ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಸಾಕಷ್ಟು ಶ್ರಮವಹಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೈಕಮಾಂಡ್ ಅಧಿಕಾರ ಹಂಚಿಕೆ ಮಾಡಿದೆ.
ತಲಾ ಎರಡುವರೆ ವರ್ಷಗಳ ಅವಧಿಗೆ ಉಭಯ ನಾಯಕರು ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದಾರೆ ಮೊದಲಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಆನಂತರ ಈಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ.
ಇದು ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ರಾಜಿ ಸೂತ್ರದ ಅನ್ವಯ ರೂಪಗೊಂಡಿರುವ ಅಧಿಕಾರ ಹಂಚಿಕೆಯ ಸೂತ್ರ. ಇದನ್ನು ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬಲವಾಗಿ ನಂಬಿದ್ದಾರೆ
ಈ ನಡುವೆ ಅಸಲಿ ಸಂಗತಿಯೊಂದನ್ನು ಹಿರಿಯ ಮಂತ್ರಿ ಎಂಬಿ ಪಾಟೀಲ್ ಅವರು ಬಹಿರಂಗಪಡಿಸಿದ್ದಾರೆ.
ಅವರು ಹೇಳುವಂತೆ ಈ ರೀತಿಯ ಯಾವುದೇ ಅಧಿಕಾರ ಹಂಚಿಕೆಯ ಸೂತ್ರ ರೂಪಗೊಂಡಿಲ್ಲ ಇದನ್ನು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರೇ ತಿಳಿಸಿದ್ದಾರೆ ಸದ್ಯ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲಿದ್ದಾರೆ ಅಧಿಕಾರ ಹಸ್ತಾಂತರ ಕುರಿತಂತೆ ಯಾವುದೇ ಮಾತುಕತ ನಡೆದಿಲ್ಲ ಎಂದಿದ್ದಾರೆ
ಮೈಸೂರಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಕೆಲಹೊತ್ತು ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಎಂಬಿ ಪಾಟೀಲ್ ಅವರು ಮಾತನಾಡಿದರು.
‘ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಲೋಕಸಭೆ ಚುನಾವಣೆ ಬಳಿಕವೂ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆಯೇ ಆಗಿಲ್ಲ. ಸಿದ್ದರಾಮಯ್ಯ ಐದು ವರ್ಷಗಳೂ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ' ಎಂದು ಹೇಳಿದರು.
ಸಚಿವ ಎಂಬಿ ಪಾಟೀಲ್ ಅವರ ಈ ಹೇಳಿಕೆ ಇದೀಗ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಬಾರಿ ಸಂಚಲನ ಮೂಡಿಸಿದೆ.