಿಯನ್ನು ನಮ್ಮ ಶಾಸಕರು ತಮ್ಮ ಬಳಿ ಹಂಚಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಸದ್ಯಕ್ಕೆ ಈ ಬಗ್ಗೆ ಚರ್ಚಿಸಲು ಹೋಗುವುದಿಲ್ಲ.ಈ ಕುರಿತಾದ ಯಾವ ಪ್ರಶ್ನೆಗಳಿಗೂ ತಾವು ಉತ್ತರ ನೀಡುವುದಿಲ್ಲ.ಇನ್ನು ಕೆಲವರು 2024 ಕ್ಕೆ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಎಂದು ಹೇಳುತ್ತಿದ್ದಾರೆ. ನಾನು ಅದರ ಬಗ್ಗೆ ವ್ಯಾಖ್ಯಾನ ಮಾಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
42 ಮಂದಿ ಅರ್ಜಿ:
ಇಂತಹ ಪ್ರಯತ್ನದ ನಡುವೆಯೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 42 ಮಂದಿ ಪ್ರಮುಖ ನಾಯಕರು ಪಕ್ಷ ಸೇರಲು ಅರ್ಜಿ ಹಾಕಿದ್ದಾರೆ. ಈವರೆಗೂ ತಾವು ಈ ಸಂಖ್ಯೆಯನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಈಗ ಅನಿವಾರ್ಯವಾಗಿ ಹೇಳಲೇಬೇಕಿದೆ ಎಂದರು ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಈ ರೀತಿಯ ಸೇರ್ಪಡೆ ಕಾರ್ಯಕ್ರಮಗಳು ಹೆಚ್ಚಾಗಿವೆ. ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ಸೇರ್ಪಡೆಯಾಗಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಹೇಳಿದರು.
ಹೊಸದಾಗಿ ಪಕ್ಷ ಸೇರ್ಪಡೆಯಾಗುವವರನ್ನು ಜಿಲ್ಲಾ ಮಟ್ಟದಲ್ಲಿಯೇ ಸೇರಿಸಿಕೊಳ್ಳಲು ಚಿಂತನೆ ನಡೆಯಲಾಗಿದೆ. ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದರು.
ಧೃವೀಕರಣ:
ಈ ವೇಳೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಪರಿಣಾಮ ಬೀರಿದೆ. ಐದು ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಎಲ್ಲರೂ ಹೇಳುತ್ತಿದ್ದರೂ, ನಿರೀಕ್ಷೆ ಮೀರಿ ಸರ್ಕಾರ ಭರವಸೆಗಳನ್ನು ಈಡೇರಿಸಿದೆ. ಇದು ರಾಷ್ಟ್ರಕ್ಕೆ ಮಾದರಿ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಭರವಸೆಗಳಂತಹ ಕಾರ್ಯಕ್ರಮಗಳ ಜಾರಿಗೆ ಒತ್ತಡ ಹೆಚ್ಚಿದೆ. ಜೊತೆಯಲ್ಲಿ ಕಾಂಗ್ರೆಸ್ ಮೇಲೆ ಭರವಸೆ ಹೆಚ್ಚುತ್ತಿದೆ ಎಂದು ಹೇಳಿದರು.
ದೇಶದಲ್ಲಿ ರಾಜಕೀಯ ದ್ರುವೀಕರಣವಾಗುತ್ತಿದೆ. ಸದ್ಯಕ್ಕೆ ಘೋಷಣೆಯಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಸೆಮಿಫೈನಲ್ ಆಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಮರಳಲಿದೆ ಎಂದರು.
ರಾಮಣ್ಣ ಲಮಾಣಿ ಬಿಜೆಪಿಯಿಂದ ಎರಡು ಬಾರಿ ಎಂಎಲ್ಎ ಆಗಿದ್ದರು, ಒಮ್ಮೆ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು, ಕಾಂಗ್ರೆಸ್ ತತ್ವಕ್ಕೆ ಬದ್ಧರಾಗಿ ಇಂದು ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದರು.